ಸರ್ಕಾರಿ ಶಾಲೆಗಳ ಸಬಲೀಕರಣಕ್ಕೆ ಸರ್ಕಾರ ಬದ್ಧ; ಸುರೇಶ್ ಕುಮಾರ್
ರಾಮನಗರ, ಸೆಪ್ಟೆಂಬರ್ 4: ಸರ್ಕಾರಿ ಶಾಲೆಗಳ ಸಬಲೀಕರಣಕ್ಕೆ ಸರ್ಕಾರ ಬದ್ಧವಾಗಿದೆ. ಈ ನಿಟ್ಟಿನಲ್ಲಿ ರಾಜ್ಯದ ಎಲ್ಲಾ ಕ್ಷೇತ್ರಗಳ ಶಾಸಕರೊಂದಿಗೆ ಚರ್ಚಿಸಲಾಗುತ್ತಿದೆ ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ತಿಳಿಸಿದ್ದಾರೆ.
Recommended Video
ಇಂದು ಮಾಗಡಿ ಪಟ್ಟಣದ ವಿದ್ಯಾನಿಧಿ ಶಾಲೆಯಲ್ಲಿ ಶಿಕ್ಷಣ ಇಲಾಖೆ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ನಂತರ ಮಾತನಾಡಿದ ಅವರು, "ಸರ್ಕಾರಿ ಶಾಲೆಗಳಿಗೆ ಅನೇಕ ಸೌಲಭ್ಯದ ಜತೆಗೆ ಗುಣಮಟ್ಟದ ಶಿಕ್ಷಣ ನೀಡುತ್ತಿದ್ದರೂ ಖಾಸಗಿ ಶಾಲೆಗಳ ವ್ಯಾಮೋಹ ಪೋಷಕರಲ್ಲಿ ಹೆಚ್ಚಾಗಿದೆ. ಖಾಸಗಿ ಶಾಲೆಗಳ ಸೆಳೆತದಿಂದ ಕನಿಷ್ಠ ದುಡಿಮೆ ಇದ್ದವರೂ ತಮ್ಮ ಮಕ್ಕಳನ್ನು ಖಾಸಗಿ ಶಾಲೆಗಳಿಗೆ ಸೇರಿಸುತ್ತಿದ್ದಾರೆ. ತಮ್ಮ ದುಡಿಮೆಯ ಶೇ. 20ರಷ್ಟು ಹಣವನ್ನು ಮಕ್ಕಳ ವಿಧ್ಯಾಭ್ಯಾಸಕ್ಕಾಗಿ ಖರ್ಚು ಮಾಡುತ್ತಿದ್ದಾರೆ" ಎಂದು ಬೇಸರ ವ್ಯಕ್ತಪಡಿಸಿದರು.
ಶಿಕ್ಷಕರಿಗಾಗಿ ಬಂತು 'ಶಿಕ್ಷಕ ಮಿತ್ರ' ಅಪ್ಲಿಕೇಶನ್
"ಇಂಥವರು ತಮ್ಮ ಮಕ್ಕಳನ್ನು ಸರ್ಕಾರಿ ಶಾಲೆಗಳಿಗೆ ಸೇರಿಸಿದರೆ ತಮ್ಮ ಶ್ರಮದ ದುಡಿಮೆಯ ಶೇ. 20ರಷ್ಟು ಹಣ ಉಳಿದು ಆ ಕುಟುಂಬದ ಅಭಿವೃದ್ಧಿಗೆ ಸಹಕಾರಿಯಾಗುತ್ತದೆ. ಎಲ್ಲಾ ವರ್ಗದ ಜನರು ಸರ್ಕಾರಿ ಶಾಲೆಗಳಿಗೆ ಮಕ್ಕಳನ್ನು ಕರೆತರುವುದನ್ನು ಮನಸ್ಸಿನಲ್ಲಿಟ್ಟುಕೊಂಡು ರಾಜ್ಯದ ಎಲ್ಲಾ ಕ್ಷೇತ್ರದ ಶಾಸಕರೊಂದಿಗೆ ಚರ್ಚಿಸಿ ವಿಭಿನ್ನ ಕಾರ್ಯಕ್ರಮ ರೂಪಿಸಲಾಗುವುದು" ಎಂದು ಹೇಳಿದರು.
ಇದೇ ಸಂದರ್ಭ ಮಾತನಾಡಿದ ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ರಾಜೇಶ್, ತಾಲೂಕಿನಲ್ಲಿ ಕೆಲ ಸರ್ಕಾರಿ ಶಾಲೆಗಳ ಕೊಠಡಿಗಳು ಶಿಥಿಲಗೊಂಡಿದ್ದು ದುರಸ್ತಿ ಮತ್ತು ನೂತನ ಕೊಠಡಿಗಳ ಅಭಿವೃದ್ಧಿಗೆ ವಿಶೇಷ ಅನುದಾನ ಹಾಗೂ ಶಿಕ್ಷಕರ ಶಾಶ್ವತ ಸಮಸ್ಯೆಗಳ ಪರಿಹಾರದ ಜತೆಗೆ ಶಿಕ್ಷಕರಿಗೆ ಮತ್ತಷ್ಟು ತರಬೇತಿ ಕಾರ್ಯಾಗಾರ ನಡೆಸುವಂತೆ ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರಲ್ಲಿ ಮನವಿ ಮಾಡಿದರು.
ಸಭೆಯಲ್ಲಿ ಡಿಡಿಪಿಐ ಸೋಮಶೇಖರಯ್ಯ, ಬಿಇಓ ಸಿದ್ದೇಶ್ವರ್, ಬಿಆರ್ ಸಿ ರೂಪಾಕ್ಷ, ಅಕ್ಷರ ದಾಸೋಹ ಸಹಾಯಕ ನಿರ್ದೇಶಕ ಗಂಗಾಧರಯ್ಯ ಹಾಗೂ ಶಿಕ್ಷಣ ಇಲಾಖೆಯ ಅಧಿಕಾರಿಗಳು ಭಾಗವಹಿಸಿದ್ದರು.