ಕನಕಪುರದಲ್ಲಿ ವೈದ್ಯಕೀಯ ಕಾಲೇಜಿಗೆ ಆಗ್ರಹಿಸಿ ಸಿಎಂಗೆ ಡಿಕೆಶಿ ಪತ್ರ
ರಾಮನಗರ, ಡಿಸೆಂಬರ್ 7: ಜಿಲ್ಲೆಯ ಕನಕಪುರಕ್ಕೆ ಮಂಜೂರಾಗಿದ್ದ ವೈದ್ಯಕೀಯ ಕಾಲೇಜನ್ನು ರದ್ದುಪಡಿಸಿರುವ ಆದೇಶವನ್ನು ಹಿಂತೆಗೆದುಕೊಂಡು ಕನಕಪುರದಲ್ಲೇ ಮೆಡಿಕಲ್ ಕಾಲೇಜು ಸ್ಥಾಪನೆಗೆ ಮರು ಆದೇಶ ಹೊರಡಿಸಬೇಕೆಂದು ಆಗ್ರಹಿಸಿ ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಬರೆದಿದ್ದಾರೆ.
ಕಳೆದ ಕೈ-ದಳ ಸಮ್ಮಿಶ್ರ ಸರ್ಕಾರದ ಅವಧಿಯಲ್ಲಿ ಕನಕಪುರಕ್ಕೆ ಮಂಜೂರಾಗಿದ್ದ ಮೆಡಿಕಲ್ ಕಾಲೇಜನ್ನು ಬಿಜೆಪಿ ಸರ್ಕಾರ ಬಂದ ನಂತರ ಚಿಕ್ಕಬಳ್ಳಾಪುರಕ್ಕೆ ಸ್ಥಳಾಂತರ ಮಾಡಿ ಶಂಕುಸ್ಥಾಪನೆ ಮಾಡಲಾಗಿದೆ. ಈ ಮೆಡಿಕಲ್ ಕಾಲೇಜು ವಿಚಾರವೇ ಉಪ ಚುನಾವಾಣೆಯಲ್ಲಿ ಆರೋಪ ಮತ್ತು ಪ್ರತ್ಯಾರೋಪಗಳಿಗೆ ಕಾರಣವಾಗಿತ್ತು.

ಉಪ ಚುನಾವಣೆ ಮುಗಿದ ತಕ್ಷಣವೇ ಸಕ್ರಿಯವಾಗಿರುವ ಮಾಜಿ ಸಚಿವ ಡಿ.ಕೆ.ಶಿವಕುಮಾರ್, ಸಿಎಂ ಯಡಿಯೂರಪ್ಪ ಅವರಿಗೆ ಪತ್ರ ಬರೆದು ಮೆಡಿಕಲ್ ಕಾಲೇಜು ನಿರ್ಮಾಣಕ್ಕೆ ಆಗ್ರಹಿಸಿ ಹೋರಾಟದ ಎಚ್ಚರಿಕೆಯ ಅಂಶವನ್ನೂ ಪ್ರಸ್ತಾಪಿಸಿದ್ದಾರೆ. ಚಿಕ್ಕಬಳ್ಳಾಪುರಕ್ಕೆ ಮೆಡಿಕಲ್ ಕಾಲೇಜು ಕೊಟ್ಟಿರುವುದಕ್ಕೆ ನನ್ನ ಅಭ್ಯಂತರವಿಲ್ಲ. ಆದರೆ ಕನಕಪುರಕ್ಕೆ ಮಂಜೂರಾಗಿದ್ದನ್ನು ರದ್ದುಮಾಡಿರುವುದಕ್ಕೆ ಆಕ್ಷೇಪವಿದೆ. ಕೂಡಲೇ ಕನಕಪುರಕ್ಕೆ ಮೆಡಿಕಲ್ ಕಾಲೇಜು ಮಂಜೂರು ಮಾಡಬೇಕು" ಎಂದು ಕೇಳಿದ್ದಾರೆ.
ಒಂದು ವೇಳೆ ಕನಕಪುರಕ್ಕೆ ಮೆಡಿಕಲ್ ಕಾಲೇಜು ನೀಡದಿದ್ದರೆ ನನ್ನದೇ ಹಾದಿಯಲ್ಲಿ ಗಂಭೀರ ಹೋರಾಟ ಮಾಡುವೆ. ಇದಕ್ಕೆ ಅವಕಾಶ ಮಾಡಿಕೊಡುವುದಿಲ್ಲ ಎಂದುಕೊಂಡಿದ್ದೇನೆ ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.












Click it and Unblock the Notifications