ಶಾಲಾವರಣದಲ್ಲೇ ಮತಾಂತರ: ತಡೆದವರ ಮೇಲೆ ಹಲ್ಲೆಗೆ ಯತ್ನ
ರಾಮನಗರ, ಡಿಸೆಂಬರ್ 15: ಶಾಲೆಯ ಆವರಣದಲ್ಲೇ ಸಭೆ ನಡೆಸಿ ಮತಾಂತರಕ್ಕೆ ಯತ್ನಿಸುತ್ತಿದ್ದ ಆರೋಪದ ಮೇಲೆ ೮ ಜನರ ವಿರುದ್ದ ರಾಮನಗರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ರಾಮನಗರ ಜಿಲ್ಲೆಯ ಕೈಲಾಂಚ ಹೋಬಳಿಯ ಅಣ್ಣಹಳ್ಳಿ ಗ್ರಾಮದ ಕೆಂಗಲ್ ಹನುಮಂತಯ್ಯ ಸರ್ಕಾರಿ ಪ್ರೌಢಶಾಲೆ ಅವರಣದಲ್ಲಿ ಶಾಲೆಯ ಮುಖ್ಯೋಪಾಧ್ಯಾಯರು ಮತ್ತು ಎಸ್ ಡಿಎಂಸಿ ಅನುಮತಿ ಪಡೆಯದೇ ಕ್ರಿಶ್ಚಿಯನ್ ಮಿಷನರಿಗಳು ಸ್ಥಳೀಯರ ಸಹಕಾರದೊಂದಿಗೆ ಮತಾಂತರ ನಡೆಸಿದ್ದಾರೆ.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಗುರುವಾರ ರಾತ್ರಿ ಸಭೆ ನಡೆಸುತ್ತಿದ್ದಾಗ ಅದೇ ಗ್ರಾಮದ ಸಂತೋಷ ಅವರು ಪ್ರಶ್ನೆ ಮಾಡಲು ಮುಂದಾದರು, ಅಲ್ಲಿದ್ದ ಕೆಲವರು ಸಂತೋಷ ಮೇಲೆ ಹಲ್ಲೆಗೆ ಮುಂದಾಗಿದ್ದಾರೆ.

ಈ ಸುದ್ದಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಧಾವಿಸಿದ ಹಿಂದೂ ಜಾಗರಣ ವೇದಿಕೆ ಕಾರ್ಯಕರ್ತರು ಮತಾಂತರ ಸಭೆಯನ್ನು ತಡೆದಿದ್ದಾರೆ. ಶಿಕ್ಷಣ ಇಲಾಖೆ ಅಧಿಕಾರಿಗಳು ಸ್ಥಳ ಪರಿಶೀಲನೆ ಮಾಡುವಂತೆ ಆಗ್ರಹಿಸಿದ್ದಾರೆ.
ಸ್ಥಳಕ್ಕೆ ಬಂದು ಪರಿಶೀಲನೆ ಮಾಡಿದ ಅಧಿಕಾರಿಗಳು, ಅನುಮತಿ ಪಡೆಯದೇ ಕಾರ್ಯಕ್ರಮ ನಡೆಸಲಾಗಿದೆ ಎಂದು ವರದಿ ನೀಡಿದ್ದಾರೆ. ಅಲ್ಲದೇ ಸಭೆ ನಡೆಸಿ ಅಣ್ಣಹಳ್ಳಿ ಮತ್ತು ಸುತ್ತಮುತ್ತಲ ಗ್ರಾಮದ ಜನರನ್ನು ಸೇರಿಸಿ, ಸಭೆಯನ್ನು ಪ್ರಶ್ನಿಸಿದವರ ಮೇಲೆ ಹಲ್ಲೆ ಮಾಡಲು ಮುಂದಾದ ಆರೋಪದ ಮೇಲೆ ಗ್ರಾಮದ ೮ ಜನರ ಮೇಲೆ ರಾಮನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ಕ್ರಿಶ್ಚಿಯನ್ ಮಿಷನರಿಗಳು ಮತಾಂತರ ಮಾಡುವ ಮೂಲಕ ಕೆಟ್ಟ ಕೆಲಸಕ್ಕೆ ಕೈ ಹಾಕಿದ್ದಾರೆ, ಇದನ್ನು ಹಿಂದೂ ಜಾಗರಣ ವೇದಿಕೆ ಸೇರಿದಂತೆ ಯಾವುದೇ ಹಿಂದೂಪರ ಸಂಘಟನೆಗಳು ಸಹಿಸುವುದಿಲ್ಲ ಎಂದು ಹಿಂದೂ ಜಾಗರಣ ವೇದಿಕೆಯ ಜಿಲ್ಲಾಧ್ಯಕ್ಷ ಗಜೇಂದ್ರ ಸಿಂಗ್ ಹೇಳಿದ್ದಾರೆ.












Click it and Unblock the Notifications