ಕುಮಾರಸ್ವಾಮಿ ಸಿಎಂ ಆಗಿದ್ದಾಗ ರಾಮನಗರಕ್ಕೆ ಜಿಲ್ಲೆ ಪಟ್ಟ: ಶಾಸಕಿ ಅನಿತಾ ಕುಮಾರಸ್ವಾಮಿ
ರಾಮನಗರ, ಜುಲೈ 11: ಎಚ್.ಡಿ.ಕುಮಾರಸ್ವಾಮಿ ಮೊದಲ ಬಾರಿ ಸಿಎಂ ಆದಾಗ ರಾಮನಗರವನ್ನು ಜಿಲ್ಲೆಯನ್ನಾಗಿ ಮಾಡಿದರು. ಅಲ್ಲದೆ ಸಾವಿರಾರು ಕೋಟಿ ಅನುದಾನ ಬಿಡುಗಡೆ ಮಾಡುವ ಮೂಲಕ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಕಾರಣರಾದರು ಎಂದು ಶಾಸಕಿ ಅನಿತಾ ಕುಮಾರಸ್ವಾಮಿ ತಿಳಿಸಿದ್ದಾರೆ.
ತಾಲೂಕಿನ ಹಳ್ಳಿಮಾಳ ಗ್ರಾಮದಲ್ಲಿ ಜೆಡಿಎಸ್ ಪಕ್ಷದಿಂದ ಆಯೋಜಿಸಿದ್ದ ರಂಗೋಲಿ ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಲು ಆಗಮಿಸಿದ್ದ ಅವರು, ತಮ್ಮ ಪತಿ ಹಾಗೂ ಮಾಜಿ ಸಿಎಂ ಕುಮಾರಸ್ವಾಮಿ ಬಗ್ಗೆ ಪ್ರಶಂಸೆ ವ್ಯಕ್ತಪಡಿಸಿದರು. ಕುಮಾರಸ್ವಾಮಿ ಹಲವಾರು ಜನಪರ ಕಾರ್ಯಕ್ರಮಗಳನ್ನು ನೀಡಿ ಇಡೀ ದೇಶದಲ್ಲಿಯೇ ಉತ್ತಮ ಮುಖ್ಯಮಂತ್ರಿ ಎಂಬ ಬಿರುದು ಗಳಿಸಿದ್ದರು ಎಂದು ಹೇಳಿದರು.
ಮೊದಲ ಬಾರಿ ಮುಖ್ಯಮಂತ್ರಿಯಾದಾಗ ರಾಮನಗರವನ್ನು ಕುಮಾರಸ್ವಾಮಿ ಜಿಲ್ಲೆಯನ್ನಾಗಿ ಮಾಡಿದರು, ಎರಡನೇ ಬಾರಿ ಸಿಎಂ ಆದಾಗ ಜಿಲ್ಲೆಯ ಜನರಿಗೆ ಕುಡಿಯುವ ನೀರು ಒದಗಿಸಿಕೊಡಲು 456 ಕೋಟಿ ವೆಚ್ಚದಲ್ಲಿ ಸತ್ತೇಗಾಲ ಏತ ನೀರಾವರಿ ಯೋಜನೆಗೆ ಚಾಲನೆ ನೀಡಿದರು, ಇದೀಗ ಅದು ಅನುಷ್ಠಾನಗೊಳಿಸಲಾಗುತ್ತಿದೆ. ಇದು ಪೂರ್ಣಗೊಂಡರೆ ದಿನದ 24 ತಾಸು ಜಿಲ್ಲೆಯ ಕುಡಿಯುವ ನೀರಿನ ಸೌಲಭ್ಯ ದೊರೆಯಲಿದೆ.

ಜನರ ನಂಬಿಕೆ ಉಳಿಸಿಕೊಳ್ಳಲು ಪ್ರಾಮಾಣಿಕ ದುಡಿಮೆ
ಕೃಷಿ ಉದ್ದೇಶಕ್ಕಾಗಿ ಹಲವಾರು ಸಣ್ಣಸಣ್ಣ ಏತ ನೀರಾವರಿ ಯೋಜನೆಗಳು ಪ್ರಗತಿಯಲ್ಲಿವೆ. ರಸ್ತೆ ಅಭಿವೃದ್ಧಿ, ಸ್ವಚ್ಛತೆ ಸೇರಿದಂತೆ ಮೂಲಭೂತ ಸೌಕರ್ಯಗಳ ಅಭಿವೃದ್ಧಿಗೆ ಒತ್ತು ನೀಡಿದ್ದೇನೆ. ನಮ್ಮ ಕುಟುಂಬದ ಮೇಲೆ ಜಿಲ್ಲೆಯ ಜನರಿಟ್ಟಿರುವ ನಂಬಿಕೆಯನ್ನು ಉಳಿಸಿಕೊಳ್ಳಲು ನಾನು ಪ್ರಾಮಾಣಿಕವಾಗಿ ದುಡಿಯುತ್ತಿದ್ದೇನೆ. ಮುಂದೆಯೂ ನಮ್ಮ ಕುಟುಂಬದ ಮೇಲೆ ನಿಮ್ಮ ಆಶೀರ್ವಾದ ಹೀಗೇ ಮುಂದುವರಿಯಲಿ ಎಂದು ಮನವಿ ಮಾಡಿಕೊಂಡರು.

ಮಹಿಳೆಯರಿಗೆ ಉತ್ತಮ ಆರೋಗ್ಯ ಸೌಲಭ್ಯದ ಗುರಿ
ಗ್ರಾಮೀಣ ಮಹಿಳೆಯರು ತಮ್ಮ ಕುಟುಂಬದ ಪೋಷಣೆಗಾಗಿ ಹಗಲಿರುಳು ದುಡಿಯುತ್ತಾರೆ. ತಮ್ಮ ಆರೋಗ್ಯವನ್ನೂ ಲೆಕ್ಕಿಸದೆ ತಮ್ಮ ಜೀವನವನ್ನು ಕುಟುಂಬಕ್ಕಾಗಿಯೇ ಮೀಸಲಿಟ್ಟಿದ್ದಾರೆ. ಈ ಹಿನ್ನೆಲೆಯಲ್ಲಿ ಮಹಿಳೆಯರು ಅನಾರೋಗ್ಯಕ್ಕೀಡಾಗುತ್ತಿದ್ದಾರೆ. ಗ್ರಾಮೀಣ ಮಹಿಳೆಯರಿಗೆ ಉತ್ತಮ ಆರೋಗ್ಯ ಸೌಲಭ್ಯಗಳನ್ನು ಒದಗಿಸಬೇಕೆಂಬುದು ನನ್ನ ಆಶಯವಾಗಿದೆ. ಮುಂದಿನ ದಿನಗಳಲ್ಲಿ ಗ್ರಾಮೀಣ ಭಾಗದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರಗಳನ್ನು ಹಮ್ಮಿಕೊಳ್ಳಲಾಗುವುದು ಎಂದರು.

ಜೆಡಿಎಸ್ ಅಧಿಕಾರ ಪಕ್ಕ
ಇಂದು ಮಹಿಳೆ ಎಲ್ಲಾ ಕ್ಷೇತ್ರಗಳಲ್ಲೂ ಪುರುಷರಿಗೆ ಸರಿಸಮನಾಗಿ ದುಡಿಯುತ್ತಿದ್ದಾಳೆ. ಪುರುಷರಂತೆಯೇ ಮಹಿಳೆಯರಿಗೂ ಉದ್ಯೋಗಾವಕಾಶಗಳನ್ನು ದೊರಕಿಸಿಕೊಡಬೇಕು. ನಿಮ್ಮೆಲ್ಲರ ಪ್ರತಿನಿಧಿಯಾಗಿ ಸದನದಲ್ಲಿ ಈ ವಿಚಾರವಾಗಿ ದನಿ ಎತ್ತಿದ್ದೇನೆ. 2023ರ ಚುನಾವಣೆ ನಂತರ ಜೆಡಿಎಸ್ ಅಧಿಕಾರಕ್ಕೆ ಬರುವುದು ನಿಶ್ಚಿತವಾಗಿದೆ. ಆಗ ಈ ಕೆಲಸವನ್ನು ನಾವು ಮಾಡುತ್ತೇವೆ ಎಂದು ಭರವಸೆ ನೀಡಿದ ಅನಿತಾ ಕುಮಾರಸ್ವಾಮಿ ನಮ್ಮ ಮೇಲಿನ ವಿಶ್ವಾಸ ಹೀಗೇ ಮುಂದುವರಿಯಲಿ ಎಂದು ಮನವಿ ಮಾಡಿದರು.

ಯುವ ಪೀಳಿಗೆಯವರಿಗೆ ಸಂಪ್ರದಾಯಗಳ ಅರಿವಿನ ಕೊರತೆ
ಮುಂಜಾನೆ ಎದ್ದು, ನೆಲವನ್ನು ಸೆಗಣಿಯಿಂದ ಸಾರಿಸಿ, ರಂಗೋಲಿ ಹಾಕುವುದು ಶುಭದ ಸಂಕೇತ. ಮನೆಯ ಮುಂದೆ ರಂಗೋಲಿ ಹಾಕಿದರೆ ಕೆಡುಕು ಉಂಟಾಗುವುದಿಲ್ಲ ಎಂಬ ನಂಬಿಕೆ ನಮ್ಮ ಹಿರಿಯರದಾಗಿತ್ತು. ಆದರೆ ಭಾರತೀಯ ಸಂಸ್ಕೃತಿಯ ಅವಿಭಾಜ್ಯ ಅಂಗವಾಗಿದ್ದ ರಂಗೋಲಿ ಆಧುನಿಕತೆಯ ಭರಾಟೆಯಲ್ಲಿ ನಿಧಾನವಾಗಿ ಕಣ್ಮರೆಯಾಗುತ್ತಿದೆ ಎಂದು ವಿಷಾದಿಸಿದರು. ನಾವಿಂದು ಆಚರಿಸುವ ಪ್ರತಿಯೊಂದು ಸಂಪ್ರದಾಯವೂ ವೈಜ್ಞಾನಿಕವಾದುದಾಗಿದೆ. ತಮ್ಮ ಅನುಭವದ ಆಧಾರದ ಮೇಲೆ ಪ್ರತಿಯೊಂದನ್ನೂ ಆಚರಿಸಿಕೊಂಡು ಬಂದಿದ್ದಾರೆ. ಆದರೆ, ಇಂದಿನ ಯುವ ಪೀಳಿಗೆಯವರಿಗೆ ಅರಿವಿನ ಕೊರತೆ ಸಂಪ್ರದಾಯಗಳ ಆಚರಣೆಯನ್ನು ನಿರ್ಲಕ್ಷಿಸುತ್ತಿದ್ದಾರೆ. ಕುಟುಂಬದ ಹಿರಿಯರು ಸಂಪ್ರದಾಯ ಆಚರಣೆಗಳ ಉಪಯುಕ್ತತೆ ಬಗ್ಗೆ ಯುವಜನತೆಗೆ ತಿಳಿಹೇಳಬೇಕು ಎಂದು ಸಲಹೆ ನೀಡಿದರು.
ಹಳ್ಳಿಮಾಳ ವೃತ್ತದಲ್ಲಿ ಆಯೋಜಸಿದ್ದ ರಂಗೋಲಿ ಸ್ಪರ್ಧೆಯಲ್ಲಿ ನೂರಾರು ಮಹಿಳೆಯರು ಉತ್ಸಾಹದಿಂದ ಪಾಲ್ಗೊಂಡಿದ್ದರು. ಪುಟಾಣಿ ಮಕ್ಕಳೂ ಸೇರಿದಂತೆ ಹಿರಿಯರೆನ್ನದೆ ಎಲ್ಲಾ ವಯೋಮಾನದ ಮಹಿಳೆಯುರು ಸ್ಪರ್ಧೆಯಲ್ಲಿ ಭಾಗವಹಿಸಿದ್ದರು. ಕೆಲ ಪುರುಷರು ರಂಗೋಲಿ ಬಿಡಿಸಲು ಸಹಾಯ ಮಾಡುತ್ತಿದ್ದುದು ವಿಶೇಷವಾಗಿತ್ತು.












Click it and Unblock the Notifications