ಕೊರೊನಾ ಸೋಂಕಿತರ ಚಿಕಿತ್ಸಾ ವೆಚ್ಚವನ್ನು ಸರ್ಕಾರವೇ ಭರಿಸಲಿದೆ; ಡಿಸಿಎಂ ಅಶ್ವಥ್ ನಾರಾಯಣ್
ರಾಮನಗರ, ಜೂನ್ 29: ಸರ್ಕಾರ ನಿಗದಿಪಡಿಸಿರುವ ದರ ಪಟ್ಟಿಯಂತೆ ರೋಗಿಗಳ ವೆಚ್ಚವನ್ನು ಸರ್ಕಾರವೇ ಭರಸಲಿದೆ. ಆ ಮೊತ್ತವನ್ನು ಆಸ್ಪತ್ರೆಗಳಿಗೆ ಪಾವತಿ ಮಾಡಲಿದೆ. ಯಾವುದೇ ಕಾರಣಕ್ಕೂ ಸೋಂಕಿತರಿಗೆ ತೊಂದರೆಯಾಗಲು ಬಿಡುವುದಿಲ್ಲ. ಸದ್ಯದ ಸ್ಥಿತಿ ನೋಡಿದರೆ ಮುಂದಿನ ದಿನಗಳಲ್ಲಿ ಮತ್ತಷ್ಟು ಗಂಭೀರ ಸನ್ನಿವೇಶ ಎದುರಾಗುವ ಸಾಧ್ಯತೆ ಇದೆ. ಹೀಗಾಗಿ ಎಲ್ಲಾ ರೀತಿಯ ತಯಾರಿ ಮಾಡಿಕೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಡಿಸಿಎಂ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಅಶ್ವಥ್ ನಾರಾಯಣ್ ತಿಳಿಸಿದರು.
ವ್ಯಾಪಕವಾಗಿ ಹರಡುತ್ತಿರುವ ಕೋವಿಡ್- 19 ಸೋಂಕಿನಿಂದ ಎದುರಾಗುವ ಯಾವುದೇ ಕ್ಲಿಷ್ಟ ಪರಿಸ್ಥಿತಿಯನ್ನು ಎದುರಿಸುವ ನಿಟ್ಟಿನಲ್ಲಿ ಡಿಸಿಎಂ ಅಶ್ವಥ್ ನಾರಾಯಣ್, ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಅಧಿಕಾರಿಗಳ ಜೊತೆ ನಿನ್ನೆ ಸಭೆ ನಡೆಸಿದರು. ಕೋವಿಡ್ ಗೆ ಸಂಬಂಧಿಸಿದ ವಿಷಯಗಳಿಗೆ ಆದ್ಯತೆ ಕೊಟ್ಟು ಕೆಲಸ ಮಾಡಿ. ಚಿಕಿತ್ಸೆ ನೀಡುವ ವೈದ್ಯರ ಸುರಕ್ಷತೆಗೂ ಆದ್ಯತೆ ನೀಡಬೇಕು. ಕ್ವಾರಂಟೈನ್ ಸಲುವಾಗಿ ಅಗತ್ಯ ಬಿದ್ದರೆ ಹೋಟೆಲ್ ಮತ್ತು ರೆಸಾರ್ಟ್ ಗಳಲ್ಲಿಯೂ ವ್ಯವಸ್ಥೆ ಮಾಡಿ ಎಂದು ಅಧಿಕಾರಿಗಳಿಗೆ ಸೂಚಿಸಿದರು.
ಆಸ್ಪತ್ರೆಗಳೊಂದಿಗೆ ಜಿಲ್ಲಾಡಳಿತ ಒಪ್ಪಂದ
ರಾಮನಗರ ಜಿಲ್ಲೆಯ ಕೋವಿಡ್ ರೋಗಿಗಳ ಚಿಕಿತ್ಸೆಗಾಗಿ ಬೆಂಗಳೂರಿನ ಕೆಂಗೇರಿ ಸಮೀಪದಲ್ಲಿರುವ ರಾಜರಾಜೇಶ್ವರಿ ವೈದ್ಯಕೀಯ ಕಾಲೇಜು ಆಸ್ಪತ್ರೆ ಮತ್ತು ಕನಕಪುರದ ಹಾರೋಹಳ್ಳಿ ಸಮೀಪದ ದಯಾನಂದ್ ಸಾಗರ್ ಆಸ್ಪತ್ರೆಗಳೊಂದಿಗೆ ಜಿಲ್ಲಾಡಳಿತವು ಒಪ್ಪಂದ ಮಾಡಿಕೊಳ್ಳುತ್ತಿದೆ. ಒಪ್ಪಂದದಂತೆ ಮುಂದಿನ 10, 20 ಮತ್ತು 30 ದಿನಗಳಿಗೆ ಅಗತ್ಯವಾಗುವ ಹಾಗೂ ಅವಶ್ಯಕತೆಗೆ ಅನುಗುಣವಾಗಿ ಹಾಸಿಗೆಗಳನ್ನು ಕಾಯ್ದಿರಿಸಿಕೊಳ್ಳುವಂತೆ ಆಸ್ಪತ್ರೆಗಳೊಂದಿಗೆ ಒಪ್ಪಂದ ಮಾಡಿಕೊಳ್ಳಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವರು ತಿಳಿಸಿದರು.
ರಾಮನಗರ: ರೋಗಿಗಳೊಂದಿಗೆ ಡಿಸಿಎಂ ಅಶ್ವಥ್ ನಾರಾಯಣ ಸಂವಾದ
ಜಿಲ್ಲಾಡಳಿತದಿಂದ ಸಹಾಯ ಕೇಂದ್ರ
ಎರಡು ಆಸ್ಪತ್ರೆಗಳ ಪ್ರಾಂಗಣದಲ್ಲಿ ಜಿಲ್ಲಾಡಳಿತದ ವತಿಯಿಂದ ಸಹಾಯ ಕೇಂದ್ರವನ್ನು ಪ್ರಾರಂಭಿಸಲಾಗುವುದು. ಈ ಸಹಾಯವಾಣಿ ಕೇಂದ್ರದಲ್ಲಿ ಸೋಂಕಿತರಿಗೆ ಅಗತ್ಯವಿರುವ ಮಾಹಿತಿಯನ್ನು ನೀಡಲಾಗುವುದು. ಹಾಗೆಯೇ, ಆಸ್ಪತ್ರೆಗಳಲ್ಲಿ ದಾಖಲಾಗುವ ಸೋಂಕಿತರು ಮತ್ತು ಅವರ ಸಂಬಂಧಿಕರಿಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಮಾತನಾಡಿಸಲು ಅವಕಾಶ ಮಾಡಿಕೊಡಲಾಗುವುದು ಎಂದು ಉಪಮುಖ್ಯಮಂತ್ರಿಗಳು ಮಾಹಿತಿ ನೀಡಿದರು.
ಪ್ರಸಕ್ತ ರಾಮನಗರ ಜಿಲ್ಲೆಯಲ್ಲಿ ಒಂಬತ್ತು ಫೀವರ್ ಕ್ಲಿನಿಕ್ ಗಳು ಕಾರ್ಯನಿರ್ವಹಿಸುತ್ತಿವೆ. ಇವುಗಳ ಸಂಖ್ಯೆಯನ್ನು 23ಕ್ಕೆ ಹೆಚ್ಚಿಸಲಾಗುವುದು. ಹಾಗೆಯೇ, ಈಗಿರುವ 4 ಸ್ವಾಬ್ ಸಂಗ್ರಹ ಘಟಕಗಳ ಸಂಖ್ಯೆಯನ್ನು 16ಕ್ಕೆ ಏರಿಸಲಾಗುವುದು ಎಂದು ತಿಳಿಸಿದರು.
250 ಮಂದಿ ಸಾಂಸ್ಥಿಕ ಕ್ವಾರಟೈನ್ ಸಾಮರ್ಥ್ಯ
ರಾಮನಗರ ಜಿಲ್ಲೆಯಲ್ಲಿ ಪ್ರಸಕ್ತವಾಗಿ 250 ಮಂದಿಯನ್ನು ಸಾಂಸ್ಥಿಕ ಕ್ವಾರಟೈನ್ ಒಳಪಡಿಸುವ ಸಾಮರ್ಥ್ಯವಿದೆ. ಇದನ್ನು ಶೀಘ್ರವೇ ಇನ್ನೂ 1150ಕ್ಕೆ ಹೆಚ್ಚಿಸಿ ಒಟ್ಟಾರೆಯಾಗಿ 2000 ಮಂದಿಯನ್ನು ಕ್ವಾರಂಟೈನ್ ನಲ್ಲಿ ಇರಿಸುವಂತಹ ಸುಸಜ್ಜಿತ ವ್ಯವಸ್ಥೆಯನ್ನು ಕಲ್ಪಿಸಲಾಗುವುದು. ಮುಂದಿನ ದಿನಗಳಲ್ಲಿ ಈ ಸಾಮರ್ಥ್ಯವನ್ನು ಎಂಟು ಸಾವಿರಕ್ಕೆ ಹೆಚ್ಚಳ ಮಾಡಲಾಗುವುದು ಎಂದು ಹೇಳಿದರು.
ಖಾಸಗಿ ವೈದ್ಯರಿಗೂ ಪಿಪಿಇ ಕಿಟ್
ಜಿಲ್ಲೆಯಲ್ಲಿ ಖಾಸಗಿಯಾಗಿ ರೋಗಿಗಳನ್ನು ಪರೀಕ್ಷಿಸುತ್ತಿರುವ ಎಲ್ಲಾ ವೈದ್ಯರಿಗೂ ಮುಂಜಾಗ್ರತಾ ಕ್ರಮವಾಗಿ ಪಿಪಿಇ ಕಿಟ್ ಧರಿಸುವುದನ್ನು ಕಡ್ಡಾಯ ಮಾಡಲು ಚಿಂತಿಸಲಾಗುತ್ತಿದೆ ಎಂದರು. ಸಾರ್ವಜನಿಕರ ಹಿತದೃಷ್ಟಿಯಿಂದ ಜಿಲ್ಲೆಯಲ್ಲಿ ಖಾಸಗಿಯಾಗಿ ಕಾರ್ಯನಿರ್ವಹಿಸುತ್ತಿರುವ ವೈದ್ಯರು ಪೂರ್ಣಪ್ರಮಾಣದ ಇಲ್ಲವೇ ಹಾಫ್ ಪಿಪಿಇ ಕಿಟ್ ಧರಿಸಿಕೊಂಡು ರೋಗಿಗಳನ್ನು ಪರೀಕ್ಷಿಸಬೇಕು. ವೈದ್ಯರಿಗೆ ಅಗತ್ಯವಾದ ಕಿಟ್ ಗಳನ್ನು ಜಿಲ್ಲಾಡಳಿತದ ವತಿಯಿಂದ ಇಲ್ಲವೇ ದಾನಿಗಳ ವತಿಯಿಂದ ಸಂಗ್ರಹಿಸಿ ನೀಡಲಾಗುವುದು ಎಂದರು.