Channapatna By Election: ಒಕ್ಕಲಿಗ ನಾಯಕರ ಪ್ರತಿಷ್ಠೆಯ ಕದನ
ಚನ್ನಪಟ್ಟಣ ಉಪ ಚುನಾವಣೆ ಹಲವು ಕಾರಣಗಳಿಂದ ಹೆಚ್ಚಿನ ಮಹತ್ವ ಪಡೆದುಕೊಂಡಿದೆ. ರಾಜ್ಯದಲ್ಲಿ ಮೂರು ವಿಧಾನಸಭಾ ಕ್ಷೇತ್ರಗಳಲ್ಲಿ ಉಪಚುನಾವಣೆ ನಡೆದಿದ್ದರು, ಚನ್ನಪಟ್ಟಣದಲ್ಲಿ ಗೆಲುವಿಗಾಗಿ ಭಾರಿ ಪೈಪೋಟಿ ನಡೆಯುತ್ತಿದೆ. ಜೆಡಿಎಸ್ ನಾಯಕ ಹೆಚ್ಡಿ ಕುಮಾರಸ್ವಾಮಿ ಲೋಕಸಭಾ ಚುನಾವಣೆಯಲ್ಲಿ ಗೆಲುವು ಸಾಧಿಸಿದ ಬಳಿಕ ಚನ್ನಪಟ್ಟಣ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರಿಂದ ಇಲ್ಲಿ ಉಪಚುನಾವಣೆ ನಡೆದಿದೆ.
ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿ ಅಧಿಕಾರಕ್ಕೆ ಬಂದಿರುವ ಕಾಂಗ್ರೆಸ್ಗೆ ಈ ಉಪಚುನಾವಣೆ ಪ್ರತಿಷ್ಠೆಯ ವಿಚಾರವಾಗಿದೆ. ಇದು ಕಾಂಗ್ರೆಸ್ ಮತ್ತು ಜೆಡಿಎಸ್ ನಡುವಿನ ಹೋರಾಟ ಎನ್ನುವುದಕ್ಕಿಂತ ಒಕ್ಕಲಿಗರ ನಾಯಕರ ನಡುವಿನ ಪ್ರತಿಷ್ಠೆಯ ಕದನವಾಗಿದೆ.

ಹೆಚ್ಡಿ ಕುಮಾರಸ್ವಾಮಿ vs ಡಿಕೆ ಶಿವಕುಮಾರ್
ಚನ್ನಪಟ್ಟಣದಲ್ಲಿ ಒಕ್ಕಲಿಗರ ಪ್ರಾಬಲ್ಯ ಹೆಚ್ಚಾಗಿದೆ. ಇಲ್ಲಿ ಗೆದ್ದರೆ ಒಕ್ಕಲಿಗರ ಸಮುದಾಯದ ಪ್ರಶ್ನಾತೀತ ನಾಯಕ ಎನ್ನುವ ಹೆಗ್ಗಳಿಕೆ ಕೂಡ ಸಿಗುತ್ತದೆ. ಇದೇ ವಿಚಾರದಿಂದ ಚನ್ನಪಟ್ಟಣ ಬರೀ ಸೊಲು ಗೆಲುವಿಗಾಗಿ ನಡೆಯುತ್ತಿರುವ ಚುನಾವಣೆಯಾಗಿ ಉಳಿದಿಲ್ಲ, ಅದು ಇಬ್ಬರು ನಾಯಕರ ನಡುವಿನ ಪ್ರತಿಷ್ಠೆಯ ಕದನ. ಇಬ್ಬರಿಗೂ ರಾಷ್ಟ್ರ ಮಟ್ಟದಲ್ಲಿ ತಮ್ಮ ಸಾಮರ್ಥ್ಯ ಸಾಬೀತುಪಡಿಸಬೇಕಾದ ಪರೀಕ್ಷೆ. ಇಲ್ಲಿ ಗೆದ್ದರೆ ಎನ್ಡಿಎ ಸರ್ಕಾರದಲ್ಲಿ ಹೆಚ್ಡಿ ಕುಮಾರಸ್ವಾಮಿಗೆ ತಮ್ಮ ವರ್ಚಸ್ಸು ಹೆಚ್ಚಿಸಿಕೊಳ್ಳು ತವಕ ಇದ್ದರೆ, ಸಿಎಂ ಸ್ಥಾನದ ಮೇಲೆ ಕಣ್ಣಿಟ್ಟಿರುವ ಡಿಕೆ ಶಿವಕುಮಾರ್ ಅವರಿಗೆ ಹೈಕಮಾಂಡ್ ಬಳಿ ಮತ್ತೊಮ್ಮೆ ತಮ್ಮ ನಾಯಕತ್ವ ಸಾಬೀತುಪಡಿಸಿಕೊಳ್ಳುವ ಅವಕಾಶವಾಗಿದೆ.
ಬಿಜೆಪಿಯಲ್ಲಿದ್ದ ಸಿಪಿ ಯೋಗೇಶ್ವರ್ ಅವರಿಗೆ ಟಿಕೆಟ್ ಸಿಗದ ಕಾರಣ ಕಾಂಗ್ರೆಸ್ ಅವರನ್ನು ಸೆಳೆಯುವಲ್ಲಿ ಯಶಸ್ವಿಯಾಯಿತು. ಕಾಂಗ್ರೆಸ್ನಿಂದ ಟಿಕೆಟ್ ಪಡೆದ ಸಿಪಿ ಯೋಗೇಶ್ವರ್ ಎನ್ಡಿಎ ಅಭ್ಯರ್ಥಿ ವಿರುದ್ಧ ತೊಡೆ ತಟ್ಟಿದರು. ಒಕ್ಕಲಿಗ ಮತದಾರರ ಪ್ರಾಬಲ್ಯವಿರುವ ಕ್ಷೇತ್ರದಲ್ಲಿ ಇಬ್ಬರು ಒಕ್ಕಲಿಗ ಅಭ್ಯರ್ಥಿಗಳು ಕಣಕ್ಕಿಳಿದಿದ್ದು ಸ್ಪರ್ಧೆ ಮತ್ತಷ್ಟು ರೋಚಕವಾಗಿದೆ.
'ಕರಿಯ ಕುಮಾರಸ್ವಾಮಿ' ಎಂದು ಜಮೀರ್ ಅಹ್ಮದ್ ಹೇಳಿಕೆ ನೀಡಿದ್ದು ಕಾಂಗ್ರೆಸ್ಗೆ ಹಿನ್ನಡೆಯಾಗುವ ಭಯಕ್ಕೆ ಕಾರಣವಾಗಿತ್ತು. ಆದರೂ ಜೆಡಿಎಸ್ ಇದನ್ನು ಸಮರ್ಥವಾಗಿ ಬಳಸಿಕೊಳ್ಳುವಲ್ಲಿ ವಿಫಲವಾಯಿತೇ ಎನ್ನುವ ಅನುಮಾನ ಕೂಡ ಕಾಡುತ್ತಿದೆ. ಉಪಚುನಾವಣೆಯಲ್ಲಿ ಹಣ, ಹೆಂಡದ ಹೊಳೆಯೇ ಹರಿದಿದೆ, ಲಕ್ಷಾಂತರ ಲೀಟರ್ ಮದ್ಯವನ್ನು ಚುನಾವಣಾ ಆಯೋಗ ವಶಪಡಿಸಿಕೊಂಡಿತ್ತು, ದೇವರ ಹೆಸರಿನಲ್ಲಿ ಪ್ರಮಾಣ ಮಾಡಿಸಿ ಹಣ ಹಂಚಲಾಗಿದೆ ಎನ್ನುವ ಆರೋಪ ಕೂಡ ಕೇಳಿ ಬಂದಿತ್ತು.
ಲೋಕಸಭಾ ಚುನಾವಣೆ ಮತ್ತು ವಿಧಾನಸಭಾ ಚುನಾವಣೆಯಲ್ಲಿ ಈಗಾಗಲೇ ನಿಖಿಲ್ ಕುಮಾರಸ್ವಾಮಿ ಸೋಲು ಕಂಡಿದ್ದಾರೆ. ಮೂರನೇ ಬಾರಿಗೆ ಅದೃಷ್ಟ ಪರೀಕ್ಷೆಗೆ ಇಳಿದಿದ್ದು, ಮಗನನ್ನು ಗೆಲ್ಲಿಸಲೇಬೇಕೆಂದು ಹೆಚ್ಡಿ ಕುಮಾರಸ್ವಾಮಿ ಪಣತೊಟ್ಟಿದ್ದಾರೆ. ಆದರೆ ಮತದಾರ ಯಾರಿಗೆ ಮಣೆ ಹಾಕುತ್ತಾನೆ ಎನ್ನುವುದು ಮಧ್ಯಾಹ್ನದ ವೇಳೆಗೆ ತಿಳಿಯಲಿದೆ.












Click it and Unblock the Notifications