ರಾಮನಗರ ನೂತನ ಜಿಲ್ಲಾಧಿಕಾರಿ ರಾಕೇಶ್ ಕುಮಾರ್ ಪರಿಚಯ
ರಾಮನಗರ, ಮಾರ್ಚ್ 02; ರಾಮನಗರ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಡಾ. ರಾಕೇಶ್ ಕುಮಾರ್ ಕೆ. ಅಧಿಕಾರ ಸ್ವೀಕಾರ ಮಾಡಿದರು. ಇವರು 2012ನೇ ಬ್ಯಾಚ್ ಐಎಎಸ್ ಅಧಿಕಾರಿ.
ಮಂಗಳವಾರ ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ನಡೆದ ಸಮಾರಂಭದಲ್ಲಿ ನೂತನ ಜಿಲ್ಲಾಧಿಕಾರಿಗಳು ಅಧಿಕಾರ ಸ್ವೀಕರಿಸಿದರು. ಕರ್ನಾಟಕ ಸರ್ಕಾರ ರಾಮನಗರ ಜಿಲ್ಲಾಧಿಕಾರಿಯಾಗಿದ್ದ ಎಂ. ಎಸ್. ಅರ್ಚನಾರನ್ನು ಸೋಮವಾರ ವರ್ಗಾವಣೆ ಮಾಡಿತ್ತು.
ಸರ್ಕಾರ ರಾಮನಗರ ಉಪ ವಿಭಾಗಧಿಕಾರಿ ಡಾ. ಕೆ. ದಾಕ್ಷಾಯಿಣಿ ಅವರನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿತ್ತು. ಸ್ಥಳ ನೀರಿಕ್ಷಣೆಯಲ್ಲಿದ್ದ ಕೆಎಎಸ್ ಕಿರಿಯ ಶ್ರೇಣಿ ಅಧಿಕಾರಿ ಸಿ. ಮಂಜುನಾಥ್ರನ್ನು ಉಪ ವಿಭಾಗಾಧಿಕಾರಿಯಾಗಿ ನೇಮಕ ಮಾಡಲಾಗಿದೆ.

ಐಎಎಸ್ ಅಧಿಕಾರಿ ಪರಿಚಯ; ಡಾ. ರಾಕೇಶ್ ಕುಮಾರ್ ಬೆಂಗಳೂರಿನ ಜಿಕೆವಿಕೆಯಲ್ಲಿ ಕೃಷಿ ಪದವಿಯನ್ನು ಪಡೆದಿದ್ದಾರೆ. ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಅಗ್ರಿಕಲ್ಚರ್ ಸೈನ್ಸ್ ನಲ್ಲಿ ಎಂ.ಎಸ್ಸಿ ಪದವಿ ಹಾಗೂ ಪಿ.ಹೆಚ್.ಡಿಯೊಂದಿಗೆ ಡಾಕ್ಟರೇಟ್ ಪಡೆದುಕೊಂಡಿದ್ದಾರೆ.
2012ನೇ ಬ್ಯಾಚ್ ಐಎಎಸ್ ಅಧಿಕಾರಿ ಡಾ. ರಾಕೇಶ್ ಕುಮಾರ್ ಈ ಹಿಂದೆ ಜಮಖಂಡಿಯಲ್ಲಿ ಉಪವಿಭಾಗಾಧಿಕಾರಿಯಾಗಿ, ಶಿವಮೊಗ್ಗ ಜಿಲ್ಲಾ ಪಂಚಾಯತಿಯ ಮುಖ್ಯಕಾರ್ಯನಿರ್ವಾಹಕ ಅಧಿಕಾರಿ ಮತ್ತು ತುಮಕೂರು ಜಿಲ್ಲಾಧಿಕಾರಿಯಾಗಿ ಹಾಗೂ ಪ್ರವಾಸೋದ್ಯಮ ಇಲಾಖೆಯಲ್ಲಿ ನಿರ್ದೇಶಕರಾಗಿ ಕಾರ್ಯ ನಿರ್ವಹಿಸಿದ್ದಾರೆ.
ಅಧಿಕಾರ ಸ್ವೀಕರಿಸಿದ ಬಳಿಕ ಡಾ. ರಾಕೇಶ್ ಕುಮಾರ್ ಜಿಲ್ಲಾ ಸಂಕೀರ್ಣದಲ್ಲಿರುವ ಪ್ರವಾಸೋದ್ಯಮ ಇಲಾಖೆ, ವಿಕಲಚೇತನರ ಕಲ್ಯಾಣ ಇಲಾಖೆ, ಭೂದಾಖಲೆಗಳ ಉಪನಿರ್ದೇಶಕರ ಕಚೇರಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಹಾಗೂ ಇನ್ನಿತರ ಕಚೇರಿಗಳಿಗೆ ಭೇಟಿ ನೀಡಿ ಮಾಹಿತಿ ಪಡೆದುಕೊಂಡರು.












Click it and Unblock the Notifications