ನಾಳೆ ರಾಮನಗರದ ವಿವಿಧ ಕಾರ್ಯಕ್ರಮಗಳಲ್ಲಿ ಡಿಸಿಎಂ ಭಾಗಿ
ರಾಮನಗರ, ಮೇ 10: ರಾಮನಗರ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಉಪ ಮುಖ್ಯಮಂತ್ರಿ ಡಾ.ಅಶ್ವಥ್ ನಾರಾಯಣ್ ಅವರು ನಾಳೆ ಜಿಲ್ಲೆಯ ಹಲವು ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲು ಸೋಮವಾರ ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದಾರೆ.
ಮೊದಲು ಇತ್ತೀಚಿಗೆ ಅಪಘಾತದಲ್ಲಿ ಮೃತಪಟ್ಟ ಖಾಸಗಿ ವಾಹಿನಿ ವರದಿಗಾರ ಹನುಮಂತ್ ರವರ ಗ್ರಾಮ ಹಾರೋಹಳ್ಳಿಯ ಪಡವಣಗೆರೆಗೆ ತೆರಳಿ ಮೃತನ ಕುಟುಂಬಕ್ಕೆ ವೈಯುಕ್ತಿಕ ಪರಿಹಾರ ನೀಡಿ ಸಾಂತ್ವನ ಹೇಳಲಿದ್ದಾರೆ.
'ಮೇ 30ರೊಳಗೆ ಆನ್ಲೈನ್ನಲ್ಲಿ ಪದವಿ ಪಠ್ಯಕ್ರಮ ಪೂರ್ಣಗೊಳಿಸಿ'
ನಂತರ ರೇಷ್ಮೆ ಮಾರುಕಟ್ಟೆ ಮತ್ತು ಎಪಿಎಂಸಿ ಮಾರುಕಟ್ಟೆಗೆ ಭೇಟಿ ನೀಡಿ ಮಾರುಕಟ್ಟೆಯ ವಹಿವಾಟು, ಕುಂದು ಕೊರತೆಗಳ ಬಗ್ಗೆ ಪರಿಶೀಲನೆ ನಡೆಸಲಿದ್ದಾರೆ.
ಮಧ್ಯಾಹ್ನ ಜಿಲ್ಲೆಯಲ್ಲಿನ ಕೋವಿಡ್ ಆಸ್ಪತ್ರೆಗೆ ಭೇಟಿ ನೀಡಿ, ಕೊರೊನಾ ಶಂಕಿತರ ಚಿಕಿತ್ಸೆಗಾಗಿ ಕೈಗೊಂಡಿರುವ ಕ್ರಮಗಳ ಬಗ್ಗೆ ಮಾಹಿತಿ ಪಡೆಯಲಿದ್ದು, ಇದೇ ಸಂದರ್ಭದಲ್ಲಿ ಟೆಲಿ ಮೆಡಿಸಿನ್ ಐಸಿಯು ಉದ್ಘಾಟನೆ ಮಾಡಲಿದ್ದಾರೆ. ನಂತರ ಕೋವಿಡ್-19 ವಾರ್ ರೂಮ್ ಕಾರ್ಯವಿಧಾನಗಳನ್ನು ಪರಿಶೀಲಿಸುವರು.
ಕೊರೊನಾ ವೈರಸ್ ತಡೆಗಟ್ಟಲು ಜಿಲ್ಲಾಡಳಿತ ಕೈಗೊಂಡಿರುವ ಕ್ರಮಗಳ ಕುರಿತು ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಅಧಿಕಾರಿಗಳೊಂದಿಗೆ ಸಭೆ ನಡೆಸಿ, ನಂತರ ಪತ್ರಿಕಾಗೋಷ್ಠಿ ನಡೆಸಲಿದ್ದಾರೆ.
ಮಾಗಡಿ ತಾಲ್ಲೂಕಿನ ತಿಪ್ಪಸಂದ್ರ ಹೋಬಳಿಯ ಕೆಂಪಾಪುರ ಗ್ರಾಮದಲ್ಲಿರುವ ಕೆಂಪೇಗೌಡರ ವೀರ ಸಮಾಧಿಗೆ ಭೇಟಿ ನೀಡಿ, ಅಲ್ಲಿಂದ ನೇರವಾಗಿ ಬೆಂಗಳೂರಿಗೆ ತೆರಳಲಿದ್ದಾರೆ ಎಂದು ಡಿಸಿಎಂ ಅವರ ಆಪ್ತ ಕಾರ್ಯದರ್ಶಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.