ಅಮೂಲ್ಯ ಪಾಕ್ ಪರ ಘೋಷಣೆಗೆ ಎಚ್ ಡಿಕೆ ಏನಂದರು?
ರಾಮನಗರ, ಫೆಬ್ರವರಿ 21: "ಪಾಕಿಸ್ತಾನದ ಪರ ಘೋಷಣೆ ಕೂಗಿರುವುದು ಖಂಡನೀಯ. ಸಂಘಟಕರು ಎಚ್ಚರದಿಂದ ಇರಬೇಕು. ಎಲ್ಲರಿಗೂ ದೇಶ ಮುಖ್ಯ. ಭಾರತೀಯರಾಗಿ ನಮ್ಮ ದೇಶಕ್ಕೆ ಗೌರವ ಸಲ್ಲಿಸುವುದು ನಮ್ಮ ಕರ್ತವ್ಯ. ಆಕೆ ಉದ್ದೇಶಪೂರ್ವಕವಾಗಿ ಹೀಗೆ ಮಾಡಿದ್ದಾಳೋ ಇಲ್ಲ ಪ್ರಚಾರಕ್ಕಾಗಿ ಮಾಡಿದ್ದಾಳೋ, ಆಕೆಗೆ ಈ ಬಗ್ಗೆ ತಿಳಿವಳಿಕೆ ಇದೆಯೋ, ಇಲ್ಲವೋ ಗೊತ್ತಿಲ್ಲ" ಎಂದು ಪಾಕ್ ಪರ ಅಮೂಲ್ಯ ಎಂಬ ಯುವತಿ ಘೋಷಣೆ ಕೂಗಿದ ವಿಚಾರಕ್ಕೆ ಪ್ರತಿಕ್ರಿಯಿಸಿದ್ದಾರೆ ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ.
ತಮ್ಮ ಪುತ್ರ ನಿಖಿಲ್ ಕುಮಾರಸ್ವಾಮಿ ಮದುವೆಗೆ ನಿಗದಿ ಮಾಡಿರುವ ರಾಮನಗರದ ಜಾನಪದ ಲೋಕ ಪಕ್ಕದಲ್ಲಿನ ಜಾಗದಲ್ಲಿ ಭೂಮಿ ಪೂಜೆ ಸಲ್ಲಿಸಿದ ಅವರು ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು.
ಅಮೂಲ್ಯ ತಂದೆಯಿಂದ ಕೊಪ್ಪದಲ್ಲಿ ದೂರು ದಾಖಲು
"ನಮ್ಮ ಪಕ್ಷದ ಕಾರ್ಯಕರ್ತರಾದ ಇಮ್ರಾನ್ ಸಹ ಕಾರ್ಯಕ್ರಮದ ಸಂಘಟನೆ ಹೊಣೆ ಹೊತ್ತಿದ್ದರು. ಘೋಷಣೆ ಕೂಗಿದ ಕೂಡಲೇ ಆಕೆಯ ಬಳಿ ಮೈಕ್ ಕಸಿದುಕೊಂಡಿದ್ದಾರೆ. ಹೀಗಾಗಿ ಸಂಘಟಕರಿಂದ ಆ ರೀತಿಯ ಉದ್ದೇಶಪೂರ್ವಕವಾಗಿ ಪ್ರಯತ್ನ ಆಗಿಲ್ಲ ಎಂಬುದು ಸ್ಪಷ್ಟವಾಗಿದೆ. ಮೊದಲು ನಾನು ಭಾರತೀಯ ಎಂಬ ಭಾವನೆ ಇದ್ದಾಗ ಮಾತ್ರ ಹೋರಾಟಕ್ಕೆ ಇತರರು ಕೈಜೋಡಿಸುತ್ತಾರೆ. ಈ ರೀತಿಯ ಅಪಪ್ರಚಾರ ಯಾರಿಗೂ ಬೇಡ" ಎಂದು ಹೇಳಿದ್ದಾರೆ.
ಸಿಎಎ ವಿರೋಧಿ ಪ್ರತಿಭಟನೆ ಉದ್ದೇಶ ಏನೆಂಬುದು ಹೊರ ಬರುತ್ತಿದೆ ಎಂದು ಬಿಜೆಪಿ ನಾಯಕರು ಹೇಳಿರುವ ವಿಚಾರವಾಗಿ ಮಾತನಾಡಿದ ಅವರು, "ಬಿಜೆಪಿ ಈ ರೀತಿಯ ಪ್ರಯತ್ನಗಳಿಗೆ ಹೆಚ್ಚು ಪ್ರಚಾರ ಮಾಡುವ ಮೂಲಕ ತಮ್ಮ ಸರ್ಕಾರದ ವೈಫಲ್ಯಗಳನ್ನು ಮುಚ್ಚಲು ಹೊರಟಿದೆ. ದೇಶಭಕ್ತಿಯ ಬಗ್ಗೆ ಬಿಜೆಪಿಯಿಂದ ಪಾಠ ಕಲಿಯಬೇಕಿಲ್ಲ. ಹೋರಾಟಗಾರರು ತ್ರಿವರ್ಣ ಧ್ವಜ ಹಿಡಿದು ಹೋರಾಟ ನಡೆಸಿದ್ದಾರೆಯೇ ಹೊರತು ಪಾಕಿಸ್ತಾನದ ಧ್ವಜವನ್ನಲ್ಲ. ಸ್ವಾತಂತ್ರ್ಯ ಹೋರಾಟದಲ್ಲಿ ಹಾರಿದ್ದ ರಾಷ್ಟ್ರಧ್ವಜಕ್ಕಿಂತ ಹತ್ತು ಪಟ್ಟು ಹೆಚ್ಚು ಧ್ವಜಗಳು ಇಂದು ಹೋರಾಟದ ಹೆಸರಿನಲ್ಲಿ ಹಾರುತ್ತಿವೆ. ಸಂವಿಧಾನ ಕೊಟ್ಟ ಹಕ್ಕನ್ನು, ಸಂವಿಧಾನದ ಆಶಯಗಳು ಮತ್ತು ದೇಶವನ್ನು ಯಾರಿಂದಲೂ ಛಿದ್ರಗೊಳಿಸಲು ಆಗದು" ಎಂದು ಕಿಡಿಕಾರಿದ್ದಾರೆ.
ಪಾಕಿಸ್ತಾನ್ ಜಿಂದಾಬಾದ್ ಎಂದ ಅಮೂಲ್ಯ ಲಿಯೋನಾ ಪರಪ್ಪನ ಅಗ್ರಹಾರ ಜೈಲಿಗೆ
"ಯಾರೋ ಒಬ್ಬರು ಘೋಷಣೆ ಕೂಗಿದ ಮಾತ್ರಕ್ಕೆ ಅದರ ಗಮನವನ್ನು ಬೇರೆ ಕಡೆಗೆ ಸೆಳೆಯುವ ಅವಶ್ಯಕತೆ ಇಲ್ಲ" ಎಂದು ತಿರುಗೇಟು ನೀಡಿದ್ದಾರೆ.