ಡಬಲ್ ಇಂಜಿನ್ ಡ್ಯಾಂ ಕಟ್ಟುವಂತೆ ಒತ್ತಾಯಿಸಿ ಪಾದಯಾತ್ರೆ; ಡಿಕೆಶಿ
ರಾಮನಗರ, ಫೆಬ್ರವರಿ 27; ಮೇಕೆದಾಟು ಯೋಜನೆ ಜಾರಿಗೊಳಿಸುವಂತೆ ಒತ್ತಾಯಿಸಿ ಕರ್ನಾಟಕ ಕಾಂಗ್ರೆಸ್ 2ನೇ ಹಂತದ ಪಾದಯಾತ್ರೆ ಆರಂಭಿಸಿದೆ. ಜನವರಲ್ಲಿ 4 ದಿನ ನಡೆದ ಪಾದಯಾತ್ರೆ ಕೋವಿಡ್ ನಿರ್ಬಂಧದ ಕಾರಣ ರಾಮನಗರದಲ್ಲಿ ಸ್ಥಗಿತಗೊಂಡಿತ್ತು.
ಭಾನುವಾರ ರಾಮನಗರದಲ್ಲಿ ವಂದೇ ಮಾತರಂ, ನಾಡಗೀತೆ, ರೈತಗೀತೆಯ ನಂತರ ಹಲವು ಕಾಂಗ್ರೆಸ್ ನಾಯಕರು ನಗಾರಿ ಬಾರಿಸುವ ಮೂಲಕ ಮೇಕೆದಾಟು ಪಾದಯಾತ್ರೆ ಉದ್ಘಾಟನೆ ಮಾಡಿದರು. ಬೆಂಗಳೂರಿನ ನ್ಯಾಷನಲ್ ಕಾಲೇಜು ಮೈದಾನದ ತನಕ ಪಾದಯಾತ್ರೆ ನಡೆಯಲಿದೆ.
ಎರಡನೇ ಹಂತದ ಮೇಕೆದಾಟು ಪಾದಯಾತ್ರೆ ಉದ್ಘಾಟನೆಗೂ ಮುನ್ನ ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ್ ಆದಿ ಚುಂಚನಗಿರಿ ಶಾಖಾ ಮಠದ ಶ್ರೀ ಅನ್ನದಾನೇಶ್ವರ ಶ್ರೀಗಳ ಆಶಿರ್ವಾದ ಪಡೆದರು. ನಗರದ ಚಾಮುಂಡೇಶ್ವರಿ ದೇವಾಲಯ ಹಾಗೂ ದರ್ಗಾದಲ್ಲಿ ಪ್ರಾರ್ಥನೆ ಸಲ್ಲಿಸಿದರು.
ಪಾದಯಾತ್ರೆಗೆ ಚಾಲನೆ ನೀಡಿದ ವೇದಿಕೆ ಕಾರ್ಯಕ್ರಮದಲ್ಲಿ ಕರ್ನಾಟಕದ ಕಾಂಗ್ರೆಸ್ ಉಸ್ತುವಾರಿ, ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೇವಾಲ, ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ್, ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಬಿ. ಕೆ. ಹರಿಪ್ರಸಾದ್ ಸೇರಿದಂತೆ ಹಲವು ನಾಯಕರಿದ್ದರು.

ಮೇಕೆದಾಟು ಪಾದಯಾತ್ರೆ ಆರಂಭ
ಪಾದಯಾತ್ರೆಗೆ ಚಾಲನೆ ನೀಡಿದ ಬಳಿಕ ಮಾತನಾಡಿದ ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ್, "ಇದೊಂದು ಐತಿಹಾಸಿಕ ನಡಿಗೆ. ಸಾಧನೆ ಇಲ್ಲದೆ ಸತ್ತರೆ ಸಾವಿಗೆ ಅಪಮಾನ, ಆದರ್ಶ ಇಲ್ಲದೆ ಬದುಕಿದರೆ ಬದುಕಿಗೆ ಅಪಮಾನ. ಅದಕ್ಕಾಗಿ ನಮ್ಮ ಪಕ್ಷದ ಸಾಧನೆ ಹಾಗೂ ಇತಿಹಾಸವನ್ನು ಮನದಲ್ಲಿಟ್ಟುಕೊಂಡು ನಾವು ಇಂದು ಹೋರಾಟ ಆರಂಭಿಸುತ್ತಿದ್ದೇವೆ" ಎಂದರು.

ಟೀಕೆಗಳಿಗೆ ತಲೆ ಕೆಡಿಸಿಕೊಳ್ಳಲ್ಲ
"ಬಿಜೆಪಿ ಹಾಗೂ ಜೆಡಿಎಸ್ ನಾಯಕರು ನಮ್ಮ ಹೋರಾಟದ ಬಗ್ಗೆ ಟೀಕೆ ಮಾಡುತ್ತಿದ್ದಾರೆ. ನಾನು ಆ ಬಗ್ಗೆ ತಲೆಕೆಡಿಸಿಕೊಳ್ಳುವುದಿಲ್ಲ. ನೀರಿಗಾಗಿ ನಡಿಗೆ ಈ ಮೇಕೆದಾಟು ಪಾದಯಾತ್ರೆಯನ್ನು ಆರಂಭಿಸಿದ್ದೇವೆ. ಇದು ನಮ್ಮ ಹೋರಾಟ ಅಲ್ಲ, ರಾಜ್ಯದ ಜನರ ಬದುಕಿಗಾಗಿ ಹೋರಾಟ, ಬೆಂಗಳೂರು ಜನರ ಕುಡಿಯುವ ನೀರಿಗಾಗಿ ಹೋರಾಟ, ಕಾವೇರಿ ಜಲಾನಯನ ಪ್ರದೇಶದ ರೈತರು, ಜನರ ಹಿತಕ್ಕಾಗಿ ಹೋರಾಟ. ಅದಕ್ಕಾಗಿ ಐದು ದಿನ ಬಿಸಿಲಿದ್ದರೂ ನಾವು ಹೆಜ್ಜೆ ಹಾಕೋಣ" ಎಂದು ಡಿ. ಕೆ. ಶಿವಕುಮಾರ್ ಕರೆ ನೀಡಿದರು.

ಯೋಜನೆಯನ್ನು ಜಾರಿಗೆ ತನ್ನಿ
"ಈ ಹೋರಾಟವನ್ನು ಕಾಂಗ್ರೆಸ್, ಜೆಡಿಎಸ್, ಬಿಜೆಪಿ ಎಲ್ಲರೂ ಸೇರಿ ದೆಹಲಿಯ ಸಂಸತ್ ಭವನದ ಎದುರು ಧರಣಿ ಮೂಲಕ ಮಾಡಿದ್ದೆವು. ಈಗ ಅದೇ ಯೋಜನೆಯನ್ನು ಕಾರ್ಯರೂಪಕ್ಕೆ ತನ್ನಿ ಎಂದು ಪಾದಯಾತ್ರೆ ಮಾಡುತ್ತಿದ್ದೇವೆ" ಎಂದು ಡಿ. ಕೆ. ಶಿವಕುಮಾರ್ ಹೇಳಿದರು.

ಗುದ್ದಲಿ ಪೂಜೆ ಕಾರ್ಯಕ್ರಮಕ್ಕೆ ಬೆಂಬಲ ನೀಡುತ್ತೇವೆ
"ಬಿಜೆಪಿಯ ಡಬಲ್ ಇಂಜಿನ್ ಸರ್ಕಾರ 2 ದಿನದಲ್ಲಿ ಪರಿಸರ ಇಲಾಖೆ ಅನುಪತಿ ಪಡೆದು ಯೋಜನೆ ಆರಂಭಿಸಬಹುದು. ನಾವು ಆಗ ಗುದ್ದಲಿ ಪೂಜೆ ಕಾರ್ಯಕ್ರಮಕ್ಕೆ ಇದೇ ರೀತಿ ಬಂದು ನಿಮಗೆ ಬೆಂಬಲ ಸೂಚಿಸುತ್ತೇವೆ. ಇಂದು ಈ ಪಾದಯಾತ್ರೆ ಆರಂಭಿಸಿ, ಮಾರ್ಚ್ 3ರಂದು ಬೆಂಗಳೂರಿನ ಬಸವನಗುಡಿ ನ್ಯಾಷನಲ್ ಕಾಲೇಜು ಮೈದಾನದಲ್ಲಿ ಎಲ್ಲರೂ ಸೇರಿ ಪಾಂಚಜನ್ಯ ಮೊಳಗಿಸೋಣ" ಎಂದು ಡಿ. ಕೆ. ಶಿವಕುಮಾರ್ ಹೇಳಿದರು.












Click it and Unblock the Notifications