ಡಿಕೆಶಿ ಸಂಪರ್ಕದಲ್ಲಿದ್ದಾರಾ ಸಿ.ಪಿ.ಯೋಗೇಶ್ವರ್? ಶಾಕಿಂಗ್ ವಿಚಾರ ಬಿಚ್ಚಿಟ್ರು ಎಚ್ಡಿಕೆ
ಚನ್ನಪಟ್ಟಣ ಉಪಚುನಾವಣೆಗೆ ಮೈತ್ರಿ ಅಭ್ಯರ್ಥಿ ಯಾರು ಎಂಬುದು ಇನ್ನೂ ಕಗ್ಗಂಟಾಗೇ ಉಳಿದಿದೆ. ಇದರ ನಡುವೆ ಎಚ್.ಡಿ.ಕುಮಾರಸ್ವಾಮಿ ಅವರು ಹೊಸ ಬಾಂಬ್ವೊಂದನ್ನು ಸಿಡಿಸಿದ್ದಾರೆ. ಮೈತ್ರಿ ಅಭ್ಯರ್ಥಿಯಾಗಿ ಚನ್ನಪಟ್ಟಣದಿಂದ ಕಣಕ್ಕಿಳಿಯಬೇಕು ಎಂದಿರುವ ಬಿಜೆಪಿಯ ಸಿ.ಪಿ.ಯೋಗೇಶ್ವರ್ ಅವರು ಕಾಂಗ್ರೆಸ್ನ ಸಂಪರ್ಕದಲ್ಲಿದ್ದಾರೆ ಎಂದು ಕುಮಾರಸ್ವಾಮಿ ಆರೋಪಿಸಿದ್ದಾರೆ.
ನಮ್ಮ ಮೈತ್ರಿ ಹಾಳು ಮಾಡಲು ಕೆಲಸ ಬಿಜೆಪಿ ನಾಯಕರು ಕಾಂಗ್ರೆಸ್ನವರನ್ನು ಸಂಪರ್ಕಿಸಿದ್ದಾರೆ. ಸಿ.ಪಿ.ಯೋಗೇಶ್ವರ್ ಅವರು ಎರಡು ಮೂರು ಬಾರಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರನ್ನು ಭೇಟಿಯಾಗಿ ಬಂದಿದ್ದಾರೆ ಎಂದು ಹೇಳಲಾಗುತ್ತಿದೆ. ಇದನ್ನೆಲ್ಲ ಹೈಕಮಾಂಡ್ ಕೂಡ ಗಮನಿಸುತ್ತಿದೆ ಎಂದು ಕುಮಾರಸ್ವಾಮಿ ಹೇಳಿದ್ದಾರೆ.

ಹೇಗಾದ್ರೂ ಮಾಡಿ ಈ ಕುಮಾರಸ್ವಾಮಿಯ ವರ್ಚಸ್ಸು ತಗ್ಗಿಸಬೇಕು ಎಂದು ಕೆಲವು ನಾಯಕರ ಉದ್ದೇಶ. ನಾನು ಎಲ್ಲ ಬಿಜೆಪಿ ನಾಯಕರ ಬಗ್ಗೆ ಹೀಗೆ ಹೇಳುತ್ತಿಲ್ಲ. ಕೆಲವರಿಗಂತೂ ಬಿಜೆಪಿ-ಜೆಡಿಎಸ್ ಮೈತ್ರಿಯನ್ನು ಜೀರ್ಣಿಸಿಕೊಳ್ಳಲೂ ಆಗುತ್ತಿಲ್ಲ ಎಂದು ದೂರಿದ್ದಾರೆ.
ಇತ್ತೀಚೆಗೆ ನನ್ನ ಗಮನಕ್ಕೆ ಹಲವು ವಿಚಾರಗಳು ಬರುತ್ತಿವೆ. ಕೆಲವರು ನಮ್ಮ ಮೈತ್ರಿ ಹಾಳು ಮಾಡಲು ಏನೇನೋ ಮಾಡುತ್ತಿದ್ದಾರೆ. ಇನ್ನು ಯೋಗೇಶ್ವರ್ ಅವರು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರನ್ನು ಎರಡು ಸಲ ಭೇಟಿಯಾಗಿ ಬಂದಿದ್ದಾರೆ ಎಂದು ಹೇಳುತ್ತಿದ್ದಾರೆ. ಅವರು ಯಾವ ಕಾರಣಕ್ಕಾಗಿ ಕಾಂಗ್ರೆಸ್ ನಾಯಕರನ್ನು ಭೇಟಿಯಾದರು ಎಂಬುದು ನನಗೆ ಬೇಕಾಗಿಲ್ಲ ಎಂದಿದ್ದಾರೆ.
ಇನ್ನು ಜೆಡಿಎಸ್ನಿಂದಲೇ ಸಿ.ಪಿ.ಯೋಗೇಶ್ವರ್ ಅವರ ಸ್ಪರ್ಧೆ ವಿಚಾರವಾಗಿ ಮಾತನಾಡಿ, ಅವರು ದೊಡ್ಡವರು, ಅವರ ಬಗ್ಗೆ ನಾನು ಏನ್ ಚರ್ಚೆ ಮಾಡ್ಲಿ? ಅವರು ಏನ್ ಮಾಡ್ತಾರೋ ಗೊತ್ತಿಲ್ಲ. ಆದರೆ ಎಲ್ಲವನ್ನೂ ನಾನು ಗಮನಿಸುತ್ತಿದ್ದೇನೆ. ಯೋಗೇಶ್ವರ್ ಅವರ ಕಾಂಗ್ರೆಸ್ ನಾಯಕರ ಜೊತೆಗೂ ಸಂಪರ್ಕದಲ್ಲಿದ್ದಾರೆ. ಜೊತೆಗೆ ಬೇರೆ ಬೇರೆ ಪಕ್ಷಗಳ ನಾಯಕರೊಂದಿಗೂ ಚರ್ಚೆಯಲ್ಲಿದ್ದಾರೆ. ಈ ಬಗ್ಗೆ ಎಲ್ಲೆಡೆಯೂ ಮಾತುಕತೆಗಳು ನಡೆಯುತ್ತಿವೆ. ಎಲ್ಲವನ್ನೂ ಹೈಕಮಾಂಡ್ ಗಮನಿಸುತ್ತಿದೆ ಎಂದು ಎಚ್ಚರಿಸಿದ್ದಾರೆ.
ಸದ್ಯ ಚನ್ನಪಟ್ಟಣ ಅಭ್ಯರ್ಥಿ ಘೋಷಣೆ ಬಾಕಿ ಇದೆ. ಈಗಾಗಲೇ ಬಿಜೆಪಿ ಹೈಕಮಾಂಡ್ ನಾಯಕರೇ ಹಲವು ಬಾರಿ ಸ್ಪಷ್ಟನೆ ನೀಡಿದ್ದಾರೆ. ನೀವು ಪ್ರತಿನಿಧಿಸುತ್ತಿರುವ ಕ್ಷೇತ್ರದ ಬಗ್ಗೆ ನೀವೇ ನಿರ್ಧಾರ ತೆಗೆದುಕೊಳ್ಳುವಂತೆ ನಮಗೆ ಬಿಟ್ಟಿದ್ದಾರೆ. ಈಗಾಗಲೇ ಚನ್ನಪಟ್ಟಣವು ಜೆಡಿಎಸ್ ಕ್ಷೇತ್ರ ಎನ್ನುವುದೂ ಎಲ್ಲರಿಗೆ ಗೊತ್ತಿದೆ. ಈಗಾಗಲೇ ಬಿಜೆಪಿಯು ಎರಡು ಕ್ಷೇತ್ರಗಳಿಗೆ ತಮ್ಮ ಪಕ್ಷದ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದೆ. ಹಾಗಾಗಿ ಚನ್ನಪಟ್ಟಣದಲ್ಲಿ ಅಭ್ಯರ್ಥಿಯನ್ನು ನಾವೇ ಘೋಷಿಸುತ್ತೇವೆ. ಸದ್ಯಕ್ಕೆ ಚನ್ನಪಟ್ಟಣ ಅಭ್ಯರ್ಥಿ ಘೋಷಣೆ ಬಗ್ಗೆ ಯಾವುದೇ ನಿರ್ಧಾರ ಇನ್ನೂ ಕೈಗೊಂಡಿಲ್ಲ ಎಂದು ಎಚ್.ಡಿ.ಕುಮಾರಸ್ವಾಮಿ ಅವರು ಗುಟ್ಟು ಉಳಿಸಿಕೊಂಡಿದ್ದಾರೆ.
ನನಗೆ ದೆಹಲಿ ಮಟ್ಟದಲ್ಲಿ ಉತ್ತಮ ಸಂಪರ್ಕವಿದೆ. ಹೀಗಾಗಿ ಏನಾದರೂ ಸಮಸ್ಯೆ ಸೃಷ್ಟಿ ಮಾಡಬೇಕು ಎಂದು ಬಿಜೆಪಿಯ ಕೆಲ ನಾಯಕರು ಮುಂದಾಗಿದ್ದಾರೆ. ಈ ಬಗ್ಗೆ ಹಲವರು ಮಾತಾಡಿಕೊಳ್ಳುತ್ತಿರುವ ಬಗ್ಗೆ ನನ್ನ ಕಿವಿಗೂ ಬಿದ್ದಿದೆ. ನಮ್ಮ ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿಗೆ ಹುಳಿ ಹಿಂಡಬೇಕು ಎಂದೇ ಕೆಲವರು ಇದ್ದಾರೆ. ಅವರ ಉದ್ದೇಶ ಈ ಕುಮಾರಸ್ವಾಮಿಯನ್ನ ಮಟ್ಟ ಹಾಕುವುದು. ಆದರೆ ಅವರ ಆ ಯತ್ನ ಫಲಿಸಲ್ಲ ಎಂದು ತಿರುಗೇಟು ನೀಡಿದ್ದಾರೆ.
ಹುಳಿ ಹಿಂಡೋರು ನಮ್ಮ ಪಕ್ಷದಲ್ಲಂತೂ ಇಲ್ಲ. ಆದರೆ ಹುಳಿ ಹಿಂಡುವವರು ಕಾಂಗ್ರೆಸ್ ಜೊತೆ ಕೈಜೋಡಿಸಿದ್ದಾರೆ. ಇದು ನನಗೂ ಗೊತ್ತಿದೆ. ಕೆಲವರು ಪ್ರಧಾನ ಮಂತ್ರಿ ನರೇಂದ್ರ ಮೋದಿ ವಿರುದ್ಧ ಸಂಚು ರೂಪಿಸಲು ಕಾಂಗ್ರೆಸ್ ನಾಯಕರ ಜತೆ ಸೇರಿಕೊಂಡಿರಬಹುದು ಎಂದು ಅನುಮಾನ ವ್ಯಕ್ತಪಡಿಸಿದ್ದಾರೆ.












Click it and Unblock the Notifications