ರಾಮನಗರದ ಎಲ್ಲಾ ನೀರಾವರಿ ಯೋಜನೆಗೆ 3 ವರ್ಷಗಳ ಡೆಡ್ ಲೈನ್
ರಾಮನಗರ, ಆಗಸ್ಟ್ 27: ಮಾಗಡಿ ತಾಲ್ಲೂಕಿಗೆ ಕುಡಿಯುವ ನೀರು ಸರಬರಾಜು ಮಾಡುವ ಶ್ರೀರಂಗ ಯೋಜನೆಯನ್ನು ಒಂದು ವರ್ಷದಲ್ಲಿ ಪೂರ್ಣಗೊಳಿಸಬೇಕೆಂದು ಅಧಿಕಾರಿಗಳಿಗೆ ಉಪ ಮುಖ್ಯಮಂತ್ರಿ ಡಾ.ಅಶ್ವಥ್ ನಾರಾಯಣ್ ತಾಕೀತು ಮಾಡಿದರು.
Recommended Video
ರಾಮನಗರ ಜಿಲ್ಲೆಯಲ್ಲಿ ನಡೆಯುತ್ತಿರುವ ವಿವಿಧ ನೀರಾವರಿ ಮತ್ತು ಕುಡಿಯುವ ನೀರು ಯೋಜನೆಗಳ ಪ್ರಗತಿ ಪರಿಶೀಲನೆ ಸಂಬಂಧ ಬೆಂಗಳೂರಿನಲ್ಲಿ ಕರೆದಿದ್ದ ಕಾವೇರಿ ನೀರಾವರಿ ನಿಗಮದ ಅಧಿಕಾರಿಗಳ ಸಭೆಯಲ್ಲಿ ಅವರು ಈ ಮಾಹಿತಿ ನೀಡಿದರು. ಸಭೆಯಲ್ಲಿ ಕಾವೇರಿ ನೀರಾವರಿ ನಿಗಮದ ವ್ಯವಸ್ಥಾಪಕ ನಿರ್ದೇಶಕ ಜಯಪ್ರಕಾಶ ಸೇರಿದಂತೆ ಇತರ ಹಿರಿಯ ಅಧಿಕಾರಿಗಳು ಹಾಜರಿದ್ದರು. ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಸಂಬಂಧಿಸಿದಂತೆ ಸಭೆಯಲ್ಲಿ ಚರ್ಚೆ ನಡೆಸಲಾಯಿತು.

ಮೂರು ವರ್ಷಗಳಲ್ಲಿ ಎಲ್ಲಾ ನೀರಾವರಿ ಯೋಜನೆ ಪೂರ್ಣ"
ಮಾಗಡಿಯ ಶ್ರೀರಂಗ ಯೋಜನೆಗೆ ಭೂಸ್ವಾಧೀನ ಪ್ರಕ್ರಿಯೆಗೆ ಎದುರಾಗಿರುವ ತೊಡಕುಗಳ ಬಗ್ಗೆ ಇನ್ನೊಂದು ವಾರದಲ್ಲಿ ಕಂದಾಯ ಇಲಾಖೆ ಜತೆ ಮಾತುಕತೆ ನಡೆಸಿ ಬಗೆಹರಿಸಿಕೊಳ್ಳಬೇಕು. ಈ ಸಂಬಂಧ ತುಮಕೂರು ಮತ್ತು ರಾಮನಗರ ಜಿಲ್ಲಾಧಿಕಾರಿಗಳ ಜತೆ ಸಭೆಗಳನ್ನು ನಡೆಸುವಂತೆ ಆದೇಶಿಸಿದರು. ಶ್ರೀರಂಗ ಏತ ನೀರಾವರಿ, ಸತ್ತೇಗಾಲ ಕುಡಿಯುವ ನೀರು ಯೋಜನೆ ಸೇರಿದಂತೆ ರಾಮನಗರ ಜಿಲ್ಲೆಯಲ್ಲಿ ನಡೆಯುತ್ತಿರುವ ವಿವಿಧ ನೀರಾವರಿ ಮತ್ತು ಕುಡಿಯುವ ನೀರು ಯೋಜನೆಗಳನ್ನು ಮುಂದಿನ ಮೂರು ವರ್ಷಗಳಲ್ಲಿ ಪೂರ್ಣಗೊಳಿಸಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವರೂ ಆದ ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ಸ್ಪಷ್ಟಪಡಿಸಿದರು.

ಸಮಸ್ಯೆ ಬಗೆಹರಿಸಲು ಡಿಸಿಗೆ ಸೂಚನೆ
ಅರ್ಕಾವತಿ ಜಲಾಶಯದ ಹಿನ್ನೀರಿನಿಂದ ಕನಕಪುರ ತಾಲ್ಲೂಕಿನ ಗರಳಾಪುರ ಹಾಗೂ ಇನ್ನಿತರ 12 ಕೆರೆಗಳಿಗೆ ಎರಡು ಹಂತಗಳಲ್ಲಿ ನೀರು ತುಂಬಿಸಲು 70 ಕೋಟಿ ರೂಪಾಯಿ ಖರ್ಚು ಮಾಡುತ್ತಿದ್ದು, ಇದಕ್ಕೂ ಭೂಸ್ವಾಧೀನದ ಸಮಸ್ಯೆ ಇದೆ. ತಕ್ಷಣ ಬಗೆಹರಿಸಲು ಜಿಲ್ಲಾಧಿಕಾರಿಗಳಿಗೆ ಸೂಚಿಸುವುದಾಗಿ ಡಿಸಿಎಂ ಸಭೆಗೆ ತಿಳಿಸಿದರು.

540 ಕೋಟಿ ವೆಚ್ಚದ ಸತ್ತೇಗಾಲ ಯೋಜನೆ
ಒಟ್ಟು 540 ಕೋಟಿ ವೆಚ್ಚದ ಸತ್ತೇಗಾಲ ಕುಡಿಯುವ ನೀರು ಯೋಜನೆ ಪ್ರಗತಿಯಲ್ಲಿದ್ದು, ಇದರಿಂದ ಮೊಗೇನಹಳ್ಳಿ ಕೆರೆ ಮತ್ತು ಕಣ್ವ ಜಲಾಶಯಕ್ಕೆ ನೀರನ್ನು ತುಂಬಿಸಲಾಗುತ್ತದೆ. ಪುನಃ ಅಲ್ಲಿಂದ ಮಂಚನ ಬೆಲೆ ಜಲಾಶಯ ಮತ್ತು ವೈ.ಜಿ.ಗುಡ್ಡ ಕೆರೆಗೆ ತಂದು ಅದನ್ನು ನಾಲ್ಕು ತಾಲ್ಲೂಕುಗಳಿಗೂ ಕುಡಿಯುವ ನೀರನ್ನು ಒದಗಿಸಲಾಗುತ್ತದೆ. ಸದ್ಯದಲ್ಲೇ ಈ ಯೋಜನೆಯ ಪ್ರಗತಿಯನ್ನು ಖುದ್ದು ಪರಿಶೀಲಿಸಲಾಗುವುದು. ನೀರು ಸರಬರಾಜಿಗೆ ಸುರಂಗ ನಿರ್ಮಾಣ ಮಾಡುತ್ತಿದ್ದು, ಅದರ ಬಗ್ಗೆಯೂ ಉಪ ಮುಖ್ಯಮಂತ್ರಿ ಮಾಹಿತಿ ಪಡೆದರು.

ನೀರಾವರಿ ಯೋಜನೆಗಳ ಪರಿಶೀಲನೆ
ಗರಕಹಳ್ಳಿ ಏತ ಯೋಜನೆ, ಸಾತನೂರು ಕೆರೆ ತುಂಬಿಸುವ ಯೋಜನೆ, ನಾರಾಯಣಪುರ ಕೆರೆ ತುಂಬಿಸುವ ಯೋಜನೆ, ಕೆಂಗೇರಿ ದೊಡ್ಡಬೆಲೆ ಏತ ಯೋಜನೆ, ಬೈರಮಂಗಲ ತಿರುವು ನಾಲಾ ಯೋಜನೆ, ಕಣ್ವ ನಾಲೆಗಳ ಆಧುನೀಕರಣ ಯೋಜನೆ, ಅರೆಕೊಪ್ಪ ಸೂಕ್ಷ್ಮ ನೀರಾವರಿ, ಹೆಗ್ಗನೂರು ಸೂಕ್ಷ್ಮ ನೀರಾವರಿ, ದೊಡ್ಡಾಲಹಳ್ಳಿ ಹನಿ ನೀರಾವರಿ ಯೋಜನೆಗಳ ಪ್ರಗತಿ ಬಗ್ಗೆಯೂ ಉಪ ಮುಖ್ಯಮಂತ್ರಿಯವರು ನೀರಾವರಿ ನಿಗಮದ ಅಧಿಕಾರಿಗಳ ಜತೆ ಮಾತುಕತೆ ನಡೆಸಿದರು.












Click it and Unblock the Notifications