ಸೂಕ್ತ ಚಿಕಿತ್ಸೆ ಸಿಗದೇ ವೃದ್ಧೆ ಸಾವಿನ ಆರೋಪ; ಕುಟುಂಬಸ್ಥರಿಂದ ಪ್ರತಿಭಟನೆ
ರಾಮನಗರ, ಸೆಪ್ಟೆಂಬರ್ 26: ಉಸಿರಾಟದ ಸಮಸ್ಯೆಯಿಂದಾಗಿ ಆಸ್ಪತ್ರೆಗೆ ದಾಖಲಾಗಿದ್ದ 65 ವರ್ಷದ ವೃದ್ಧೆಗೆ ಕೊರೊನಾ ಸೋಂಕು ಇಲ್ಲದಿದ್ದರೂ ಕೊರೊನಾ ವಾರ್ಡ್ ಗೆ ದಾಖಲಿಸಿಕೊಂಡು ಆಸ್ಪತ್ರೆಯ ಸಿಬ್ಬಂದಿ ವೃದ್ಧೆಯ ಸಾವಿಗೆ ಕಾರಣರಾಗಿದ್ದಾರೆ ಎಂದು ಆರೋಪಿಸಿ ವೃದ್ಧೆಯ ಕುಟುಂಬಸ್ಥರು ಜಿಲ್ಲಾಧಿಕಾರಿ ಕಚೇರಿ ಸಂಕಿರ್ಣದಲ್ಲಿ ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ತಾಲೂಕಿನ ಅಂಜನಾಪುರ ನಿವಾಸಿ 65 ವರ್ಷದ ಹೊನ್ನಮ್ಮ ಅವರನ್ನು ಕಳೆದ ವಾರ ಉಸಿರಾಟದ ಸಮಸ್ಯೆಯಿಂದಾಗಿ ಜಿಲ್ಲಾಸ್ಪತ್ರೆಯಲ್ಲಿ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿತ್ತು. ಮೊದಲಿಗೆ ಕೋವಿಡ್ ಟೆಸ್ಟ್ ಮಾಡಿಸಿದಾದ ನೆಗೆಟಿವ್ ಎಂದು ವರದಿ ಬಂದಿದೆ. ಸಮಸ್ಯೆ ಉಲ್ಬಣವಾದ ಕಾರಣ ಹೆಚ್ಚಿನ ಚಿಕಿತ್ಸೆಗಾಗಿ ಕೆಂಗೇರಿ ಬಳಿಯ ಆಸ್ಪತ್ರೆಗೆ ರವಾನೆ ಮಾಡಲಾಗಿತ್ತು. ಮುಂದೆ ಓದಿ...
ಕೋವಿಡ್ ಪರೀಕ್ಷೆ ಬಗ್ಗೆ ಗಂಭೀರ ಪ್ರಶ್ನೆ ಎತ್ತಿದ ಕಾಂಗ್ರೆಸ್ ಶಾಸಕ
ಕರೆ ಮಾಡಿ ದೂರಿದ್ದ ಹೊನ್ನಮ್ಮ
ವಾರದ ಬಳಿಕ ಹೊನಮ್ಮ ಮಗನಿಗೆ ಕರೆ ಮಾಡಿ ಇಲ್ಲಿ ಸರಿಯಾದ ಚಿಕಿತ್ಸೆ ಕೊಡುತ್ತಿಲ್ಲ. ನನಗೆ ನರಕ ಕಾಣುತ್ತಿದೆ ಎಂದು ಹೇಳಿಕೊಂಡಿದ್ದಾರೆ. ಅದಾದ ಎರಡು ದಿನದಲ್ಲೇ ಹೊನ್ನಮ್ಮ ಸಾವಿಗೀಡಾಗಿದ್ದಾರೆ. ಕೊರೊನಾ ನೆಗೆಟಿವ್ ಇದ್ದರೂ ಪಾಸಿಟಿವ್ ಎಂದು ಬಿಂಬಿಸಿ ಪಿಪಿಇ ಕಿಟ್ ಹಾಕಿ ಮೃತದೇಹವನ್ನು ಹಸ್ತಾಂತರ ಮಾಡಿದ್ದರು ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ.
ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಪ್ರತಿಭಟನೆ
ಈ ಸಂಗತಿಗಳಿಂದ ಆಕ್ರೋಶಗೊಂಡಿರುವ ಕುಟುಂಬಸ್ಥರು ಇಂದು ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಪ್ರತಿಭಟನೆ ನಡೆಸಿದರು. ಪ್ರತಿಭಟನೆಗೆ ವಿವಿಧ ಸಂಘಟನೆಯ ಮುಖಂಡರು ಸಹ ಸಾಥ್ ನೀಡಿದರು. ಯಾವುದೇ ರೋಗ ಹೊತ್ತು ಅಥವಾ ಕೋವಿಡ್ ನಿಂದ ಬಳಲುತ್ತಿರುವ ಸೋಂಕಿತರು ಬಂದರೂ ಸರಿಯಾದ ಚಿಕಿತ್ಸೆ ಸಿಗುತ್ತಿಲ್ಲ ಎಂದು ಆರೋಪಿಸಿದರು.
ರಾಮನಗರದಲ್ಲಿ ಚಿಕಿತ್ಸೆಯ ಅನುಕೂಲಕ್ಕೆ ಮನವಿ
ಹೊನ್ನಮ್ಮ ಅವರಿಗೆ ಆದ ರೀತಿ ಮತ್ಯಾರಿಗೂ ಆಗಬಾರದು. ಅದಕ್ಕಾಗಿ ಪ್ರತಿಭಟನೆ ಮಾಡುತ್ತಿದ್ದೇವೆ. ಜಿಲ್ಲಾಡಳಿತ ಹಾಗೂ ಆರೋಗ್ಯ ಇಲಾಖೆ ಅಧಿಕಾರಿಗಳು ಕೂಡಲೇ ಎಚ್ಚೆತ್ತುಕೊಂಡು ರಾಮನಗರ ಕೋವಿಡ್ ಆಸ್ಪತ್ರೆಯಲ್ಲಿ ಹೆಚ್ಚಿನ ಚಿಕಿತ್ಸೆ ಕೊಡಿಸಲು ಅನುಕೂಲ ಮಾಡಬೇಕು ಎಂದು ಮನವಿ ಮಾಡಿಕೊಂಡಿದ್ದಾರೆ.
Recommended Video
ಆರೋಗ್ಯಾಧಿಕಾರಿಗಳಿಗೆ ತರಾಟೆ
ಪ್ರತಿಭಟನೆ ವಿಷಯ ತಿಳಿದು ಸ್ಥಳಕ್ಕೆ ಬಂದ ರಾಮನಗರ ಜಿಲ್ಲಾ ಆರೋಗ್ಯಾಧಿಕಾರಿಗಳಿಗೆ ಮೃತರ ಕುಟುಂಬಸ್ಥರು ತೀವ್ರ ತರಾಟೆಗೆ ತೆಗೆದುಕೊಂಡರು. ಬಳಿಕ ಮಾತನಾಡಿದ ಜಿಲ್ಲಾ ಆರೋಗ್ಯಾಧಿಕಾರಿ, ಮೊದ ಮೊದಲು ನಮ್ಮ ಆಸ್ಪತ್ರೆಯಲ್ಲಿ ಸಮಸ್ಯೆ ಇತ್ತು. ಅದನ್ನು ಸರಿಪಡಿಸಲು ಕ್ರಮ ಕೈಗೊಳ್ಳಲಾಗುತ್ತಿದೆ. ಆಸ್ಪತ್ರೆಯಲ್ಲಿ ಹೆಚ್ಚಿನ ಚಿಕಿತ್ಸೆಗೆ ಅನುಕೂಲ ಮಾಡಿಕೊಡಲಾಗುತ್ತದೆ ಎಂದು ತಿಳಿಸಿದರು.