ಅಸ್ಪೃಶ್ಯರು ಪದ ಬಳಕೆ: ಕುಮಾರಸ್ವಾಮಿ ಕ್ಷಮೆಯಾಚಿಸುವಂತೆ ದಲಿತ ಸಂಘಟನೆಗಳ ಪಟ್ಟು
ರಾಮನಗರ, ಡಿಸೆಂಬರ್1: ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಪತ್ರಿಕಾಗೋಷ್ಠಿಯಲ್ಲಿ ಅಸ್ಪೃಶ್ಯರು ಪದ ಬಳಕೆ ಮಾಡಿರುವುದನ್ನು ಖಂಡಿಸಿ, ತಕ್ಷಣವೇ ಅವರು ನಾಡಿನ ದಲಿತ ಸಮುದಾಯದ ಮುಂದೆ ಬಹಿರಂಗವಾಗಿ ಕ್ಷಮೆ ಕೋರಬೇಕು ಎಂದು ಆಗ್ರಹಿಸಿ ವಿವಿಧ ದಲಿತ ಪರ ಸಂಘಟನೆಗಳು ಪ್ರತಿಭಟನೆ ನಡೆಸಿದ್ದಾರೆ.
ರಾಮನಗರದ ಶಾಸಕರ ಕಚೇರಿ ಮುಂದೆ ಪ್ರತಿಭಟನೆ ನಡೆಸಿದ ವಿವಿಧ ದಲಿತ ಪರ ಸಂಘಟನೆಗಳು ಮಾಜಿ ಮುಖ್ಯಮಂತ್ರಿಗಳಾದ ಹೆಚ್.ಡಿ.ಕುಮಾರಸ್ವಾಮಿ ಅವರು ತಮ್ಮ ಪಕ್ಷದ ರಾಜ್ಯಾಧ್ಯಕ್ಷರಾದ 'ಸಿ.ಎಂ.ಇಬ್ರಾಹಿಂ ಮುಖ್ಯಮಂತ್ರಿಯಾಗಬಾರದು ಅವರೇನು ಅಸ್ಪೃಶ್ಯರು ಅಲ್ಲ' ಎನ್ನುವ ಮೂಲಕ ಜಾತಿ ಪದವನ್ನು ಹೊರಹಾಕಿದ್ದಾರೆ ಎಂದು ಪ್ರತಿಭಟನಾಕಾರರು ಆರೋಪಿಸಿದರು.
'ಬಹಳ ಹಿಂದಿನಿಂದಲೂ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ದಲಿತ ವಿರೋಧಿಯಾಗಿದ್ದರು. ಪ್ರಸ್ತುತ ಹೇಳಿಕೆ ನೀಡುವ ಮೂಲಕ ತಮ್ಮ ಹೃದಯದಲ್ಲಿನ ಮಾತನ್ನು ಹೊರಹಾಕಿದ್ದಾರೆ ಅಷ್ಟೇ. ತಕ್ಷಣವೇ ಪತ್ರಿಕಾಗೋಷ್ಠಿ ಕರೆದು ತಮ್ಮ ಹೇಳಿಕೆಗೆ ಕ್ಷಮೆ ಕೇಳಬೇಕು. ಒಂದು ವೇಳೆ ಕ್ಷಮೆ ಕೇಳದೇ ಹೋದಲ್ಲಿ ರಾಜ್ಯಾದ್ಯಂತ ಉಗ್ರ ರೂಪದ ಪ್ರತಿಭಟನೆ ಎದುರಿಸಬೇಕಾಗುತ್ತದೆ ಎಂದು ದಲಿತ ಮುಖಂಡರು ಕುಮಾರಸ್ವಾಮಿಗೆ ಎಚ್ಚರಿಕೆ ನೀಡಿದ್ದಾರೆ.

ಪ್ರತಿಭಟನೆಯಲ್ಲಿ ಮಾತನಾಡಿದ ದಲಿತ ಮುಖಂಡ ಶಿವಕುಮಾರ್ ಸ್ವಾಮಿ, "ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅಸ್ಪೃಶ್ಯತೆ ಎನ್ನುವ ಪದ ಬಳಸಿ ನಾಡಿನ ದಲಿತ ಸಮುದಾಯದ ಸ್ವಾಭಿಮಾನವನ್ನು ಕೆಣಕಿದ್ದಾರೆ. ಅವರನ್ನು ಕ್ಷಮೆ ಕೋರುವಂತೆ ಒತ್ತಾಯಿಸುವುದರ ಜೊತೆಗೆ ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿಗಳನ್ನು ಭೇಟಿ ಮಾಡಿ ಕುಮಾರಸ್ವಾಮಿ ವಿರುದ್ಧ ಎಫ್ಐಆರ್ ದಾಖಲಿಸುವಂತೆ ಆಗ್ರಹಿಸುತ್ತೇನೆ" ಎಂದು ಹೇಳಿದ್ದಾರೆ.

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಪಂಚರತ್ನ ಯಾತ್ರೆ ವೇಳೆ ಜೆಡಿಎಸ್ ಮುಸ್ಲಿಂ ವ್ಯಕ್ತಿಯನ್ನು ಸಿಎಂ ಮಾಡುತ್ತದೆ ಎಂಬ ವಿಚಾರದ ಬಗ್ಗೆ ಮಾತನಾಡುವಾಗ ಕುಮಾರಸ್ವಾಮಿ 'ಇಬ್ರಾಹಿಂ ಏಕೆ ಸಿಎಂ ಆಗಬಾರದು, ಅವರೇನು ಅಸ್ಪೃಶ್ಯರಲ್ಲ' ಎಂದು ಹೇಳಿಕೆ ನೀಡಿದ್ದರು. ಈ ಬಗ್ಗೆ ಭಾರಿ ವಿರೋಧ ವ್ಯಕ್ತವಾಡುತ್ತಿದೆ. ಸಾಮಾಜಿಕ ಜಾಲತಾಣದಲ್ಲೂ ಈ ಬಗ್ಗೆ ವ್ಯಾಪಕ ಟೀಕೆ ವ್ಯಕ್ತವಾಗಿದೆ. ಅಸೂಕ್ಷ್ಮ ಹೇಳಿಕೆ ಹಿನ್ನೆಲೆಯಲ್ಲಿ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ವಿರುದ್ಧ ಕೊಳ್ಳೇಗಾಲ ಪಟ್ಟಣ ಪೊಲೀಸ್ ಠಾಣೆಯಲ್ಲಿ ಚಾಮರಾಜನಗರ ಜಿಲ್ಲಾ ಪ್ರಗತಿಪರ ಸಂಘಟನೆಗಳ ಒಕ್ಕೂಟದ ಸದಸ್ಯರು ದೂರು ದಾಖಲಿಸಿದ್ದಾರೆ.












Click it and Unblock the Notifications