'ತಾಕತ್ ಇದ್ದರೆ ನನ್ನ ಸೋದರನ ಜಿ.ಪಂ ಅಧ್ಯಕ್ಷ ಸ್ಥಾನದಿಂದ ಇಳಿಸಲಿ'
ರಾಮನಗರ, ಫೆಬ್ರವರಿ 15: ಇಲ್ಲಿನ ಜಿಲ್ಲಾ ಪಂಚಾಯಿತಿ ಅಧ್ಯಕ್ಷರು ಕಾಂಗ್ರೆಸ್ ಪಕ್ಷದ ಒಳ ಒಪ್ಪಂದದಂತೆ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಲಿಲ್ಲ. ಬದಲಿಗೆ ಜಿಲ್ಲಾ ಉಸ್ತುವಾರಿ ಸಚಿವರ ಮಾತಿಗೆ ಮನ್ನಣೆ ನೀಡಿದ್ದರಿಂದ ಅಧ್ಯಕ್ಷರು ಮತ್ತು ಸದಸ್ಯರ ನಡುವೆ ತಿಕ್ಕಾಟ ನಡೆಯುತ್ತಿದೆ.
ಚನ್ನಪಟ್ಟಣ ಶಾಸಕ ಸಿ.ಪಿ.ಯೋಗೇಶ್ವರ್ ಸೋದರ- ಜಿಲ್ಲಾ ಪಂಚಾಯಿತಿ ಅದ್ಯಕ್ಷ ಸಿ.ಪಿ.ರಾಜೇಶ್ ಅವರು ಪಕ್ಷ ವಿರೋಧಿ ಚಟುವಟಿಕೆಯಲ್ಲಿ ತೊಡಗಿದ್ದಾರೆ. ಅವರು ರಾಜೀನಾಮೆ ನೀಡಬೇಕು ಎಂದು ಕಾಂಗ್ರೆಸ್ ಹಾಗೂ ಜೆಡಿಎಸ್ ನ ಜಿಲ್ಲಾ ಪಂಚಾಯಿತಿ ಸದಸ್ಯರು ಪಟ್ಟು ಹಿಡಿದಿದ್ದಾರೆ.
ಬೊಂಬೆ ನಾಡಲ್ಲಿ ಯೋಗೇಶ್ವರ್ ಶಕ್ತಿಪ್ರದರ್ಶನಕ್ಕೆ ದಂಗಾಗಲಿದೆಯಾ ಕಾಂಗ್ರೆಸ್?!
ರಾಮನಗರ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಬುಧವಾರ ನಡೆಯಬೇಕಿದ್ದ ಸಾಮಾನ್ಯ ಸಭೆಯನ್ನು ಎರಡೂ ಪಕ್ಷಗಳ ಸದಸ್ಯರು ಬಹಿಷ್ಕರಿಸಿದರು. ಅಧ್ಯಕ್ಷ ಸಿ.ಪಿ ರಾಜೇಶ್ರನ್ನು ತರಾಟೆಗೆ ತೆಗೆದುಕೊಂಡ ಸದಸ್ಯರು ರಾಜೀನಾಮೆ ನೀಡುವಂತೆ ಆಗ್ರಹಿಸಿದರು. ಕಾಂಗ್ರೆಸ್ ನಿಂದ ಗೆಲುವು ಸಾಧಿಸಿ, ಜಿಲ್ಲಾ ಪಂಚಾಯಿತಿ ಅಧ್ಯಕ್ಷ ಸ್ಥಾನ ಪಡೆದಿದ್ದು, ಪಕ್ಷ ವಿರೋಧಿ ಚಟುವಟಿಕೆಯಲ್ಲಿ ತೊಡಗಿದ್ದಾರೆ ಎಂದು ಆರೋಪಿಸಿದರು.
ಅಲ್ಲದೇ ಸರಕಾರಿ ಕಾರ್ಯಕ್ರಮದಲ್ಲಿ ಭಾಗವಹಿಸದೆ ಬಿಜೆಪಿ ಪರಿವರ್ತನಾ ಸಭೆಯಲ್ಲಿ ಭಾಗವಹಿಸಿದ್ದಾರೆ ಎಂದು ಫೋಟೋಗಳನ್ನು ಬಿಡುಗಡೆ ಮಾಡಿದರು. ಈ ವೇಳೆ ಮಾತಿನ ಚಕಮಕಿ ನಡೆದು, ಜಿಲ್ಲಾ ಪಂಚಾಯಿತಿ ಅಧ್ಯಕ್ಷ ಸಿ.ಪಿ.ರಾಜೇಶ್ ಸಭಾಂಗಣದಿಂದ ಹೊರನಡೆದರು. ಸಾಮಾನ್ಯ ಸಭೆ ನಡೆಯುತ್ತದೆ ಎಂದು ಬಂದಿದ್ದ ಅಧಿಕಾರಿಗಳು ಸಾಯಂಕಾಲದವರೆಗೂ ಸಭಾಂಗಣದಲ್ಲೇ ಕೂತು, ನಂತರ ವಾಪಸು ತೆರಳಿದರು.
ತಾಕತ್ ಇದ್ರೆ ಜಿಲ್ಲಾ ಪಂಚಾಯಿತಿ ಅಧ್ಯಕ್ಷ ಸ್ಥಾನಕ್ಕೆ ರಾಜೇಶ್ ನಿಂದ ರಾಜೀನಾಮೆ ಪಡೆಯಲಿ ಎಂದು ಶಾಸಕ ಯೋಗೇಶ್ವರ್ ಸವಾಲು ಹಾಕಿದ್ದಾರೆ. ಈ ನಡುವೆ ಕಾಂಗ್ರೆಸ್ ಜಿಲ್ಲಾ ಪಂಚಾಯಿತಿ ಸದಸ್ಯರು ಸವಾಲು ಸ್ವೀಕರಿಸಿ, ರಾಜೀನಾಮೆ ನೀಡಬೇಕು- ಇಲ್ಲವೇ ಪಕ್ಷದಿಂದ ಉಚ್ಚಾಟನೆ ಮಾಡುವುದಾಗಿ ಬೆದರಿಕೆ ಹಾಕಿದ್ದಾರೆ.