DK Shivakumar: ಬೆಂಗಳೂರು ದಕ್ಷಿಣ ಜಿಲ್ಲೆ ಅಗಲಿದೆಯೇ ರಾಮನಗರ, ಏನಿದು ಹೊಸ ಬೆಳವಣಿಗೆ?
ಬೆಂಗಳೂರು, ಜುಲೈ. 09: ರಾಮನಗರ ಜಿಲ್ಲೆಯನ್ನು ಬೆಂಗಳೂರು ದಕ್ಷಿಣ ಜಿಲ್ಲೆ ಎಂದು ಮರುನಾಮಕರಣ ಮಾಡಿ ರಾಮನಗರವನ್ನು ಜಿಲ್ಲಾ ಕೇಂದ್ರವನ್ನಾಗಿ ಘೋಷಿಸಬೇಕು ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್, ಮಾಜಿ ಸಂಸದ ಡಿಕೆ ಸುರೇಶ್ ಮತ್ತು ಶಾಸಕರು ಸಿಎಂ ಸಿದ್ದರಾಮಯ್ಯಗೆ ಮನವಿ ಪತ್ರ ಸಲ್ಲಿಸಿದ್ದಾರೆ.
ರಾಮನಗರ ಜಿಲ್ಲಾ ಉಸ್ತುವಾರಿ, ಸಚಿವ ರಾಮಲಿಂಗಾ ರೆಡ್ಡಿ, ಮಾಜಿ ಸಂಸದ ಡಿಕೆ ಸುರೇಶ್ ಹಾಗೂ ಶಾಸಕ ಇಕ್ಬಾಲ್ ಹುಸೇನ್ ಮೊದಲಾದವರು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ನೇತೃತ್ವದಲ್ಲಿ ಮುಖ್ಯಮಂತ್ರಿಗಳನ್ನು ವಿಧಾನಸೌಧದಲ್ಲಿ ಭೇಟಿಯಾಗಿದ್ದಾರೆ. ಚನ್ನಪಟ್ಟಣ, ರಾಮನಗರ, ಮಾಗಡಿ, ಕನಕಪುರ ಮತ್ತು ಹಾರೋಹಳ್ಳಿ ಸೇರಿಸಿ ಬೆಂಗಳೂರು ದಕ್ಷಿಣ ಜಿಲ್ಲೆ ಮಾಡಬೇಕೆಂಬ ಮನವಿಯನ್ನು ಸಲ್ಲಿಸಿದ್ದಾರೆ.

ರಾಮನಗರ ಇನ್ಮುಂದೆ ಬೆಂಗಳೂರು ದಕ್ಷಿಣ ಜಿಲ್ಲೆ!
ಮನವಿ ಪತ್ರದಲ್ಲಿ ಏನಿದೆ?: ಮೊದಲು ದೊಡ್ಡಬಳ್ಳಾಪುರ, ನೆಲಮಂಗಲ, ಯಲಹಂಕ, ದೇವನಹಳ್ಳಿ, ಆನೇಕಲ್, ಬೆಂಗಳೂರು ದಕ್ಷಿಣ, ಬೆಂಗಳೂರು ಪೂರ್ವ, ಹೊಸಕೋಟೆ, ರಾಮನಗರ, ಮಾಗಡಿ, ಕನಕಪುರ ಮತ್ತು ಚನ್ನಪಟ್ಟಣ ತಾಲ್ಲೂಕುಗಳು ಬೆಂಗಳೂರು ಜಿಲ್ಲೆಯ ಭಾಗವಾಗಿದ್ದವು. 1986ರ ಸಾಲಿನಲ್ಲಿ ದೊಡ್ಡಬಳ್ಳಾಪುರ, ನೆಲಮಂಗಲ, ದೇವನಹಳ್ಳಿ, ಹೊಸಕೋಟೆ, ಚನ್ನಪಟ್ಟಣ, ರಾಮನಗರ, ಮಾಗಡಿ ಹಾಗೂ ಕನಕಪುರ ತಾಲ್ಲೂಕುಗಳನ್ನು ಸೇರಿಸಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯನ್ನಾಗಿ ಘೋಷಿಸಲಾಯಿತು.
ನಂತರ 2007ರ ಸಾಲಿನಲ್ಲಿ ದೊಡ್ಡಬಳ್ಳಾಪುರವನ್ನು ಕೇಂದ್ರ ಸ್ಥಾನವಾಗಿಟ್ಟುಕೊಂಡು ಹೊಸಕೋಟಿ, ನೆಲಮಂಗಲ, ದೇವನಹಳ್ಳಿ, ದೊಡ್ಡಬಳ್ಳಾಪುರ ಒಳಗೊಂಡಂತೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯನ್ನಾಗಿ ಘೋಷಿಸಿ, ಬೆಂಗಳೂರು ಗ್ರಾಮಾಂತರ ಜಿಲ್ಲೆ ಎಂಬ ಹೆಸರನ್ನು ಹಾಗೇ ಉಳಿಸಿಕೊಳ್ಳಲಾಯಿತು. ಅದೇ ರೀತಿ ಮಾಗಡಿ, ಕನಕಪುರ, ಚನ್ನಪಟ್ಟಣ ಹಾಗೂ ರಾಮನಗರ ತಾಲೂಕುಗಳನ್ನು ಸೇರಿಸಿಕೊಂಡು ಹೊಸದಾಗಿ ರಾಮನಗರ ಜಿಲ್ಲೆಯನ್ನಾಗಿ 2007ರಲ್ಲಿ ಘೋಷಿಸಿ, ರಾಮನಗರವನ್ನು ಜಿಲ್ಲಾ ಕೇಂದ್ರವನ್ನಾಗಿ ಘೋಷಿಸಲಾಯಿತು.
ಪ್ರಸ್ತುತ, ಬೆಂಗಳೂರು ನಗರದ ಅಂತರಾಷ್ಟ್ರೀಯ ಖ್ಯಾತಿ, ಸಾರ್ವಭೌಮತೆ ಮತ್ತು ಘನತೆ ರಾಮನಗರ, ಮಾಗಡಿ, ಕನಕಪುರ, ಚನ್ನಪಟ್ಟಣ ಹಾಗೂ ಹಾರೋಹಳ್ಳಿ ತಾಲ್ಲೂಕುಗಳಿಗೆ ಲಭ್ಯ ಆಗಬೇಕೆಂಬುದು ಜನರ ಆಶಯ ಮತ್ತು ನಮ್ಮ ಚಿಂತನೆಯೂ ಕೂಡ. ಆದ್ದರಿಂದ, ರಾಮನಗರ, ಚನ್ನಪಟ್ಟಣ, ಮಾಗಡಿ, ಕನಕಪುರ ಹಾಗೂ ಹಾರೋಹಳ್ಳಿ ತಾಲ್ಲೂಕುಗಳನ್ನು ಒಳಗೊಂಡ ರಾಮನಗರ ಜಿಲ್ಲೆಯನ್ನು ಬೆಂಗಳೂರು ದಕ್ಷಿಣ ಜಿಲ್ಲೆ ಎಂದು ಮರುನಾಮಕರಣ ಮಾಡಿ ಹಾಗೂ ರಾಮನಗರವನ್ನು ಇದರ ಜಿಲ್ಲಾ ಕೇಂದ್ರವಾಗಿ ಘೋಷಣೆ ಮಾಡಲು ಕೋರುತ್ತೇವೆ ಎಂದು ಮನವಿ ಪತ್ರ ಸಲ್ಲಿಸಲಾಗಿದೆ.

ಆಡಳಿತ ದೃಷ್ಟಿಯಿಂದ ಹೆಸರು ಬದಲಾವಣೆ: ಡಿಕೆ ಶಿವಕುಮಾರ್
ರಾಮನಗರದ ಹೆಸರು ಬದಲಾವಣೆ ವಿಚಾರವಾಗಿ ಮಾತನಾಡಿರುವ ಡಿಸಿಎಂ ಡಿಕೆ ಶಿವಕುಮಾರ್, " ನಾವು ಬೆಂಗಳೂರು ನಗರ ಜಿಲ್ಲೆಯವರು. ದೊಡ್ಡಬಳ್ಳಾಪುರ, ರಾಮನಗರ, ಚನ್ನಪಟ್ಟಣ ಮಾಗಡಿ ಎಲ್ಲಾ ಬೆಂಗಳೂರು ಜಿಲ್ಲೆಗೆ ಸೇರಿತ್ತು. ನಂತರ ಆಡಳಿತ ದೃಷ್ಟಿಯಿಂದ ಬದಲಾವಣೆ ಮಾಡಲಾಗಿದೆ. ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ ಮಾಡಲಾಗಿದೆ" ಎಂದಿದ್ದಾರೆ.
"ರಾಮನಗರ ಜಿಲ್ಲೆ ಅಂತಾನೂ ಮಾಡಲಾಯ್ತು. ರಾಮನಗರ ಜಿಲ್ಲೆ ಹಾಗೆ ಇರತ್ತೆ, ಅದರ ಹೆಸರು ಮಾತ್ರ ಬದಲಾಗುತ್ತದೆ. ವಿಶ್ವವೇ ಬೆಂಗಳೂರನ್ನ ನೋಡುತ್ತಿದೆ. ಹೆಸರು ಬದಲಾವಣೆ ವಿಚಾರವಾಗಿ ಸಿಎಂಗೆ ಮನವಿ ಪತ್ರ ಕೊಟ್ಟಿದ್ದಾರೆ. ರಾಮನಗರ, ಚನ್ನಪಟ್ಟಣ, ಮಾಗಡಿ ಮುಖಂಡರು ಬಂದು ನನ್ನ ನೇತೃತ್ವದಲ್ಲಿ ಮನವಿ ಸಲ್ಲಿಕೆ ಮಾಡಿದ್ದಾರೆ. ಬೆಂಗಳೂರು ದಕ್ಷಿಣ ಜಿಲ್ಲೆ ಮಾಡಬೇಕು ಎಂದು ಹೇಳಿದ್ದಾರೆ" ಎಂದು ತಿಳಿಸಿದ್ದಾರೆ.
"ಹೆಸರು ಬದಲಾವಣೆ ನಂತರ ಅಭಿವೃದ್ಧಿ ಕೆಲಸಗಳು ಕೂಡ ಬೇಗ ಆಗಲಿವೆ. ಪಕ್ಕದಲ್ಲೆ ಆಂಧ್ರ ಪ್ರದೇಶ, ತಮಿಳುನಾಡು ಇದೆ. ಕೈಗಾರಿಕೆಗಳಿಗೂ ಅನುಕೂಲ ಆಗಲಿದೆ. ಬೆಂಗಳೂರು ಹೆಸರನ್ನು ಉಳಿಸಿಕೊಳ್ಳಲು ನಮ್ಮ ಪ್ರಯತ್ನ ನಡೆಯುತ್ತಿದೆ. ರಾಮನಗರ, ಚನ್ನಪಟ್ಟಣ, ಕನಕಪುರ, ಮಾಗಡಿ, ಹಾರೋಹಳ್ಳಿ ತಾಲ್ಲೂಕುಗಳನ್ನು ಬೆಂಗಳೂರು ದಕ್ಷಿಣ ಜಿಲ್ಲೆಗೆ ಸೇರಿಸಲಾಗುತ್ತದೆ" ಎಂದು ಮಾಹಿತಿ ನೀಡಿದ್ದಾರೆ.












Click it and Unblock the Notifications