SSLCಯಲ್ಲಿ 623 ಅಂಕ ಪಡೆದ ಮಾಗಡಿಯ ಚೈತನ್ಯಗೌಡ
ರಾಮನಗರ, ಏಪ್ರಿಲ್ 30:ಎಸ್ ಎಸ್ಎಲ್ ಸಿ ಫಲಿತಾಂಶ ಇಂದು ಮಂಗಳವಾರ ಪ್ರಕಟವಾಗಿದ್ದು, ರಾಮನಗರ ಜಿಲ್ಲೆ ರಾಜ್ಯಕ್ಕೆ ಎರಡನೇ ಸ್ಥಾನ ಪಡೆದುಕೊಂಡಿದೆ.
ಈ ಬಾರಿ ಹಾಸನ ಜಿಲ್ಲೆ ಪ್ರಥಮ ಸ್ಥಾನ ಗಳಿಸಿದ್ದರೆ, ರಾಮನಗರ ಜಿಲ್ಲೆ ಎರಡನೇ ಸ್ಥಾನ ಗಳಿಸಿದೆ. ಉಡುಪಿ ಜಿಲ್ಲೆ ಐದನೇ ಸ್ಥಾನಕ್ಕೆ ಕುಸಿತ ಕಂಡಿದೆ. ಯಾದಗಿರಿ ಜಿಲ್ಲೆ ಕೊನೆಯ ಸ್ಥಾನದಲ್ಲಿದೆ.
ಜಿಲ್ಲೆಯ ಮಾಗಡಿ ವಾಸವಿ ವಿದ್ಯಾನಿಕೇತನ ಶಾಲೆಯ ವಿದ್ಯಾರ್ಥಿನಿ ಚೈತನ್ಯಗೌಡ ಎಂ.ಜಿ 625ಕ್ಕೆ 623 ಅಂಕ ಪಡೆದುಕೊಂಡಿದ್ದಾರೆ. ಇವರು ವಕೀಲೆ ರವಿಕಲಾ ಹಾಗೂ ಗೋಪಾಲ್ ಗೌಡ ದಂಪತಿಯ ಪುತ್ರಿಯಾಗಿದ್ದಾರೆ.

ಕಾಂಗ್ರೆಸ್ ನ ರಾಜ್ಯ ಮಹಿಳಾ ಘಟಕದ ಮಾಜಿ ಅಧ್ಯಕ್ಷೆ ಕಮಲಮ್ಮ ಅವರ ಮೊಮ್ಮಗಳು ಆಗಿರುವ ಚೈತನ್ಯ ಗೌಡ ಸಾಧನೆಗೆ ಶಾಲೆಯ ಶಿಕ್ಷಕರು, ಪೋಷಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಕಳೆದ ವರ್ಷ 17 ನೇ ಸ್ಥಾನದಲ್ಲಿದ್ದ ರಾಮನಗರ ಜಿಲ್ಲೆ, ಈ ಬಾರಿ ಮೊದಲ ಬಾರಿಗೆ 2 ನೇ ಸ್ಥಾನ ಪಡೆಯುವ ಮೂಲಕ ಉತ್ತಮ ಸಾಧನೆಗೈದಿದೆ.
ಬೆಂಗಳೂರು ದಕ್ಷಿಣ ಜಿಲ್ಲೆ ಆನೇಕಲ್ ತಾಲೂಕಿನ ಸಂತ ಫಿಲೋಮಿನ ಇಂಗ್ಲಿಷ್ ಹೈಸ್ಕೂಲ್ ಸೃಜನ 625 ಅಂಕಗಳೊಂದಿಗೆ ಪ್ರಥಮ ಸ್ಥಾನ ಗಳಿಸಿದ್ದರೆ, ಉತ್ತರ ಕನ್ನಡ ಜಿಲ್ಲೆ ಕುಮಟಾದ ನಾಗಾಂಜಲಿ ಪರಮೇಶ್ವರ್ ನಾಯಕ್ ಎಂಬ ವಿದ್ಯಾರ್ಥಿ ಕೂಡ 625 ಅಂಕ ಗಳಿಸಿ ಮೊದಲನೇ ಸ್ಥಾನದಲ್ಲಿದ್ದಾರೆ.












Click it and Unblock the Notifications