ಜಗದಾಪುರ ಚೆಕ್ ಪೋಸ್ಟ್ ಬಳಿ ಸೂಕ್ತ ದಾಖಲೆಗಳಿಲ್ಲದ 38 ಲಕ್ಷ ರೂಪಾಯಿ ಹಣ ವಶಪಡಿಸಿಕೊಂಡ ಚುನಾವಣಾಧಿಕಾರಿಗಳು
ರಾಮನಗರ, ಏಪ್ರಿಲ್, 11: 2023ರ ಸಾರ್ವತ್ರಿಕ ವಿಧಾನಸಭಾ ಚುನಾವಣೆಗೆ ಇನ್ನೂ ಕೇವಲ 30 ದಿನಗಳು ಮಾತ್ರ ಬಾಕಿ ಇದೆ. ಇಂತಹ ಸಂದರ್ಭದಲ್ಲಿಯೇ ಹೈ ವೋಲ್ಟೇಜ್ ಕ್ಷೇತ್ರ ಎಂದು ಬಿಂಬಿತವಾಗಿರುವ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದಲ್ಲಿ ಕುರುಡು ಕಾಂಚಾಣ ಸದ್ದು ಮಾಡುತ್ತಿದ್ದು, ಸೋಮವಾರ (ಏಪ್ರಿಲ್ 10) ಯಾವುದೇ ದಾಖಲೆಗಳಿಲ್ಲದೆ ಸಾಗಿಸುತ್ತಿದ್ದ 38 ಲಕ್ಷ ರೂಪಾಯಿಗಳನ್ನು ಜಗದಾಪುರ ಚೆಕ್ ಪೋಸ್ಟ್ನಲ್ಲಿ ಚುನಾವಣಾಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.
ಮಳವಳ್ಳಿ ತಾಲೂಕಿನ ಗಡಿಯಲ್ಲಿ ಅಕ್ರಮ ಚಟುವಟಿಕೆಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ಚೆಕ್ಪೋಸ್ಟ್ ಸ್ಥಾಪಿಸಲಾಗಿದ್ದು, ಇಲ್ಲಿ ಸೋಮವಾರ ಸೂಕ್ತ ದಾಖಲೆಯಿಲ್ಲದೇ ಅಕ್ರಮವಾಗಿ ಸಾಗಿಸುತ್ತಿದ್ದ 38 ಲಕ್ಷ ರೂಪಾಯಿ ಹಣ ಸಾಗಿಸುತ್ತಿದ್ದ ಕಾರನ್ನು ಚುನಾವಣಾ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.

ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನಿಂದ ಹಲಗೂರು ಮೂಲಕ ರಾಮನಗರ ಜಿಲ್ಲೆಯ ಚನ್ನಪಟ್ಟಣದ ಕಡೆ ಹೊರಟಿದ್ದ ಯಲ್ಲೊ ಬೋರ್ಡ್ ಸ್ವಿಪ್ಟ್ ಕಾರನ್ನು ಮದಾಪುರ ಗ್ರಾಮದ ಬಳಿ ನಿರ್ಮಿಸಿರುವ ಚೆಕ್ ಪೋಸ್ಟ್ನಲ್ಲಿ ತಪಾಸಣೆ ನಡೆಸಲಾಗಿದೆ. ಈ ವೇಳೆ ಯಾವುದೇ ದಾಖಲೆಯಿಲ್ಲದೆ ಹಣವನ್ನು ಸಾಗಿಸುತ್ತಿರುವುದು ಪತ್ತೆಯಾಗಿದ್ದು, ಕಾರು ಸಮೇತ ಅಕ್ರಮ ಹಣವನ್ನು ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.
38 ಲಕ್ಷ ರೂಪಾಯಿ ಅಕ್ರಮ ಹಣ ಪತ್ತೆ
ಚುನಾವಣಾ ಅಧಿಕಾರಿಗಳು ವಾಹನ ತಪಾಣೆ ನಡೆಸುವಾಗ KA-42-A-7007 ಸಂಖ್ಯೆಯ ಯಲ್ಲೊ ಬೋರ್ಡ್ ಸ್ವಿಪ್ಟ್ ಕಾರ್ನಲ್ಲಿ 38 ಲಕ್ಷ ರೂಪಾಯಿ ಅಕ್ರಮ ಹಣ ಪತ್ತೆಯಾಗಿದೆ. ಆಗ ತಕ್ಷಣವೇ ಹಣ ಹಾಗೂ ವಾಹನ ಜಪ್ತಿ ಮಾಡಿದ ಅಧಿಕಾರಿಗಳು ಈ ಪ್ರಕರಣದ ತನಿಖೆಯನ್ನು ಐಟಿ ಅಧಿಕಾರಿಗಳಿಗೆ ರವಾನಿಸಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.
ಚುನಾವಣಾ ಅಧಿಕಾರಿಗಳಿಂದ ಮಾಹಿತಿ ಪಡೆದ ಐಟಿ ಅಧಿಕಾರಿಗಳು ಹಣ ಸಾಗಿಸುತ್ತಿದ್ದ ವ್ಯಕ್ತಿಯನ್ನು ತಾಲೂಕು ಕಛೇರಿಗೆ ಕರೆತಂದು ಹಣದ ಮೂಲವನ್ನು ಪತ್ತೆಹಚ್ಚಲು ವಿಚಾರಣೆ ನಡೆಸಿದ್ದಾರೆ. ಅಲ್ಲದೇ ಚನ್ನಪಟ್ಟಣ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಅಕ್ರಮ ಹಣ ಸಾಗಣೆ ಸಂಬಂಧ ಪ್ರಕರಣ ದಾಖಲಿಸಿದ್ದಾರೆ.

ಚುನಾವಾಣಾ ಅಕ್ರಮಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ಜಿಲ್ಲಾಡಳಿತ ಜಿಲ್ಲಾ ವ್ಯಾಪ್ತಿಯಲ್ಲಿ ಸುಮಾರ 17 ಚೆಕ್ ಪೋಸ್ಟ್ಗಳನ್ನು ನಿರ್ಮಾಣ ಮಾಡಿದೆ. ಜಿಲ್ಲೆಗೆ ಅಕ್ರಮವಾಗಿ ಪ್ರವೇಶ ಮಾಡುವ ಹಣ ಹಾಗೂ ಮತದಾರನ್ನು ಸೆಳೆಯಲು ಉಡುಗೊರೆ, ವಸ್ತುಗಳನ್ನು ಸಾಗಿಸುವ ವ್ಯಕ್ತಿಗಳ ಮೇಲೆ ಜಿಲ್ಲಾಡಳಿತ ನಿಗಾ ಇಟ್ಟಿದ್ದು, ಈಗಾಗಲೇ ಹಲವು ಅಕ್ರಮ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ ಎನ್ನುವ ಮಾಹಿತಿ ತಿಳಿದುಬಂದಿದೆ.
9,96,542 ರೂ. ಮೌಲ್ಯದ ಅಕ್ರಮ ಮದ್ಯ ಜಪ್ತಿ
ರಾಜ್ಯದಲ್ಲಿ ವಿಧಾನಸಭಾ ಚುನಾವಣಾ ಕಾವು ದಿನದಿಂದ ಏರುತ್ತಲೇ ಇದೆ. ಹಾಗೆಯೇ ಈ ಸಮಯದಲ್ಲಿ ಅಬಕಾರಿ ಇಲಾಖೆ ಅಧಿಕಾರಿಗಳು ಎಲ್ಲೆಡೆ ಅಲರ್ಟ್ ಆಗಿದ್ದು, ಅಕ್ರಮ ಚಟುವಟಿಕೆಗಳಿಗೆ ಕಡಿವಾಣ ಹಾಕಲು ಮುಂದಾಗಿದ್ದಾರೆ. ಹೀಗೆ ದಾವಣಗೆರೆ ಜಿಲ್ಲಾ ವ್ಯಾಪ್ತಿಯಲ್ಲಿ 9,96,542 ರೂಪಾಯಿ ಮೌಲ್ಯದ ಅಕ್ರಮ ಮದ್ಯ, ಬಿಯರ್ ಹಾಗೂ ದ್ವಿಚಕ್ರ ವಾಹನವನ್ನು ಅಬಕಾರಿ ಇಲಾಖೆ ಜಪ್ತಿ ಪಡಿಸಿಕೊಂಡಿದೆ.
ಅಲ್ಲದೇ ಈ ಸಂಬಂಧ ಒಟ್ಟಾರೆ 101 ಪ್ರಕರಣಗಳನ್ನು ದಾಖಲಿಸಲಾಗಿದೆ ಎಂದು ಜಿಲ್ಲಾ ಅಬಕಾರಿ ಉಪ ಆಯುಕ್ತರು ಮಾಹಿತಿ ನೀಡಿದ್ದಾರೆ. ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಜಿಲ್ಲಾ ವ್ಯಾಪ್ತಿಯಲ್ಲಿ ಅಕ್ರಮ ಚಟುವಟಿಕೆಗಳನ್ನು ತಡೆಗಟ್ಟುವ ಸಲುವಾಗಿ ಜಾರಿ ಮತ್ತು ತನಿಖಾ ಕಾರ್ಯಗಳನ್ನು ಚುರುಕುಗೊಳಿಸಿ ದಾಳಿಯನ್ನು ನಡೆಸಲಾಗಿದೆ.
ಮಾರ್ಚ್ 29ರಿಂದ ಏಪ್ರಿಲ್ 9ರವರೆಗೆ 556.335 ಲೀಟರ್ ಮದ್ಯ, 70.870 ಲೀಟರ್ ಬಿಯರ್ ಹಾಗೂ 20 ದ್ವಿಚಕ್ರ ವಾಹನಗಳು ಸೇರಿದಂತೆ ಒಟ್ಟು 9,96,542 ರೂಪಾಯಿ ಮೊತ್ತದ ದಾಸ್ತಾನನ್ನು ವಶಪಡಿಸಿಕೊಳ್ಳಲಾಗಿದೆ.
ಮದ್ಯ ಸಾಗಾಣಿಕೆ, ದಾಸ್ತಾನು ಕುರಿತಂತೆ 27 ಘೋರ ಮೊಕದ್ದಮೆಗಳು, ಸಾರ್ವಜನಿಕ ಸ್ಥಳಗಳಲ್ಲಿ ಮದ್ಯ ಮಾರಾಟ ಕುರಿತು 55 ಮೊಕದ್ದಮೆಗಳು ಹಾಗೂ ಮದ್ಯದಂಗಡಿಗಳಲ್ಲಿನ ಸನ್ನದು ಷರತ್ತುಗಳ ಉಲ್ಲಂಘನೆಗಾಗಿ 19 ಬಿ.ಎಲ್.ಸಿ ಮೊಕದ್ದಮೆಗಳನ್ನು ಒಳಗೊಂಡಂತೆ ಒಟ್ಟಾರೆಯಾಗಿ 101 ಪ್ರಕರಣಗಳನ್ನು ದಾಖಲಿಸಿಕೊಳ್ಳಲಾಗಿದೆ ಎಂದು ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದಾರೆ.












Click it and Unblock the Notifications