ರಾಮನಗರದಲ್ಲಿ ಕುಮಾರಸ್ವಾಮಿ ವಿರುದ್ಧ ತೇಜಸ್ವಿನಿ ಸ್ಪರ್ಧೆ?
ಬೆಂಗಳೂರು, ಏಪ್ರಿಲ್ 08: ಕನಕಪುರ ಲೋಕಸಭೆ ಕ್ಷೇತ್ರದಲ್ಲಿ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಅವರನ್ನು ಸೋಲಿಸಿದ್ದ ತೇಜಸ್ವಿನಿ ಗೌಡ ಅವರು ಈ ಬಾರಿ ರಾಮನಗರ ವಿಧಾನಸಭೆ ಕ್ಷೇತ್ರದಲ್ಲಿ ದೇವೇಗೌಡರ ಪುತ್ರ ಎಚ್. ಡಿ ಕುಮಾರಸ್ವಾಮಿ ವಿರುದ್ಧ ಸೆಣಸಲು ಮುಂದಾಗಿದ್ದಾರೆ ಎಂಬ ಸುದ್ದಿ ಬಂದಿದೆ.
ರಾಮನಗರ ಮತ್ತು ಚನ್ನಪಟ್ಟಣ ಎರಡು ಕ್ಷೇತ್ರಗಳಲ್ಲಿ ಎಚ್.ಡಿ. ಕುಮಾರಸ್ವಾಮಿ ಅವರು ಸ್ಪರ್ಧಿಸಲು ಸಿದ್ಧರಾಗುತ್ತಿದ್ದಾರೆ. ಚನ್ನಪಟ್ಟಣದಲ್ಲಿ ಸಿ.ಪಿ. ಯೋಗೇಶ್ವರ್ ಎದುರಾಳಿಯಾಗಿದ್ದರೆ, ರಾಮನಗರದಲ್ಲಿ ತೇಜಸ್ವಿನಿ ಗೌಡ ಅವರನ್ನು ಕಣಕ್ಕಿಳಿಸಲು ಬಿ.ಜೆ.ಪಿ. ಹೈಕಮಾಂಡ್ ನಾಯಕರು ನಿರ್ಧರಿಸಿದ್ದಾರೆ ಎಂಬ ಮಾಹಿತಿಯಿದೆ.
ಮೊದಲಿಗೆ ಚುನಾವಣೆಯಲ್ಲಿ ಸ್ಪರ್ಧಿಸದಿರಲು ತೇಜಸ್ವಿನಿ ಗೌಡ ಅವರು ನಿರ್ಧರಿಸಿದ್ದರಾದರೂ, ಪಕ್ಷದ ನಾಯಕರ ಸೂಚನೆ ಮೇರೆಗೆ ಸ್ಪರ್ಧಿಸಲು ಮುಂದಾಗಿದ್ದಾರೆ. ರಾಮನಗರದಲ್ಲಿ ಮಾಜಿ ಸಂಸದೆ ತೇಜಸ್ವಿನಿ ಗೌಡ ಅವರು ಸ್ಪರ್ಧಿಸುವುದು ಖಚಿತವಾಗಿದೆ. ರಾತ್ರಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆಯಾಗಲಿದ್ದು, ಕುತೂಹಲಕ್ಕೆ ತೆರೆ ಬೀಳುವ ಸಾಧ್ಯತೆ ಇದೆ.
2004ರಲ್ಲಿ ಬೆಂಗಳೂರಿನ ಕನಕಪುರ ಲೋಕಸಭಾ ಕ್ಷೇತ್ರದಲ್ಲಿ ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ಅವರನ್ನು 1.22 ಲಕ್ಷಕ್ಕೂ ಅಧಿಕ ಮತಗಳ ಅಂತರದಿಂದ ಸೋಲಿಸಿ ಸಂಸತ್ತು ಪ್ರವೇಶಿಸುವ ಮೂಲಕ ತೇಜಸ್ವಿನಿ ಅವರು ರಾಜಕೀಯವಾಗಿ ಗುರುತಿಸಿಕೊಂಡರು. ಇದಕ್ಕೂ ಮುನ್ನ ಉದಯ ಟಿವಿಯಲ್ಲಿ ನಿರೂಪಕಿ, ಸುದ್ದಿ ವಿಶ್ಲೇಷಕಿಯಾಗಿ ಕಾರ್ಯನಿರ್ವಹಿಸಿದ್ದರು. ನಂತರ ಮುಂದಿನ ಲೋಕಸಭೆಗೆ ಸ್ಪರ್ಧಿಸಲು ಕಾಂಗ್ರೆಸ್ಸಿನಲ್ಲಿ ಟಿಕೆಟ್ ಸಿಗದ ಕಾರಣ, ಡಿಕೆ ಸೋದರರ ಮೇಲೆ ಕಿರುಕುಳ ಆರೋಪ ಹೊರೆಸಿ, ಬಿಜೆಪಿ ಸೇರ್ಪಡೆಗೊಂಡರು.