204 ಕೋಟಿ ಮಾನನಷ್ಟ ಮೊಕದ್ದಮೆ ಹೂಡಿದ ಡಿ. ಕೆ. ಶಿವಕುಮಾರ್
ರಾಮನಗರ, ಆಗಸ್ಟ್ 04 : ಮಾಜಿ ಸಚಿವ, ಕಾಂಗ್ರೆಸ್ ಹಿರಿಯ ನಾಯಕ ಡಿ. ಕೆ. ಶಿವಕುಮಾರ್ ಬಿಜೆಪಿ ಶಾಸಕರ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲು ಮಾಡಿದ್ದಾರೆ. 204 ಕೋಟಿ ರೂಪಾಯಿ ಮೊಕದ್ದಮೆಯ ವಿಚಾರಣೆ ಸೆ.18ಕ್ಕೆ ನಿಗದಿಯಾಗಿದೆ.
ಕೇಂದ್ರದ ಮಾಜಿ ಸಚಿವ, ವಿಜಯಪುರ ನಗರ ಕ್ಷೇತ್ರದ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಡಿ. ಕೆ. ಶಿವಕುಮಾರ್ 204 ಕೋಟಿ ರೂಪಾಯಿ ಮಾನನಷ್ಟ ಮೊಕದ್ದಮೆ ಹೂಡಿದ್ದಾರೆ. ನ್ಯಾಯಾಲಯ ಯತ್ನಾಳ್ಗೆ ಸಮನ್ಸ್ ಜಾರಿಗೊಳಿಸಿದೆ.
ಡಿ. ಕೆ. ಶಿವಕುಮಾರ್ ತಮ್ಮ ತವರು ಕ್ಷೇತ್ರ ಕನಕಪುರದ ಸೀನಿಯರ್ ಸಿವಿಲ್ ಜಡ್ಜ್ ಹಾಗೂ ಜೆಎಂಎಫ್ಸಿ ನ್ಯಾಯಾಲಯದಲ್ಲಿ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲು ಮಾಡಿದ್ದಾರೆ. ಅರ್ಜಿಯನ್ನು ನ್ಯಾಯಾಲಯ ವಿಚಾರಣೆಗೆ ಅಂಗೀಕರಿಸಿದೆ.
ಮೊಕದ್ದಮೆಯ ಮುಂದಿನ ವಿಚಾರಣೆ ಸೆಪ್ಟೆಂಬರ್ 18ಕ್ಕೆ ನಿಗದಿಯಾಗಿದೆ. ಅರ್ಜಿದಾರ ಡಿ.ಕೆ. ಶಿವಕುಮಾರ್ ನ್ಯಾಯಾಲಯಕ್ಕೆ ಚೆಕ್ ಮೂಲಕ 1 ಕೋಟಿ 4 ಲಕ್ಷದ 8 ಸಾವಿರ ರೂಪಾಯಿ ನ್ಯಾಯಾಲಯದ ಶುಲ್ಕವನ್ನು ಪಾವತಿ ಮಾಡಿದ್ದಾರೆ.

ಬಸನಗೌಡ ಪಾಟೀಲ್ ಯತ್ನಾಳ್
ಜೂನ್ 23ರಂದು ವಿಜಯಪುರದಲ್ಲಿ ಮಾತನಾಡಿದ್ದ ಬಸನಗೌಡ ಪಾಟೀಲ್ ಯತ್ನಾಳ್ ತಮ್ಮ ವಿರುದ್ಧ ಮಾನಹಾನಿಕರ ಹೇಳಿಕೆ ನೀಡಿದ್ದಾರೆ. "ಶಿವಕುಮಾರ್ ಅವರು ತಮ್ಮ ವಿರುದ್ಧ ದಾಖಲಾಗಿರುವ ಆದಾಯ ತೆರಿಗೆ ಇಲಾಖೆ, ಜಾರಿ ನಿರ್ದೇಶನಾಲಯದಪ್ರಕರಣಗಳಿಂದ ಮುಕ್ತಿಗೊಳಿಸಲು ಸಹಾಯ ಮಾಡುವಂತೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರು ಹಾಗೂ ಕೇಂದ್ರದ ಸಚಿವರುಗಳ ಮೇಲೆ ಒತ್ತಡ ಹಾಕುತ್ತಿದ್ದಾರೆ. ನನ್ನ ವಿರುದ್ಧದ ಪ್ರಕರಣಗಳನ್ನು ಮುಕ್ತಾಯ ಮಾಡಿದರೆ ಇದಕ್ಕೆ ಪ್ರತಿಯಾಗಿ ಕರ್ನಾಟಕದಲ್ಲಿ ಬಿಜೆಪಿ ಸರಕಾರ ಮಾಡಲು ನಾನು ವಿರೋಧ ಮಾಡುವುದಿಲ್ಲ ಅಂತ ಭರವಸೆ ನೀಡಿದ್ದಾರೆ" ಎಂದು ಯತ್ನಾಳ್ ಹೇಳಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

ಸತ್ಯಕ್ಕೆ ದೂರವಾದ ಹೇಳಿಕೆ
ಬಸನಗೌಡ ಪಾಟೀಲ್ ಯತ್ನಾಳ್ ಹೇಳಿಕೆ ಎಲೆಕ್ಟ್ರಾನಿಕ್ ಹಾಗೂ ಮುದ್ರಣ ಮಾಧ್ಯಮದಲ್ಲಿ ಪ್ರಸಾರವಾಗಿದೆ. ಅವರ ಸತ್ಯಕ್ಕೆ ದೂರವಾದದ್ದು. ಈ ಹೇಳಿಕೆಯಿಂದ ತಮ್ಮ ಪ್ರಾಮಾಣಿಕತೆ, ನೈತಿಕತೆ, ಪ್ರತಿಷ್ಠೆ ಹಾಗೂ ವರ್ಚಸ್ಸಿಗೆ ಧಕ್ಕೆಯಾಗಿದೆ. ಆಧಾರರಹಿತ, ದುರುದ್ದೇಶಪೂರ್ವಕ ಹಾಗೂ ಬೇಜವಾಬ್ದಾರಿಯಿಂದ ಈ ಹೇಳಿಕೆಗಳನ್ನು ನೀಡಿದ್ದರಿಂದ ತಮ್ಮ ವರ್ಚಸ್ಸಿಗೆ ಧಕ್ಕೆಯಾಗಿದೆ ಎಂದು ಡಿ. ಕೆ. ಶಿವಕುಮಾರ್ ಅರ್ಜಿಯಲ್ಲಿ ದೂರಿದ್ದಾರೆ.

ನ್ಯಾಯಾಲಯದಲ್ಲಿ ವಿಚಾರಣೆ ನಡೆಯುತ್ತಿದೆ
ತಮ್ಮ, ಕುಟುಂಬ ಸದಸ್ಯರ ವಿರುದ್ಧ ಐಟಿ ಮತ್ತು ಇಡಿ ದಾಖಲು ಮಾಡಿರುವ ಪ್ರಕರಣಗಳ ಸಂಬಂಧ ನಾನಾ ನ್ಯಾಯಾಲಯಗಳಲ್ಲಿ ವಿಚಾರಣೆ ನಡೆಯುತ್ತಿದೆ. ಆದರೆ, ಯತ್ನಾಳ್ ಮಾಡಿರುವ ಈ ಸುಳ್ಳು ಆರೋಪವು ಕಾನೂನು ಸಂಸ್ಥೆಗಳ ದಿಕ್ಕುತಪ್ಪಿಸುವ ಹಾಗೂ ಅವುಗಳ ಮೇಲೆ ಪ್ರಭಾವ ಬೀರುವ ಹುನ್ನಾರದಿಂದ ಕೂಡಿದೆ. ತಾವು ಪ್ರತಿನಿಧಿಸುತ್ತಿರುವ ಕನಕಪುರ ವಿಧಾನಸಭೆ ಕ್ಷೇತ್ರದ ಮತದಾರರು, ಕಾಂಗ್ರೆಸ್ ಪಕ್ಷದ ಮುಖಂಡರು, ಕಾರ್ಯಕರ್ತರು, ಕರ್ನಾಟಕದ ಜನರು ತಮ್ಮನ್ನು ಅನುಮಾನದಿಂದ ನೋಡುವಂತೆ ಮಾಡಿದೆ ಎಂದು ಡಿ. ಕೆ. ಶಿವಕುಮಾರ್ ಅರ್ಜಿಯಲ್ಲಿ ಹೇಳಿದ್ದಾರೆ.

ಗೌರವಕ್ಕೆ ಚ್ಯುತಿ ತಂದಿದ್ದಾರೆ
ನನ್ನ ವೈಯಕ್ತಿಕ ಹಿತಾಸಕ್ತಿಗಾಗಿ ಪಕ್ಷ ಹಾಗೂ ಸಾರ್ವಜನಿಕರ ಹಿತ ಬಲಿಕೊಡಲು ಮುಂದಾಗಿದ್ದೇನೆ ಎಂಬ ಭಾವನೆ ಮೂಡುವಂತೆ ಯತ್ನಾಳ್ ಹೇಳಿಕೆ ನೀಡಿದ್ದಾರೆ. ಕಾಂಗ್ರೆಸ್ ಹಾಗೂ ಜೆಡಿಎಸ್ ಮೈತ್ರಿ ಸರಕಾರ ರಚನೆಯಲ್ಲಿ ಪ್ರಮುಖ ಪಾತ್ರ ವಹಿಸಿದ ತಮ್ಮನ್ನು ಅದೇ ಸರಕಾರ ಅಸ್ಥಿರಗೊಳಿಸಲು ಮುಂದಾಗಿದ್ದೇನೆ ಎಂಬರ್ಥ ಬರುವ ಹೇಳಿಕೆ ನೀಡುವ ಮೂಲಕ ಯತ್ನಾಳ್ ತಮ್ಮ ಪ್ರಾಮಾಣಿಕತೆ, ಘನತೆ ಹಾಗೂ ಗೌರವಕ್ಕೆ ಚ್ಯುತಿ ತಂದಿದ್ದಾರೆ ಎಂದು ಶಿವಕುಮಾರ್ ಆರೋಪ ಮಾಡಿದ್ದಾರೆ.

ದೆಹಲಿಗೆ ಭೇಟಿ ನೀಡಿದ್ದು ನಿಜ
ಹಿಂದಿನ ಮೈತ್ರಿ ಸರಕಾರದಲ್ಲಿ ಜಲ ಸಂಪನ್ಮೂಲ ಸಚಿವರಾಗಿದ್ದ ತಾವು ಕೆಲವು ಬಾರಿ ದಿಲ್ಲಿಗೆ ಅಧಿಕೃತ ಭೇಟಿ ನೀಡಿರುವುದು ನಿಜ. ಜೂನ್ 12 ರಿಂದ ಜೂನ್ 19 ರ ನಡುವೆ ಇಂಥ ಪ್ರವಾಸ ಮಾಡಿದಾಗ ಕೇಂದ್ರದ ಕೆಲವು ಸಚಿವರುಗಳನ್ನು ಭೇಟಿ ಮಾಡಿ ಮಹದಾಯಿ, ಮೇಕೆದಾಟು ಸೇರಿದಂತೆ ಕರ್ನಾಟಕದ ನಾನಾ ಜಲ ಸಂರಕ್ಷಣೆ, ಕುಡಿಯುವ ನೀರಿನ ಯೋಜನೆಗಳ ಅನುಷ್ಠಾನಕ್ಕೆ ನೆರವಾಗುವಂತೆ ಮನವಿ ಮಾಡಿದ್ದೇನೆ. ಆದರೆ, ಯತ್ನಾಳ್ ಮಾಡಿರುವ ಆರೋಪ ಸುಳ್ಳು ಎಂದು ಡಿ. ಕೆ. ಶಿವಕುಮಾರ್ ಹೇಳಿದ್ದಾರೆ.











Click it and Unblock the Notifications