ಕೊರೊನಾ ವೈರಸ್ ಸೋಂಕಿಗೆ ರಾಮನಗರದಲ್ಲಿ ಮೊದಲ ಬಲಿ
ರಾಮನಗರ, ಜೂನ್ 15: ಕೊರೊನಾ ವೈರಸ್ ಸೋಂಕಿಗೆ ರಾಮನಗರ ಜಿಲ್ಲೆಯಲ್ಲಿ ಮೊದಲ ಬಲಿಯಾಗಿದೆ. ರಾಮನಗರ ತಾಲೂಕಿನ ಬಿಡದಿ ಮೂಲದ 45 ವರ್ಷದ ವ್ಯಕ್ತಿ ಸಾವನ್ನಪ್ಪಿರುವುದಾಗಿ ತಿಳಿದುಬಂದಿದೆ.
Recommended Video
ಬಿಡದಿಯಲ್ಲಿ ತರಕಾರಿ ವ್ಯಾಪಾರ ಮಾಡುತ್ತಿದ್ದ ಈ ವ್ಯಕ್ತಿಯು ಬೆಂಗಳೂರಿನ ಬೋರಿಂಗ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಇಂದು ಚಿಕಿತ್ಸೆ ಫಲಕಾರಿಯಾಗದೆ ಅವರು ಸಾವನ್ನಪ್ಪಿದ್ದಾರೆ. ಸತ್ತ ನಂತರ ವ್ಯಕ್ತಿಯ ಗಂಟಲು ದ್ರವ ಪರೀಕ್ಷೆ ನಡೆಸಿದ್ದು, ಪರೀಕ್ಷೆಯಲ್ಲಿ ಸೋಂಕು ಇರುವುದು ದೃಢಪಟ್ಟಿದೆ.
ರಾಮನಗರದಲ್ಲೇ ಕೋವಿಡ್-19 ಟೆಸ್ಟಿಂಗ್ ಲ್ಯಾಬ್ ಆರಂಭ: ಡಿಸಿಎಂ
ಇದೀಗ ಮೃತ ವ್ಯಕ್ತಿಯ ಟ್ರಾವೆಲ್ ಹಿಸ್ಟರಿಯನ್ನು ಪತ್ತೆ ಹಚ್ಚುವಲ್ಲಿ ಜಿಲ್ಲಾಡಳಿತ ನಿರತವಾಗಿದೆ. ಜಿಲ್ಲೆಯಲ್ಲಿ ಇಂದು ಎರಡು ಹೊಸ ಪ್ರಕರಣಗಳು ಕಂಡುಬಂದಿದ್ದು, ರಾಮನಗರ ಟೌನ್ ನ ಟಿಪ್ಪು ನಗರದಲ್ಲಿ ತಾಯಿ ಹಾಗೂ ಮಗನಿಗೆ ಕೊರೊನಾ ಸೋಂಕು ಇರುವುದು ಪತ್ತೆಯಾಗಿದೆ. 28 ವರ್ಷದ ಮಗ ಹಾಗೂ 48 ವರ್ಷದ ತಾಯಿಯಲ್ಲಿ ಸೋಂಕು ಕಾಣಿಸಿಕೊಂಡಿದೆ.
ಈ ಯುವಕ ಬೆಂಗಳೂರಿನಲ್ಲಿ ಕೆಲಸ ಮಾಡುತ್ತಿದ್ದು, ಅಲ್ಲಿಂದಲೇ ಸೋಂಕು ಹರಡಿದೆ ಎಂಬ ಶಂಕೆ ವ್ಯಕ್ತವಾಗಿದೆ. ಇಬ್ಬರನ್ನೂ ರಾಮನಗರ ಕೋವಿಡ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಜಿಲ್ಲೆಯಲ್ಲಿ ಒಟ್ಟು ಸೋಂಕಿತರ ಸಂಖ್ಯೆ 22 ಆಗಿದೆ.