ಮಂಡ್ಯದಿಂದ ಜೆಡಿಎಸ್ ಸ್ಪರ್ಧೆ ಖಚಿತ; ಶಾಸಕ ಜಿಟಿ ದೇವೇಗೌಡ
ಭಾನುವಾರ ಮಂಡ್ಯ ಲೋಕಸಭಾ ಕ್ಷೇತ್ರಕ್ಕೆ ಸಂಬಂಧಪಟ್ಟಂತೆ ಸಾಕಷ್ಟು ಬೆಳವಣಿಗೆಗಳು ನಡೆದಿದ್ದ ರಾಜ್ಯ ರಾಜಕೀಯ ವಲಯದಲ್ಲಿ ಭಾರಿ ಕುತೂಹಲ ಮೂಡಿಸಿದೆ. ಮಂಡ್ಯ ಸಂಸದೆ ಸುಮಲತಾ ಬೆಂಗಳೂರಿನ ಜೆಪಿ ನಗರದ ತಮ್ಮ ನಿವಾಸದಲ್ಲಿ ಆಪ್ತರು, ಬೆಂಬಲಿಗರ ಜೊತೆ ಚರ್ಚೆ ನಡೆಸಿದರು. ಇದರ ಬೆನ್ನಲ್ಲೇ ಜೆಡಿಎಸ್ ಶಾಸಕ ಜಿ.ಟಿ. ದೇವೇಗೌಡ ಸ್ಫೋಟಕ ಹೇಳಿಕೆ ನೀಡಿದ್ದಾರೆ.
ಮಂಡ್ಯ ಲೋಕಸಭಾ ಕ್ಷೇತ್ರದಿಂದ ಜೆಡಿಎಸ್ ಸ್ಪರ್ಧೆ ಮಾಡುವುದು ಖಚಿತ ಎಂದು ಹೇಳುವ ಮೂಲಕ ಸಂಚಲನ ಮೂಡಿಸಿದ್ದಾರೆ. ರಾಮನಗರದ ಕೇತಗಾನಹಳ್ಳಿ ಬಳಿಯಿರುವ ಮಾಜಿ ಸಿಎಂ ಹೆಚ್ಡಿ ಕುಮಾರಸ್ವಾಮಿ ಅವರ ಫಾರ್ಮ್ಹೌಸ್ನಲ್ಲಿ ಸಭೆಯಲ್ಲಿ ಭಾಗವಹಿಸುವ ಮುನ್ನ ಮಾತನಾಡಿ ಜಿಟಿಡಿ, ಮಂಡ್ಯ ಸೀಟು ಜೆಡಿಎಸ್ಗೆ ಹಂಚಿಕೆಯಾಗಲಿದೆ. ಸ್ಥಳೀಯ ಮುಖಂಡರ ಜೊತೆ ಸಭೆ ನಡೆಸಿ ಚುನಾವಣೆ ಸಿದ್ಧತೆ ಮಾಡುತ್ತಿದ್ದೇವೆ, ಅಭ್ಯರ್ಥಿ ಆಯ್ಕೆ ಬಗ್ಗೆ ಅಭಿಪ್ರಾಯ ಸಂಗ್ರಹಿಸಿದ ಬಳಿಕ ತೀರ್ಮಾನ ಮಾಡಲಾಗುವುದು ಎಂದರು.

ಕಳೆದ ಬಾರಿ ಪಕ್ಷೇತರ ಅಭ್ಯರ್ಥಿಯಾಗಿ ಜೆಡಿಎಸ್ ವಿರುದ್ಧ ಗೆದ್ದಿದ್ದ ಸುಮಲತಾ ಈ ಬಾರಿ ಬಿಜೆಪಿಯಿಂದ ಸ್ಪರ್ಧಿಸುವ ಉತ್ಸಾಹದಲ್ಲಿದ್ದರು. ಆದರೆ ಜೆಡಿಎಸ್ ಬಿಜೆಪಿ ಜೊತೆ ಮೈತ್ರಿ ಮಾಡಿಕೊಂಡಿದ್ದು, ಸುಮಲತಾ ಅವರಿಗೆ ಹಿನ್ನಡೆಯಾಗಿದೆ. ಅಧಿಕೃತವಾಗಿ ಸುಮಲತಾ ಬಿಜೆಪಿ ಸೇರಿಲ್ಲವಾದರೂ, ಬಿಜೆಪಿಗೆ ಬಾಹ್ಯ ಬೆಂಬಲ ನೀಡಿದ್ದರು.
ಸುಮಲತಾ ಸ್ಪರ್ಧೆ ಬಗ್ಗೆ ಜಿಟಿಡಿ ಹೇಳಿದ್ದೇನು?
ಸುಮಲತಾ ಅವರು ಅಧಿಕೃತ ಬಿಜೆಪಿ ಸದಸ್ಯರಲ್ಲ. ಆದರೆ ಅವರು ಮಂಡ್ಯದಿಂದ ಟಿಕೆಟ್ ಕೇಳುವುದು ತಪ್ಪೇನಿಲ್ಲ. ಮಂಡ್ಯದಿಂದ ಅವರು ಬಿಜೆಪಿ ವರಿಷ್ಠರ ಬಳಿ ಟಿಕೆಟ್ಗೆ ಬೇಡಿಕೆ ಇಟ್ಟರೆ, ಬೆಂಗಳೂರು ಉತ್ತರ ಕ್ಷೇತ್ರ ಕೊಡುವ ಲೆಕ್ಕಾಚಾರ ಇರಬಹುದು ಎಂದು ನನಗೆ ಹಲವರು ಹೇಳಿದ್ದಾರೆ ಎಂದರು.
ಮಾಜಿ ಶಾಸಕ ಪುಟ್ಟರಾಜು ಮಾತನಾಡಿ, ಸುಮಲತಾ ಸಭೆ ಮಾಡುವುದು ಅವರ ವೈಯಕ್ತಿಕ ವಿಚಾರ. ಅದನ್ನು ತಪ್ಪು ಎಂದು ಹೇಳಲು ಆಗುವುದಿಲ್ಲ. ಆದರೆ ಟಿಕೆಟ್ ಹಂಚಿಕೆ ವಿಚಾರ ರಾಷ್ಟ್ರ ಮಟ್ಟದಲ್ಲಿ ತೀರ್ಮಾನವಾಗಲಿದ್ದು ಅದಕ್ಕೆ ಬದ್ದರಾಗಿರುತ್ತೇವೆ ಎಂದು ಹೇಳಿದರು.
ನಾನು ಮಂಡ್ಯದಿಂದ ಟಿಕೆಟ್ ಆಕಾಂಕ್ಷಿ ಅಲ್ಲ. ಪಕ್ಷ ಏನೇ ತೀರ್ಮಾನ ಮಾಡಿದರೂ ಅದಕ್ಕೆ ಬದ್ಧನಾಗಿರುತ್ತೇನೆ. ನಿಖಿಲ್ ಅವರನ್ನು ಅಭ್ಯರ್ಥಿ ಮಾಡಲು ಎಲ್ಲಾ ಪ್ರಯತ್ನ ಮಾಡುತ್ತೇವೆ ಎಂದು ಹೇಳಿದರು.
ಒಟ್ಟಾರೆ ಮಂಡ್ಯ ಲೋಕಸಭಾ ಕ್ಷೇತ್ರ ಕುತೂಹಲದ ಕೇಂದ್ರ ಬಿಂದುವಾಗುತ್ತಿದ್ದು, ಟಿಕೆಟ್ ಘೋಷಣೆಯಾದ ಬಳಿಕ ಜಿಲ್ಲೆಯ ರಾಜಕೀಯ ಮತ್ತೊಂದು ಮಗ್ಗುಲು ಬದಲಿಸುವ ಎಲ್ಲಾ ಸಾಧ್ಯತೆ ಇದೆ. ಬಿಜೆಪಿ-ಜೆಡಿಎಸ್-ಸುಮಲತಾ ಅವರ ಪೈಪೋಟಿ ನಡುವೆ ಕಾಂಗ್ರೆಸ್ ಮಾತ್ರ ಕಾದು ನೋಡುವ ತಂತ್ರಕ್ಕೆ ಶರಣಾಗಿದೆ.












Click it and Unblock the Notifications