ಮೈಸೂರು ಜಿಲ್ಲೆಯ ಪ್ರಭಾವಿ ಕಾಂಗ್ರೆಸ್ ಮುಖಂಡ ಜೆಡಿಎಸ್ ಸೇರ್ಪಡೆ
ರಾಮನಗರ, ಅಕ್ಟೋಬರ್ 2: ಮೈಸೂರು ಜಿಲ್ಲೆ ಎಚ್.ಡಿ. ಕೋಟೆ ತಾಲೂಕಿನ ಕಾಂಗ್ರೆಸ್ ಪಕ್ಷದ ಸುಮಾರು ಆರು ನೂರಕ್ಕೂ ಹೆಚ್ಚು ಮುಖಂಡರು ಹಾಗೂ ಮೂರು ಸಾವಿರಕ್ಕೂ ಹೆಚ್ಚು ಕಾರ್ಯಕರ್ತರು ಇಂದು ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಸಮ್ಮುಖದಲ್ಲಿ ಜೆಡಿಎಸ್ ಪಕ್ಷಕ್ಕೆ ಸೇರ್ಪಡೆಯಾದರು.
ರಾಮನಗರದ ಬಿಡದಿ ತೋಟದ ಮನೆಯಲ್ಲಿ ಬೆಳಗ್ಗೆ ಎಚ್.ಡಿ. ಕೋಟೆ ತಾಲೂಕಿನ ಹಿರಿಯ ಕಾಂಗ್ರೆಸ್ ಮುಖಂಡ ಕೃಷ್ಣನಾಯಕ್ ನೇತೃತ್ವದಲ್ಲಿ ಜೆಡಿಎಸ್ ಸೇರಿದ ಅಷ್ಟೂ ಕಾರ್ಯಕರ್ತರನ್ನು ಮಾಜಿ ಸಿಎಂ ಕುಮಾರಸ್ವಾಮಿ ಪಕ್ಷಕ್ಕೆ ಬರ ಮಾಡಿಕೊಂಡರು.
ಬಳಿಕ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಜೊತೆಗೆ ಬೆಂಗಳೂರಿನ ಪಕ್ಷದ ಕೇಂದ್ರ ಕಚೇರಿಗೆ ಬಂದರಲ್ಲದೆ, ಹಸಿರು ಶಾಲು ಧರಿಸಿಕೊಳ್ಳುವ ಮೂಲಕ ಜನತಾ ಪರಿವಾರಕ್ಕೆ ಪ್ರವೇಶ ಪಡೆದರು. ಇವರೆಲ್ಲರೂ ಕುರುಬ ಸಮುದಾಯಕ್ಕೆ ಸೇರಿದವರು ಎಂಬುದು ಗಮನಾರ್ಹ ಸಂಗತಿಯಾಗಿದ್ದು, ಇದು ಮಾಜಿ ಸಿಎಂ ಸಿದ್ದರಾಮಯ್ಯ ಭಾರೀ ಹಿನ್ನಡೆ ಎಂದು ಭಾವಿಸಲಾಗಿದೆ.

ಈ ಸಂದರ್ಭದಲ್ಲಿ ಮಾತನಾಡಿದ ಎಚ್.ಡಿ. ಕುಮಾರಸ್ವಾಮಿ, "ಮೈಸೂರು ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಪ್ರಬಲವಾಗಿದೆ. ತಳಮಟ್ಟದಲ್ಲಿ ಸಶಕ್ತವಾಗಿ ಇದೆ. ಮುಂದಿನ ದಿನಗಳಲ್ಲಿ ಇನ್ನಷ್ಟು ಗಟ್ಟಿಯಾಗಿ ಪಕ್ಷವನ್ನು ಕಟ್ಟಬೇಕು ಹಾಗೂ ಎಲ್ಲರೂ ಅವಿರತವಾಗಿ ಕೆಲಸ ಮಾಡಬೇಕು," ಎಂದು ಕರೆ ನೀಡಿದರು.
"ಅಕ್ಟೋಬರ್ 16ರಿಂದ ಬೆಂಗಳೂರಿನ ಪಕ್ಷದ ಕಚೇರಿ ಜೆಪಿ ಭವನದಲ್ಲಿ 10 ದಿನಗಳ ಕಾಲ ಅಭ್ಯರ್ಥಿಗಳಿಗೆ ತರಬೇತಿ ನೀಡಲಾಗುತ್ತದೆ. ಸಂಕ್ರಾಂತಿ ವೇಳೆಗೆ ಆ ಅಭ್ಯರ್ಥಿಗಳು ಆಯಾ ಕ್ಷೇತ್ರದ ಮತದಾರರ ಮನೆ ಬಾಗಿಲಿಗೆ ತಲುಪಿ ಪಕ್ಷ ಸಂಘಟನೆ ಮಾಡಬೇಕು. ಯಾರು ನಮ್ಮ ಟಾಸ್ಕ್ ರೀಚ್ ಮಾಡುತ್ತಾರೆಯೋ ಅಂತಹ ಅಭ್ಯರ್ಥಿಗಳ ಹೆಸರನ್ನು ಘೋಷಣೆ ಮಾಡುತ್ತೇವೆ," ಎಂದು ಎಚ್.ಡಿ. ಕುಮಾರಸ್ವಾಮಿ ಹೇಳಿದರು.
"ಎರಡು ಕ್ಷೇತ್ರಗಳ ಉಪ ಚುನಾವಣೆಗೆ ಅಭ್ಯರ್ಥಿಗಳನ್ನು ಘೋಷಣೆ ಮಾಡಲು ಯಾವ ದೊಣ್ಣೆ ನಾಯಕರ ಅಪ್ಪಣೆ ಬೇಕಿಲ್ಲ. ಕಾಂಗ್ರೆಸ್ ಹಾಗೂ ಬಿಜೆಪಿ ನಾಯಕರ ಅಪ್ಪಣೆ ಪಡೆದು ಅಭ್ಯರ್ಥಿ ಘೋಷಣೆ ಮಾಡಬೇಕಿಲ್ಲ. ಎರಡು ಕ್ಷೇತ್ರದ ಅಭ್ಯರ್ಥಿಗಳು ದೊಡ್ಡ ಮಟ್ಟದ ವಿದ್ಯಾಭ್ಯಾಸ ಪಡೆದಂತವರು. ಪಕ್ಷದ ಪ್ರಮಾಣಿಕ ಕಾರ್ಯಕರ್ತರು ಎಂದು ಟಿಕೆಟ್ ನೀಡಲಾಗಿದೆ," ಎಂದು ಬಿಡದಿಯ ಕೇತುಗಾನಹಳ್ಳಿಯಲ್ಲಿ ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ವಾಗ್ದಾಳಿ ನಡೆಸಿದರು.

ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಕೃಷ್ಣನಾಯಕ್, "ಪಕ್ಷದ ನೀತಿ, ಸಿದ್ಧಾಂತ ಹಾಗೂ ಎರಡು ಅವಧಿಯಲ್ಲಿ ಕುಮಾರಸ್ವಾಮಿ ಮಾಡಿದ ಜನಪರ ಕೆಲಸಗಳನ್ನು ಮೆಚ್ಚಿ ಜೆಡಿಎಸ್ ಸೇರಿದ್ದೇವೆ. ಪಕ್ಷಕ್ಕಾಗಿ ಅಹರ್ನಿಶಿ ದುಡಿಯುತ್ತೇವೆ. ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಪಕ್ಷವನ್ನು ಸ್ವಂತ ಬಲದ ಮೇಲೆ ಅಧಿಕಾರಕ್ಕೆ ತರಲು ಎಲ್ಲಾ ಶ್ರಮ ಹಾಕಲಾಗುವುದು. ಮುಂದೆ ಪಕ್ಷ ಕೈಗೊಳ್ಳುವ ಯಾವುದೇ ನಿರ್ಧಾರಕ್ಕೆ ನಾವು ಬದ್ಧರಾಗಿರುತ್ತೇವೆ," ಎಂದು ತಿಳಿಸಿದರು.
ಎಚ್.ಡಿ. ಕೋಟೆ ತಾಲೂಕಿನ ಕಾಂಗ್ರೆಸ್ ಪಕ್ಷದ ಇತರೆ ಮುಖಂಡರಾದ ಕಾಡಾ ಮಾಜಿ ಅಧ್ಯಕ್ಷ ಯತೀಶ್ ಕುಮಾರ್, ರಾಜಪ್ಪ, ಕೃಷ್ಣೇಗೌಡ, ಮಹಾದೇವ, ರವಿಚಂದ್ರ, ಮುನಿಕೃಷ್ಣ ಗೌಡ, ರವಿ, ಎನ್. ರವಿ, ಕೃಷ್ಣಮೂರ್ತಿ, ಕೀರ್ತಿ ಕುಮಾರ್ ಮುಂತಾದ ಪ್ರಮುಖ ನಾಯಕರು ಈ ಸಂದರ್ಭದಲ್ಲಿ ಜೆಡಿಎಸ್ ಪಕ್ಷ ಸೇರಿದರು.












Click it and Unblock the Notifications