ರಾಮನಗರ ಉಪಚುನಾವಣೆ ಜೆಡಿಎಸ್ ಅಭ್ಯರ್ಥಿ ಬಗ್ಗೆ ಎಚ್ಡಿಕೆ ಪ್ರತಿಕ್ರಿಯೆ
Recommended Video

ಬೆಂಗಳೂರು, ಜೂನ್ 11: ರಾಮನಗರ ಉಪ ಚುನಾವಣೆಗೆ ಜೆಡಿಎಸ್ ಅಭ್ಯರ್ಥಿಯಾಗಿ ಕುಮಾರಸ್ವಾಮಿ ಅವರ ಮಡದಿ ಅನಿತಾ ಕುಮಾರಸ್ವಾಮಿ ಹಾಗೂ ಪುತ್ರ ನಿಖಿಲ್ ಕುಮಾರಸ್ವಾಮಿ ಅವರ ಹೆಸರು ಕೇಳಿ ಬರುತ್ತಿದೆ. ಈ ಬಗ್ಗೆ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಪ್ರತಿಕ್ರಿಯೆ ನೀಡಿದ್ದಾರೆ.
ಅನಿತಾ ಕುಮಾರಸ್ವಾಮಿ ಅಥವಾ ನಿಖಿಲ್ ಕುಮಾರಸ್ವಾಮಿ ಅವರಿಗೆ ಟಿಕೆಟ್ ನೀಡಬೇಕು ಎಂಬ ಬೇಡಿಕೆ ಕಾರ್ಯಕರ್ತರಿಂದ ಬಂದಿರುವುದು ನಿಜ ಆದರೆ ಈ ಬಗ್ಗೆ ಇನ್ನೂ ಅಧಿಕೃತ ನಿರ್ಣಯ ಕೈಗೊಂಡಿಲ್ಲ ಎಂದಿದ್ದಾರೆ ಕುಮಾರಸ್ವಾಮಿ.
ಬೆಂಗಳೂರಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾರ್ಯಕರ್ತರ ಮನ ಅರಿತು ಅಭ್ಯರ್ಥಿಗಳನ್ನು ಘೋಷಿಸಲಾಗುತ್ತದೆ ಎಂದಿದ್ದಾರೆ ಆ ಮೂಲಕ ಅನಿತಾ ಅಥವಾ ನಿಖಿಲ್ ಕುಮಾರಸ್ವಾಮಿ ಇಬ್ಬರಲ್ಲಿ ಒಬ್ಬರಿಗೆ ಟಿಕೆಟ್ ನೀಡುವ ಬಗ್ಗೆ ಸುಳಿವು ನೀಡಿದ್ದಾರೆ.

ರಾಮನಗರ ಉಪಚುನಾವಣೆ ದಿನಾಂಕ ಇನ್ನೂ ನಿಗದಿಯಾಗಿಲ್ಲ, ದಿನಾಂಕ ನಿಗದಿಯಾದ ಬಳಿಕ ಅಭ್ಯರ್ಥಿ ಘೋಷಣೆ ಮಾಡಲಾಗುತ್ತದೆ ಎಂದಿದ್ದಾರೆ. ರಾಮನಗರ ಮತ್ತು ಚನ್ನಪಟ್ಟಣ ಎರಡೂ ಕ್ಷೇತ್ರದಲ್ಲಿ ಗೆಲವು ಸಾಧಿಸಿದ್ದ ಕಾರಣ ರಾಮನಗರಕ್ಕೆ ಕುಮಾರಸ್ವಾಮಿ ಅವರು ರಾಜಿನಾಮೆ ನೀಡಿದ್ದರು.
ದೇವೇಗೌಡ ಅವರ ಕುಟುಂಬಕ್ಕೆ ಎರಡು ಅಭ್ಯರ್ಥಿಗಳು ಮಾತ್ರ ಎಂಬ ನಿಯಮ ಹೇರಿಕೊಂಡು ಕುಮಾರಸ್ವಾಮಿ ಹಾಗೂ ರೇವಣ್ಣ ಇಬ್ಬರು ಮಾತ್ರವೇ ಚುನಾವಣೆಗೆ ಸ್ಪರ್ಧಿಸಿದ್ದರು. ರೇವಣ್ಣ ಪುತ್ರ ಪ್ರಜ್ವಲ್ ರೇವಣ್ಣ ಟಿಕೆಟ್ ಕೇಳಿದ್ದರೂ ಕೂಡ ಇದೇ ಕಾರಣಕ್ಕೆ ಟಿಕೆಟ್ ನೀಡಿರಲಿಲ್ಲ.
ಚುನಾವಣೆಯಲ್ಲಿ ಸೋತಿರುವ ಜೆಡಿಎಸ್ ಹಿರಿಯ ಮುಖಂಡ ವೈಎಸ್ವಿ ದತ್ತ ಅಥವಾ ಮೇಲುಕೋಟೆಯಲ್ಲಿ ಸೋಲನ್ನನುಭವಿಸಿರುವ ದರ್ಶನ್ ಪುಟ್ಟಣ್ಣಯ್ಯ ಅವರಲ್ಲಿ ಯಾರಾದರೂ ಒಬ್ಬರಿಗೆ ರಾಮನಗರದ ಟಿಕೆಟ್ ನೀಡಿ ಗೆಲ್ಲಿಸಿಕೊಂಡು ಬರಬೇಕು ಎಂಬ ಒತ್ತಾಯವೂ ಸಾಮಾಜಿಕ ಜಾಲತಾಣದಲ್ಲಿದೆ.
ದೇವೇಗೌಡರು ಹಾಗೂ ಕುಮಾರಸ್ವಾಮಿ ಅವರ ನಿರ್ಣಯವೇ ಅಂತಿಮವಾಗಲಿದ್ದು, ದೇವೇಗೌಡರ ಕುಟುಂಬದ ಮತ್ತೊಬ್ಬರು ರಾಜಕಾರಣಕ್ಕೆ ಬರುತ್ತಾರೆಯೇ ಅಥವಾ ಕುಟುಂಬ ರಾಜಕಾರಣದ ಹಣೆಪಟ್ಟಿ ಕಳೆದುಕೊಳ್ಳಲು ಬೇರೆ ಯಾರಿಗಾದರೂ ಟಿಕೆಟ್ ನೀಡುತ್ತಾರೆಯೇ ಕಾದು ನೋಡಬೇಕಿದೆ.












Click it and Unblock the Notifications