Channapatna By Election: ಚನ್ನಪಟ್ಟಣದಲ್ಲಿ ನಿಖಿಲ್ ಕುಮಾರಸ್ವಾಮಿ ಪ್ರವಾಸ ಏಕೆ?
ರಾಮನಗರ, ಆಗಸ್ಟ್ 26: ಚನ್ನಪಟ್ಟಣ ಕ್ಷೇತ್ರದ ಉಪ ಚುನಾವಣೆ ಕುತೂಹಲಕ್ಕೆ ಕಾರಣವಾಗಿದೆ. ಎಚ್. ಡಿ. ಕುಮಾರಸ್ವಾಮಿ ಮತ್ತು ಡಿ. ಕೆ. ಶಿವಕುಮಾರ್ ತವರು ಜಿಲ್ಲೆಯಲ್ಲಿ ನಡೆಯುತ್ತಿರುವ ಉಪ ಚುನಾವಣೆ ಪ್ರತಿಷ್ಠೆಗೆ ಕಾರಣವಾಗಿದೆ. ಚನ್ನಪಟ್ಟಣ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ರಾಷ್ಟ್ರ ರಾಜಕಾರಣಕ್ಕೆ ಹೋದ ಕುಮಾರಸ್ವಾಮಿ, ಕ್ಷೇತ್ರದ ಮೇಲಿನ ಹಿಡಿತವನ್ನು ಬಿಟ್ಟು ಕೊಡಲು ತಯಾರಿಲ್ಲ. ಆದ್ದರಿಂದ ಉಪ ಚುನಾವಣೆಗೆ ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿ ಯಾರು? ಎಂಬುದು ಚರ್ಚೆಗೆ ಕಾರಣವಾಗಿದೆ.
ಚನ್ನಪಟ್ಟಣ ಉಪ ಚುನಾವಣೆ ಸಂದರ್ಭದಲ್ಲಿಯೇ ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಕ್ಷೇತ್ರದಲ್ಲಿ ಸಕ್ರಿಯರಾಗಿದ್ದಾರೆ. ಮೈತ್ರಿಕೂಟದ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಆಗಬಹುದು ಎಂಬ ಚರ್ಚೆಗಳ ನಡುವಯೇ, ಅವರು ಚನ್ನಪಟ್ಟಣ ಕ್ಷೇತ್ರದಲ್ಲಿ ಪ್ರವಾಸ ಮಾಡುತ್ತಿರುವುದು ಪಕ್ಷದ ಕಾರ್ಯಕರ್ತರ ಚುನಾವಣಾ ಉತ್ಸಾಹವನ್ನು ಹೆಚ್ಚಿಸಿದೆ.

ಬಿಜೆಪಿ-ಜೆಡಿಎಸ್ ಮೈತ್ರಿಕೂಟದ ಟಿಕೆಟ್ ಬಿಜೆಪಿ ನಾಯಕ, ಎಂಎಲ್ಸಿ ಸಿ. ಪಿ. ಯೋಗೇಶ್ವರಗೆ ಸಿಗಲಿದೆ ಎಂಬ ಚರ್ಚೆಯೂ ಇದೆ. ಆದರೆ ಸಿ. ಪಿ. ಯೋಗೇಶ್ವರ ಬೆಂಬಲಿಸಲು ಜೆಡಿಎಸ್ ಕಾರ್ಯಕರ್ತರು ತಯಾರಿಲ್ಲ. ಆದ್ದರಿಂದ ನಿಖಿಲ್ ಕ್ಷೇತ್ರದ ಪ್ರವಾಸ ಪಕ್ಷದ ಕಾರ್ಯಕರ್ತರಲ್ಲಿ ಅವರೇ ಅಭ್ಯರ್ಥಿ? ಎಂಬ ಲೆಕ್ಕಾಚಾರವನ್ನು ಹಾಕುವಂತೆ ಮಾಡಿದೆ.
ನಿಖಿಲ್ ಕುಮಾರಸ್ವಾಮಿ ಪ್ರವಾಸ: ಕಳೆದ ಎರಡು ದಿನಗಳ ಕಾಲ ನಿಖಿಲ್ ಕುಮಾರಸ್ವಾಮಿ ಚನ್ನಪಟ್ಟಣದ ವಿವಿಧ ಕಡೆ ಪ್ರವಾಸ ಮಾಡಿದ್ದಾರೆ. ಮೊದಲು ಅವರು ಕೆಂಗಲ್ ಶ್ರೀ ಆಂಜನೇಯ ಸ್ವಾಮಿ ದೇವಸ್ಥಾನಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದರು. ಬಳಿಕ ಕ್ಷೇತ್ರದ ಹೊಂಗನೂರು ಜಿಲ್ಲಾ ಪಂಚಾಯಿತಿಯ ವಂದರಾಗುಪ್ಪೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗ್ರಾಮಗಳಿಗೆ ಭೇಟಿ ನೀಡಿದ್ದಾರೆ. ಗ್ರಾಮಸ್ಥರೊಂದಿಗೆ ಕುಂದು ಕೊರತೆಗಳ ಬಗ್ಗೆ ಚರ್ಚಿಸಿದ್ದಾರೆ.
ಬೇವೂರು ಜಿಲ್ಲಾ ಪಂಚಾಯಿತಿಯ ಮಾಕಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗ್ರಾಮಗಳಿಗೆ ಭೇಟಿ ನೀಡಿದ ನಿಖಿಲ್ ಕುಮಾರಸ್ವಾಮಿ ಜನರೊಂದಿಗೆ ಬೆರೆತು ಕುಂದು ಕೊರತೆಗಳನ್ನು ಆಲಿಸಿದರು. ಇದೇ ಸಂದರ್ಭದಲ್ಲಿ ಅನೇಕ ಸ್ಥಳೀಯ ಮುಖಂಡರು ಹಾಗೂ ಕಾರ್ಯಕರ್ತರ ಜೊತೆಯೂ ಅವರು ಚರ್ಚೆಯನ್ನು ನಡೆಸಿದ್ದಾರೆ.
ನಿಖಿಲ್ ಕುಮಾರಸ್ವಾಮಿ ಪಕ್ಷದ ಕಾರ್ಯಕರ್ತರು, ಸ್ಥಳೀಯ ಮುಖಂಡರ ಜೊತೆ ಬೇವೂರು ಜಿಲ್ಲಾ ಪಂಚಾಯಿತಿಯ ದಶವಾರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗ್ರಾಮಗಳಿಗೆ ಭೇಟಿ ನೀಡಿದರು. ಜನರೊಂದಿಗೆ ಬೆರೆತು ಕುಂದು ಕೊರತೆಗಳನ್ನು ಆಲಿಸಿದರು. ಕೂರಣಗೆರೆಯಲ್ಲಿರುವ ಯೋಗ ನರಸಿಂಹಸ್ವಾಮಿ ಬೆಟ್ಟಕ್ಕೆ ಭೇಟಿ ನೀಡಿ ಶ್ರೀ ನರಸಿಂಹಸ್ವಾಮಿಗೆ ವಿಶೇಷ ಪೂಜೆ ಸಲ್ಲಿಸಿದರು.
ಬಿಜೆಪಿ-ಜೆಡಿಎಸ್ ಮೈತ್ರಿಕೂಟದ ಟಿಕೆಟ್ ಸಿ. ಪಿ. ಯೋಗೇಶ್ವರ ಕೈ ತಪ್ಪಿದರೆ ಮುಂದೇನು?. ಚನ್ನಪಟ್ಟಣದಲ್ಲಿ ಸಿ. ಪಿ. ಯೋಗೇಶ್ವರ ಪಕ್ಷೇತರ ಅಭ್ಯರ್ಥಿಯಾಗಿ ನಿಂತರೆ ಉಪ ಚುನಾವಣೆ ಕದನ ಇನ್ನಷ್ಟು ರಂಗೇರಲಿದೆ. ಕ್ಷೇತ್ರದಲ್ಲಿ ಪಕ್ಷವನ್ನೂ ಮೀರಿ ಸಿ. ಪಿ. ಯೋಗೇಶ್ವರ ಪ್ರಭಾವ ಹೊಂದಿದ್ದಾರೆ.
ಮೈತ್ರಿಕೂಟದ ಟಿಕೆಟ್ ಕೈತಪ್ಪಿ ಸಿ. ಪಿ. ಯೋಗೇಶ್ವರ ಪಕ್ಷೇತರ ಅಭ್ಯರ್ಥಿಯಾದರೆ, ನಿಖಿಲ್ ಕುಮಾರಸ್ವಾಮಿ ಮೈತ್ರಿಕೂಟದ ಅಭ್ಯರ್ಥಿಯಾಗಿ, ಕಾಂಗ್ರೆಸ್ನಿಂದ ಡಿ. ಕೆ. ಶಿವಕುಮಾರ್ ಅಭ್ಯರ್ಥಿಯಾಗಿ ಕಣಕ್ಕಿಳಿದರೆ ಚನ್ನಪಟ್ಟಣದಲ್ಲಿ ತ್ರಿಕೋನ ಸ್ಪರ್ಧೆ ನಡೆಯಲಿದೆ.
ಸಿ. ಪಿ. ಯೋಗೇಶ್ವರ ಟಿಕೆಟ್ ಪಡೆಯಲು ದೆಹಲಿಯಲ್ಲಿ ಪ್ರಯತ್ನ ನಡೆಸುತ್ತಿದ್ದಾರೆ. ಆದರೆ ಬಿಜೆಪಿ ನಾಯಕರು ಕೇಂದ್ರ ಸಚಿವ ಎಚ್. ಡಿ. ಕುಮಾರಸ್ವಾಮಿ ಒಪ್ಪಿಗೆ ಇಲ್ಲದೇ ಅಭ್ಯರ್ಥಿಯನ್ನು ಅಂತಿಮಗೊಳಿಸುವುದಿಲ್ಲ. ಕುಮಾರಸ್ವಾಮಿ ಬಿಜೆಪಿ ಅಭ್ಯರ್ಥಿ ಕಣಕ್ಕಿಳಿಯಲು ಒಪ್ಪಿಗೆ ನೀಡಲಿದ್ದಾರೆಯೇ? ಕಾದು ನೋಡಬೇಕಿದೆ.












Click it and Unblock the Notifications