ನಾವು ಜೆಡಿಎಸ್ ಜೊತೆ ಮೈತ್ರಿ ಮಾಡಿಕೊಂಡು ಅನುಭವಿಸಿದ್ದೇವೆ: ಸಚಿವ ದಿನೇಶ್ ಗುಂಡೂರಾವ್ ಹೀಗೆ ಹೇಳಿದ್ದೇಕೆ?
ರಾಮನಗರ, ಸೆಪ್ಟೆಂಬರ್, 27: ನಾವು ಹಿಂದೆ ಜೆಡಿಎಸ್ ಜೊತೆ ಮೈತ್ರಿ ಮಾಡಿಕೊಂಡು ಅನುಭವಿಸಿದ್ದೇವೆ. ಈಗ ಮೈತ್ರಿ ಮಾಡಿಕೊಂಡಿರುವವರು ಅನುಭವಿಸಲಿದ್ದಾರೆ. ಇದು ಜೆಡಿಎಸ್ ಪಕ್ಷದ ಕೊನೆಯ ಹಂತ ಎನ್ನಬಹುದು ಎಂದು ಸಚಿವ ದಿನೇಶ್ ಗುಂಡೂರಾವ್ ರಾಮನಗರದಲ್ಲಿ ಲೇವಡಿ ಮಾಡಿದರು. ಇನ್ನು ಇದೇ ವೇಳೆ ಕಾವೇರಿ ವಿಚಾರವಾಗಿ ಮಾತನಾಡಿದರು. ಹಾಗಾದರೆ ಏನು ಹೇಳಿದ್ದಾರೆ ಎಂದು ಇಲ್ಲಿ ತಿಳಿಯಿರಿ.
ಕಾವೇರಿ ವಿವಾದ ಒಂದು ಸರ್ಕಾರಕ್ಕೆ ಸೀಮಿತವಾಗಿಲ್ಲ. ಅದು ಈ ಹಿಂದಿನ ಸಿಎಂ ಆಗಿದ್ದವರಿಗೆ ತಿಳಿದಿದೆ. ಕಾವೇರಿ ಪ್ರಾಧಿಕಾರದ ರಚನೆ ಬಳಿಕ ಅದರಲ್ಲಿ ಸುಪ್ರೀಂಕೋರ್ಟ್, ಉಭಯ ರಾಜ್ಯಗಳ ಸರ್ಕಾರ, ಕೇಂದ್ರ ಸರ್ಕಾರಗಳ ಪಾಲು ಇದೆ. ನಾವು ಕೂಡ ಇದಕ್ಕಾಗಿ ಕಾನೂನು ಹೋರಾಟ ನಡೆಸುತ್ತಿದ್ದೇವೆ. ಅಕ್ಟೊಂಬರ್ವರೆಗೂ ಅಷ್ಟೇ ನಮ್ಮಲ್ಲಿ ಮಳೆಯಾಗಬಹುದು. ಹೀಗಾಗಿ ಕನಿಷ್ಠ ಮಟ್ಟದಲ್ಲಿ ನೀರು ಬಿಡುವ ಪ್ರಯತ್ನ ನಡೆಸುತ್ತಿದ್ದೇವೆ ಎಂದರು.

ಇನ್ನು ವಿರೋಧ ಮಾಡುವುದೇ ವಿರೋಧ ಪಕ್ಷಗಳ ಕೆಲಸ. ರಾಜಕೀಯ ಲಾಭಕ್ಕಾಗಿ ಈ ಕೆಲಸ ಮಾಡುತ್ತಿರಬಹುದು. ಆದರೆ ಇರದಲ್ಲಿ ಅವರಿಗೆ ರಾಜಕೀಯ ಪ್ರತಿಫಲ ದೊರೆಯುವುದಿಲ್ಲ. ಜನರು ಬುದ್ಧಿವಂತರಿದ್ದಾರೆ. ಅವರಿಗೆ ಎಲ್ಲವೂ ತಿಳಿದಿದೆ ಎಂದರು. ಇನ್ನು ಹೋರಾಟಗಾರರ ಪರವಾಗಿ ನಮ್ಮ ಸರ್ಕಾರವೂ ಇದೆ. ಜನಪರ ಹೋರಾಟ ನಡೆಯುವುದೇ ಇದರ ಮೂಲ ಉದ್ದೇಶವಾಗಿರಲಿ. ಯಾವ ಬಂದ್ ಅನ್ನು ಕಾನೂನಿನ ಪ್ರಕಾರ ಮಾಡುವಂತಿಲ್ಲ. ಜನಪರ ಹೋರಾಟವಾಗಿದ್ದರಿಂದ ಶಾಂತಿಯುತ ಹೋರಾಟ ನಡೆಯಬೇಕು ಎಂದರು.
ತಮಿಳುನಾಡಿನ ಬೇಡಿಕೆಯನ್ನೂ ಸಹ ಕಾವೇರಿ ನದಿ ನೀರು ನಿರ್ವಹಣಾ ಪ್ರಾಧಿಕಾರ ಈಡೇರಿಸಿಲ್ಲ. ಪ್ರಾಧಿಕಾರ ಬೇಡಿಕೆಗಿಂತ ಕಡಿಮೆ ನೀರು ಬಿಡಲು ಹೇಳಿರುವುದು ನಮಗೂ ಒಳ್ಳೆಯದೇ ಆಗಿದೆ. ಹೀಗಾಗಿ ಈ ಸಂದರ್ಭದಲ್ಲಿ ಸೂಕ್ಷ್ಮವಾಗಿ ನಡೆಯಬೇಕಿದೆ ಎಂದು ರಾಮನಗರದಲ್ಲಿ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.
ನಮ್ಮ ಸಲಹೆ ಸ್ವೀಕರಿಸಿದರೆ ನೀರು ಉಳಿಯುತ್ತಿತ್ತು ಎಂಬ ಹೆಚ್.ಡಿ.ಕೆ ಹೇಳಿಕೆ ವಿಚಾರಕ್ಕೆ ಪ್ರತಿಕ್ರಿಯಿಸಿ, ಇದರಲ್ಲಿ ಯಾವುದೇ ಗಾಂಭೀರ್ಯತೆ ಇಲ್ಲ. ಜನರ ಒಳಿತಿಗೆ ಅವರೇ ಸಲಹೆ ನೀಡಬಹುದಿತ್ತು. ಅದನ್ನು ನಾವೇ ಕೇಳಬೇಕಿತ್ತಾ.? ಅವರು ಮಾಧ್ಯಮಕ್ಕೆ ಸುಮ್ಮನೆ ಹೇಳಿಕೆ ನೀಡುತ್ತಿದ್ದಾರೆ.
ರಾಜಕೀಯ ಹೇಳಿಕೆಗೆ ಅದನ್ನು ಬಳಸಿಕೊಳ್ಳಬಾರದು. ಕಾವೇರಿ ವಿಚಾರದಲ್ಲಿ ಎಲ್ಲರದ್ದೂ ಪಾತ್ರ ಇದೆ ಎಂದು ಟಾಂಗ್ ಕೊಟ್ಟರು.

ಕಾವೇರಿ ವಿಚಾರದಲ್ಲಿ ಕೇಂದ್ರ ಸರ್ಕಾರದ ಮಧ್ಯ ಪ್ರವೇಶ ಮಾಡಬೇಕು. ನಮ್ಮ ಭೇಟಿಗೂ ಅವರು ಅವಕಾಶ ನೀಡಿಲ್ಲ.
ದೆಹಲಿಗೆ ಹೋದರೂ ಸಮಯ ನಿಗಧಿ ಪಡಿಸುತ್ತಿಲ್ಲ. ಮತ್ತೊಂದೆಡೆ ನಮ್ಮ ರಾಜ್ಯದ ಸಂಸದರು ಏನು ಮಾಡುತ್ತಿಲ್ಲ. ಕೇವಲ ರಾಜಕೀಯ ಹೇಳಿಕೆ ಕೊಡುತ್ತಾ ಕುಳಿತುಕೊಂಡಿದ್ದಾರೆ ಎಂದು ಬಿಜೆಪಿ ವಿರುದ್ಧ ಸಚಿವ ದಿನೇಶ್ ಗುಂಡೂರಾವ್ ವಾಗ್ದಾಳಿ ನಡೆಸಿದರು.












Click it and Unblock the Notifications