ಹೆಚ್ಚುತ್ತಿರುವ ಕೊರೊನಾ ಸೋಂಕಿತರ ಸಾವಿನ ಸಂಖ್ಯೆ: ಡಿಸಿಎಂ ಕಳವಳ
ರಾಮನಗರ, ಸೆಪ್ಟೆಂಬರ್ 8: ರಾಮನಗರ ಜಿಲ್ಲೆಯಲ್ಲಿ ನಿರಂತರವಾಗಿ ಕೋವಿಡ್-19 ಸೋಂಕಿಗೆ ಮೃತರಾಗುತ್ತಿರುವರ ಸಂಖ್ಯೆ ಏರಿಕೆಯಾಗುತ್ತಿರುವ ಬಗ್ಗೆ ತೀವ್ರ ಆತಂಕ ವ್ಯಕ್ತಪಡಿಸಿದ ಉಪ ಮುಖ್ಯಮಂತ್ರಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ.ಸಿ.ಎನ್ ಅಶ್ವತ್ಥ ನಾರಾಯಣ ಅವರು ಜನರ ಜೀವ ಉಳಿಸಲು ಎಲ್ಲಾ ರೀತಿಯಿಂದ ಶ್ರಮಿಸುವಂತೆ ಜಿಲ್ಲಾಡಳಿತಕ್ಕೆ ಸೂಚಿಸಿದರು.
Recommended Video
ರಾಮನಗರದ ಜಿಲ್ಲಾಡಳಿತದ ಅಧಿಕಾರಿಗಳೊಂದಿಗೆ ಬೆಂಗಳೂರಿನಿಂದ ವಿಡಿಯೋ ಕಾನ್ಫರೆನ್ಸ್ ಮೂಲಕ ಸಭೆ ನಡೆಸಿದರು. ಜಿ.ಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಇಕ್ರಂ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಸ್.ಗಿರೀಶ್, ಅಪರ ಜಿಲ್ಲಾಧಿಕಾರಿ ಬಿ.ಪಿ ವಿಜಯ್ ಮತ್ತು ಇನ್ನಿತರ ಅಧಿಕಾರಿಗಳು ಸಭೆಯಲ್ಲಿ ಹಾಜರಿದ್ದರು. ಕಳೆದ 10 ದಿನಗಳಿಂದ ಜಿಲ್ಲೆಯಲ್ಲಿ ದಿನ ನಿತ್ಯವೂ ಒಂದು ಇಲ್ಲವೆ ಎರಡು ಸಾವು ದಾಖಲಾಗುತ್ತಿದೆ. ಹಿಂದೆ ಜಿಲ್ಲೆಯಲ್ಲಿ ಸಾವಿನ ಪ್ರಮಾಣ ಶೇ.0.60 ರಷ್ಟು ಇತ್ತು. ಈಗ ಇದು ಶೇ.1.24ಕ್ಕೆ ಏರಿಕೆಯಾಗಿದೆ. ಸಾವಿನ ಪ್ರಮಾಣವನ್ನು ತಗ್ಗಿಸಲು ಎಲ್ಲಾ ಅಗತ್ಯ ಕ್ರಮಗಳನ್ನು ಆದ್ಯತೆ ಮೇರೆಗೆ ಕೈಗೊಳ್ಳುವಂತೆ ಡಿಸಿಎಂ ಸೂಚಿಸಿದರು.

ರಾಮನಗರ ಜಿಲ್ಲೆಗೆ ಬೆಂಗಳೂರಿನ ಖಾಸಗಿ ಆಸ್ಪತ್ರೆಯವರು ಕಳುಹಿಸುತ್ತಾರೆ
ರಾಮನಗರ ಜಿಲ್ಲೆಯಲ್ಲಿ ಸಾವನ್ನಪ್ಪುತ್ತಿರುವವರ ಪೈಕಿ ಮಧುಮೇಹ, ಅಧಿಕ ರಕ್ತದೊತ್ತಡ ಸೇರಿದಂತೆ ಇತರೆ ಕಾಯಿಲೆಯಿಂದ ಬಳಲುತ್ತಿರುವವರು ಹೆಚ್ಚಾಗಿದ್ದಾರೆ. ಅಲ್ಲದೆ, ಬೆಂಗಳೂರಿನಲ್ಲಿ ನೆಲೆಸಿರುವ ಮೂಲತಃ ರಾಮನಗರ ಜಿಲ್ಲೆಯವರ ಪೈಕಿ ಕೆಲವರು ಬೆಂಗಳೂರಿನಲ್ಲೇ ಕೋವಿಡ್ ಪರೀಕ್ಷೆ ಮಾಡಿಸಿಕೊಂಡು ಖಾಸಗಿ ಆಸ್ಪತ್ರೆಗೆ ದಾಖಲಾಗಿರುತ್ತಾರೆ. ಇಂತಹವರ ಪೈಕಿ ಪರಿಸ್ಥಿತಿ ಕೈಮೀರಿದಾಗ ಅನಿವಾರ್ಯವಾಗಿ ರಾಮನಗರ ಜಿಲ್ಲೆಗೆ ಬೆಂಗಳೂರಿನ ಖಾಸಗಿ ಆಸ್ಪತ್ರೆಯವರು ಕಳುಹಿಸುತ್ತಿದ್ದಾರೆ. ಹೀಗಾಗಿ, ಸಾವಿನ ಸಂಖ್ಯೆಯಲ್ಲಿ ಹೆಚ್ಚಳವಾಗುತ್ತಿದೆ. 75 ವರ್ಷಕ್ಕಿಂತಲೂ ಹೆಚ್ಚು ವಯಸ್ಸಾದವರು ನಿಧನರಾಗಿರುತ್ತಾರೆ ಎಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ.ನಿರಂಜನ್ ಅವರು ಡಿಸಿಎಂ ಡಾ.ಅಶ್ವಥ್ ನಾರಾಯಣ್ ರವರಿಗೆ ಮಾಹಿತಿ ನೀಡಿದರು.

ಜಿಲ್ಲೆಯಲ್ಲಿ ಆಂಬ್ಯುಲೆನ್ಸ್ ಕೊರತೆ ಇಲ್ಲ
ಜಿಲ್ಲೆಯಲ್ಲಿ ಇದುವರೆಗೆ ಚನ್ನಪಟ್ಟಣ ತಾಲ್ಲೂಕಿನಲ್ಲಿ 11, ಕನಕಪುರ ತಾಲ್ಲೂಕಿನಲ್ಲಿ 11, ಮಾಗಡಿ ತಾಲ್ಲೂಕಿನಲ್ಲಿ 13 ಜನ ಹಾಗೂ ರಾಮನಗರ ತಾಲ್ಲೂಕಿನಲ್ಲಿ 15 ಜನ ಸಾವನ್ನಪ್ಪಿದ್ದಾರೆ. ಒಟ್ಟಾರೆಯಾಗಿ ಜಿಲ್ಲೆಯಲ್ಲಿ 50 ಮಂದಿ ನಿಧನರಾಗಿದ್ದಾರೆ ಎಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ. ನಿರಂಜನ್ ತಿಳಿಸಿದರು.
ಜಿಲ್ಲೆಯಲ್ಲಿ ಒಟ್ಟು 16 ಆಂಬ್ಯುಲೆನ್ಸ್ಗಳು ಲಭ್ಯವಿದ್ದು, ಪ್ರತಿ ತಾಲ್ಲೂಕಿಗೂ ತಲಾ ಮೂರು ಆಂಬ್ಯುಲೆನ್ಸ್ಗಳನ್ನು ನೀಡಲಾಗಿದೆ. ಕೋವಿಡ್ ಕೇರ್ ಸೆಂಟರ್ಗಳಲ್ಲೂ ಒಂದೊಂದು ಆಂಬ್ಯುಲೆನ್ಸ್ಗಳನ್ನು ನಿಯೋಜಿಸಲಾಗಿದೆ ಎಂದು ಜಿಲ್ಲಾಧಿಕಾರಿಗಳು ಉಪ ಮುಖ್ಯಮಂತ್ರಿಗಳಿಗೆ ಮಾಹಿತಿ ನೀಡಿದರು.

ಜಿಲ್ಲೆಯನ್ನು ಕಾಡುತ್ತಿದೆ ವೈದ್ಯರ ಕೊರತೆ
ಜಿಲ್ಲೆಯಲ್ಲಿ ಇನ್ನೂ 10 ವೈದ್ಯರ ಕೊರತೆ ಇದೆ. ಹುದ್ದೆಗಳನ್ನು ಭರ್ತಿ ಮಾಡಲು ಕ್ರಮವಹಿಸಲಾಗಿದ್ದು, ಎಂಬಿಬಿಎಸ್ ಮಾಡಿರುವ ವೈದ್ಯರು ಕೋವಿಡ್ ಕೇರ್ ನಲ್ಲಿ ಕೆಲಸ ಮಾಡಲು ಮುಂದೆ ಬರುತ್ತಿಲ್ಲ. ಅದೇ ರೀತಿ 20 ನರ್ಸ್ ಗಳ ಪೈಕಿ ಆರು ಜನರು ಮಾತ್ರ ಸೇರ್ಪಡೆಯಾಗಿದ್ದಾರೆ. ಇನ್ನೂ 14 ಜನರ ಅವಶ್ಯಕತೆ ಇದೆ. ಹಾಗೆಯೇ, 12 ಜನ ಲ್ಯಾಬ್ ಟೆಕ್ನೀಷಿಯನ್ ಕೊರತೆ ಇರುವುದಾಗಿ ಜಿಲ್ಲಾಧಿಕಾರಿಗಳು ಉಪ ಮುಖ್ಯಮಂತ್ರಿಗಳಿಗೆ ತಿಳಿಸಿದರು.
ಜಿಲ್ಲೆಯಲ್ಲಿ ಎಲ್ಲಾ ರೀತಿಯ ಮುಂಜಾಗ್ರತೆ ಕ್ರಮಗಳನ್ನು ಕೈಗೊಳ್ಳಲಾಗಿದ್ದು, ಅಗತ್ಯ ಸೌಲಭ್ಯಗಳನ್ನು ಒದಗಿಸಲಾಗಿದೆ. ಹೀಗಿದ್ದರೂ ಸಾವಿನ ಪ್ರಮಾಣದಲ್ಲಿ ಏರಿಕೆಯಾಗುತ್ತಿರುವ ಬಗ್ಗೆ ಕಳವಳ ವ್ಯಕ್ತಪಡಿಸಿದ ಉಪ ಮುಖ್ಯಮಂತ್ರಿ, ಸೂಕ್ತ ರೀತಿಯಲ್ಲಿ ಪರಿಶೀಲಿಸಿ ಸಮಗ್ರ ವರದಿಯನ್ನು ಸಲ್ಲಿಸುವಂತೆ ಜಿಲ್ಲಾಧಿಕಾರಿ ಎಂ.ಎಸ್ ಅರ್ಚನಾ ಅವರಿಗೆ ನಿರ್ದೇಶನ ನೀಡಿದರು.

ಕೋವಿಡ್ ಪರೀಕ್ಷೆ ಹೆಚ್ಚಾಗಿದೆ
ರಾಮನಗರ ಜಿಲ್ಲೆಯಲ್ಲಿ ಪ್ರತಿ ದಿನವೂ 950ಕ್ಕೂ ಹೆಚ್ಚು ಕೋವಿಡ್ ಪರೀಕ್ಷೆಗಳನ್ನು ನಡೆಸಲಾಗುತ್ತಿದೆ. ರೋಗ ಲಕ್ಷಣ ಉಳ್ಳವರು ಮತ್ತು ಮಧುಮೇಹ, ಅಧಿಕ ರಕ್ತದೊತ್ತಡ ಹಾಗೂ ಇನ್ನಿತರ ಆರೋಗ್ಯ ಸಮಸ್ಯೆಗಳನ್ನು ಹೊಂದಿರುವ ವ್ಯಕ್ತಿಗಳಿಗೆ ಆದ್ಯತೆ ಮೇರೆಗೆ ಜಿಲ್ಲೆಯಲ್ಲಿ ಕೋವಿಡ್ ಪರೀಕ್ಷೆಗಳನ್ನು ನಡೆಸಲಾಗುತ್ತಿದೆ. ಇಡೀ ರಾಜ್ಯದಲ್ಲೇ ನಿಗದಿಪಡಿಸಿರುವ ಸಂಖ್ಯೆಗಿಂತಲೂ ಅಧಿಕ ಪ್ರಮಾಣದ ಕೋವಿಡ್ ಪರೀಕ್ಷೆಗಳನ್ನು ನಡೆಸುತ್ತಿರುವ ಜಿಲ್ಲೆ ಎನ್ನುವ ಹಿರಿಮೆಯನ್ನು ರಾಮನಗರ ಹೊಂದಿದೆ ಎಂದು ಜಿಲ್ಲಾಧಿಕಾರಿ ಎಂ.ಎಸ್ ಅರ್ಚನಾ ಅವರು ತಿಳಿಸಿದರು.












Click it and Unblock the Notifications