ಪಿಪಿಇ ಕಿಟ್ ಧರಿಸಿ ಕೊರೊನಾ ರೋಗಿಗಳ ಆರೋಗ್ಯ ವಿಚಾರಿಸಿದ ರಾಮನಗರ ಡಿಸಿ
ರಾಮನಗರ, ಜುಲೈ 23: ಸಂಸದ ಡಿ.ಕೆ.ಸುರೇಶ್ ಪಿಪಿಇ ಕಿಟ್ ಧರಿಸಿ ಕೋವಿಡ್-19 ಆಸ್ಪತ್ರೆಗೆ ಭೇಟಿ ನೀಡಿದ ಬೆನ್ನಲ್ಲೇ ಜಿಲ್ಲಾಧಿಕಾರಿ ಎಂ.ಎಸ್.ಅರ್ಚನಾ ಪಿಪಿಇ ಕಿಟ್ ಧರಿಸಿ ಜಿಲ್ಲೆಯ ಕೋವಿಡ್-19 ರೆಫರಲ್ ಆಸ್ಪತ್ರೆಗೆ ಭೇಟಿ ನೀಡಿ ಕೊರೊನಾ ಸೋಂಕಿತರ ಆರೋಗ್ಯ ವಿಚಾರಿಸಿದ್ದಾರೆ. ಸೋಂಕಿತರಿಗೆ ಧೈರ್ಯ ತುಂಬುವ ಮಾತುಗಳನ್ನಾಡಿದ್ದಾರೆ.
ಆಸ್ಪತ್ರೆಗೆ ಭೇಟಿ ನೀಡಿದ ಡಿಸಿ ಅರ್ಚನಾ ಅವರು ಜಿಲ್ಲೆಯ ಕೋವಿಡ್ -19 ರೆಫರಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿರುವವರನ್ನು ಮಾತನಾಡಿಸಿ, ಆಸ್ಪತ್ರೆಯಲ್ಲಿ ನೀಡುತ್ತಿರುವ ಚಿಕಿತ್ಸೆ ಮತ್ತು ಸೌಲಭ್ಯಗಳ ಬಗ್ಗೆ ಮಾಹಿತಿ ಪಡೆದುಕೊಂಡರು. ಸೋಂಕಿತರಲ್ಲಿ ಧೈರ್ಯ ತುಂಬಿ, ಶೀಘ್ರ ಗುಣಮುಖರಾಗುವಂತೆ ಹಾರೈಸಿದರು. ಆರೋಗ್ಯ ಅಧಿಕಾರಿಗಳಿಂದ ಸೌಲಭ್ಯಗಳ ಕುರಿತು ಮಾಹಿತಿ ಪಡೆದು ಆಸ್ಪತ್ರೆಯ ಸ್ವಚ್ಛತೆಯನ್ನು ಪರಿಶೀಲಿಸಿದರು.
ಸೋಂಕಿಗೆ ಭಯ ಬೇಡ ಎಂದ ಜಿಲ್ಲಾಧಿಕಾರಿ: ತಮಗೆ ಕೊರೊನಾ ಸೋಂಕಿರುವುದು ದೃಢಪಡುತ್ತಿದ್ದಂತೆ ಜನರು ಭಯ ಬೀಳುವುದು ಸಹಜ. ಇದಕ್ಕಾಗಿ ಗಾಬರಿಪಡುವ ಅಗತ್ಯವಿಲ್ಲ. ಜಿಲ್ಲೆಯಲ್ಲಿ ಇರುವ ಕೋವಿಡ್ ಆಸ್ಪತ್ರೆಯಲ್ಲಿ ಉತ್ತಮ ಚಿಕಿತ್ಸೆ ದೊರೆಯುತ್ತಿದೆ. ಜನರು ಭಯಕ್ಕೆ ಒಳಗಾಗದೆ ಇಲ್ಲಿ ಚಿಕಿತ್ಸೆ ಪಡೆದು ಗುಣಮುಖರಾಗಬಹುದು ಎಂದು ವಿಶ್ವಾಸದ ಮಾತುಗಳನ್ನಾಡಿದ್ದಾರೆ.

ಸೋಂಕಿತರು ತಪ್ಪಿಸಿಕೊಳ್ಳುವ ಅಗತ್ಯವಿಲ್ಲ: ತಮಗೆ ಸೋಂಕಿರುವುದು ಗೊತ್ತಾಗುತ್ತಿದ್ದಂತೆ ಬಹುತೇಕ ಜನರು ಅದನ್ನು ಮರೆಮಾಚಿ ತಪ್ಪಿಸಿಕೊಳ್ಳಲು ಪ್ರಯತ್ನಿಸುತ್ತಿದ್ದಾರೆ. ಇದು ಇನ್ನಷ್ಟು ಅನಾಹುತಕ್ಕೆ ಕಾರಣವಾಗುತ್ತದೆ. ಇಲ್ಲಿ ಉತ್ತಮ ಗುಣಮಟ್ಟದ ಚಿಕಿತ್ಸೆ ದೊರೆಯುತ್ತಿದೆ. ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದುಕೊಂಡರೆ ಗುಣಮುಖರಾಗಬಹುದು. ಹೀಗಾಗಿ, ವಿಶ್ವಾಸದಿಂದ ಈ ಸೋಂಕನ್ನು ಎದುರಿಸುವ ಆತ್ಮಸ್ಥೈರ್ಯ ಬೆಳೆಸಿಕೊಳ್ಳಿ ಎಂದು ತಿಳಿವಳಿಕೆ ಹೇಳಿದರು.












Click it and Unblock the Notifications