ಟೊಯೊಟಾ-ನೌಕರರ ಬಿಕ್ಕಟ್ಟು; ಜಿಲ್ಲಾಧಿಕಾರಿಗೆ ಗಡುವು ನೀಡಿದ ರೈತ ಸಂಘ
ರಾಮನಗರ, ಡಿಸೆಂಬರ್ 04: ಏಷ್ಯಾದ ಅತಿ ದೊಡ್ಡ ಕಾರು ತಯಾರಿಕಾ ಕಂಪನಿ ಟೊಯೊಟಾ ಕಿರ್ಲೋಸ್ಕರ್ ಬಿಡದಿ ಘಟಕದ ಆಡಳಿತ ಮಂಡಳಿ ವಿರುದ್ಧ ಕಾರ್ಮಿಕರು ಕಳೆದ ನ.9 ರಿಂದಲೂ ಅಹೋರಾತ್ರಿ ಧರಣಿ ನಡೆಸುತ್ತಿದ್ದಾರೆ.
ಇದೀಗ ಜಿಲ್ಲಾಡಳಿತ ಮಧ್ಯೆ ಪ್ರವೇಶ ಮಾಡಿ ಕಾರ್ಮಿಕರ ಸಮಸ್ಯೆ ನಿವಾರಿಸಬೇಕೆಂದು ರಾಜ್ಯ ರೈತ ಸಂಘ ಜಿಲ್ಲಾಧಿಕಾರಿಗಳಿಗೆ ನಾಲ್ಕು ದಿನಗಳ ಗಡುವು ನೀಡಿದೆ. ಈ ಸಂಬಂಧ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ರೈತ ಸಂಘ, "ಕಾರ್ಖಾನೆಯ ಆಡಳಿತ ಮಂಡಳಿ ಕಂಪನಿಗೆ ಅಕ್ರಮವಾಗಿ ಬೀಗ ಮುದ್ರೆ ಹಾಕಿರುವುದನ್ನು ಖಂಡಿಸಿ ಕಾರ್ಮಿಕರು ಕಳೆದ 25 ದಿನಗಳಿಂದ ಅಹೋರಾತ್ರಿ ಧರಣಿ ನಡೆಸುತ್ತಿದ್ದಾರೆ. ಹೀಗಿದ್ದೂ ಸಮಸ್ಯೆ ನಿವಾರಣೆಗೆ ಸರ್ಕಾರ ಮುಂದಾಗಿಲ್ಲ" ಎಂದು ದೂರಿದ್ದಾರೆ.
ಸರ್ಕಾರದ ಮಧ್ಯಪ್ರವೇಶಕ್ಕೆ ಬಿಡದಿ ಟೊಯೊಟಾ ಕಾರ್ಮಿಕರ ಒತ್ತಾಯ
ಸುಮಾರು 3500 ಕಾರ್ಮಿಕರು ನ್ಯಾಯಕ್ಕಾಗಿ ಬೀದಿಯಲ್ಲಿ ಕುಳಿತಿದ್ದಾರೆ. ಕಾರ್ಮಿಕ ಸಂಘದ ಪದಾಧಿಕಾರಿಗಳು ಹಲವಾರು ಬಾರಿ ಈ ಕುರಿತು ಜಿಲ್ಲಾಡಳಿತದ ಗಮನ ಸೆಳೆದಿದ್ದಾರೆ. ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ಕಳೆದ ತಿಂಗಳು ನ.19 ರಂದು ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದೆ. ಇಷ್ಟಾದರೂ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಖಂಡಿಸಿದ್ದಾರೆ.
Recommended Video
ಮುಂದಿನ ಸೋಮವಾರದ ಒಳಗೆ ಜಿಲ್ಲಾಧಿಕಾರಿಗಳು ಮಧ್ಯ ಪ್ರವೇಶ ಮಾಡಿ ಕಾರ್ಮಿಕರ ಸಮಸ್ಯೆ ನಿವಾರಿಸಬೇಕು. ಇಲ್ಲವಾದಲ್ಲಿ ರೈತ ಸಂಘ ಇತರೆ ಕನ್ನಡ ಪರ ಸಂಘಟನೆಗಳೂಂದಿಗೆ ಜಿಲ್ಲಾಧಿಕಾರಿಗಳ ಕಚೇರಿಗೆ ಮುತ್ತಿಗೆ ಹಾಕುವುದಾಗಿ ಎಚ್ಚರಿಕೆ ನೀಡಿದೆ. ಕರ್ನಾಟಕ ರಾಜ್ಯ ರೈತ ಸಂಘದ ನಿರ್ಣಯಕ್ಕೆ ಹಸಿರು ಸೇನೆ, ಬಹುಜನ ಸಮಾಜ ಪಕ್ಷ, ಕರ್ನಾಟಕ ರಕ್ಷಣಾ ವೇದಿಕೆ, ಸ್ವಾಭಿಮಾನಿ ವೇದಿಕೆಗಳು ಬೆಂಬಲ ವ್ಯಕ್ತಪಡಿಸಿವೆ.