Breaking: ರಾಮನಗರ ಹೆದ್ದಾರಿಯಲ್ಲಿ ಸಂಚಾರ ಅಪಾಯಕಾರಿ; ಎಚ್ಡಿಕೆ ಮನವಿ
ರಾಮನಗರ, ಆಗಸ್ಟ್ 29: ರಾಮನಗರದಲ್ಲಿ ಭಾರಿ ಮಳೆಯಿಂದ ಜಲಾವೃತಗೊಂಡ ಬೆಂಗಳೂರು-ಮೈಸೂರು ಹೆದ್ದಾರಿಗೆ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಭೇಟಿ ನೀಡಿ ಪರಿಸ್ಥಿತಿ ಅವಲೋಕಿಸಿದ್ದಾರೆ. ಈ ವೇಳೆ ಸಾರ್ವಜನಿಕರಲ್ಲಿ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಸಂಚರಿಸದಂತೆ ವಿನಂತಿ ಮಾಡಿಕೊಂಡಿದ್ದಾರೆ.
"ಸಾರ್ವಜನಿಕರಲ್ಲಿ ನನ್ನ ವಿನಂತಿ, ವಿಪರೀತ ಮಳೆಯಿಂದ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಪ್ರವಾಹಸದೃಶ ಪರಿಸ್ಥಿತಿ ಉಂಟಾಗಿದೆ. ಹೀಗಾಗಿ ಈ ಮಾರ್ಗದಲ್ಲಿ ಸಂಚರಿಸುವ ಜನರು ಇಂದು ಈ ಹೆದ್ದಾರಿಗೆ ಬರದೇ ಇರುವುದು ಒಳಿತು. ಅನಿವಾರ್ಯವಾಗಿ ಸಂಚರಿಸಲೇಬೇಕಾದರೆ ಪರ್ಯಾಯ ಮಾರ್ಗಗಳಲ್ಲಿ ಸಂಚರಿಸಿ" ಎಂದು ಮನವಿ ಮಾಡಿದ್ದಾರೆ.
"ಬೆಂಗಳೂರು-ಬೆಂಗಳೂರು ಹೆದ್ದಾರಿಯ ವಿವಿಧ ಭಾಗಗಳಲ್ಲಿ ಮಳೆನೀರು ತುಂಬಿದೆ. ಅನೇಕ ಕಡೆ ಹೆದ್ದಾರಿ ಜಲಾವೃತವಾಗಿದೆ. ಅಲ್ಲಲ್ಲಿ ವಾಹನಗಳು ನೀರಿನಲ್ಲಿ ಸಿಲುಕಿವೆ. ಹೀಗಾಗಿ ವಾಹನ ಸಂಚಾರ ಮಾಡುವುದು ಅಪಾಯಕಾರಿ" ಎಂದಿದ್ದಾರೆ.

ರಾಮನಗರದಲ್ಲಿ ಧಾರಾಕಾರ ಮಳೆ ಹಿನ್ನೆಲೆಯಲ್ಲಿ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ, ಜನರ ಸಮಸ್ಯೆಗಳಿಗೆ ಸ್ಪಂದಿಸುವಂತೆ ಜಿಲ್ಲಾಧಿಕಾರಿಗೆ ಮನವಿ ಮಾಡಿದ್ದರು. ರಾಮನಗರದ ಮುಖ್ಯ ಸರ್ಕಾರಿ ಅಧಿಕಾರಿ ಮತ್ತು ಜಿಲ್ಲಾಧಿಕಾರಿಗಳಿಗೆ ಕರೆ ಮಾಡಿ ನೀರಿನಲ್ಲಿ ಸಿಲುಕಿರುವ ಜನರನ್ನು ಸುರಕ್ಷಿತವಾಗಿ ಸ್ಥಳಾಂತರಿಸಲು ತಕ್ಷಣವೇ ಎರಡು ದೋಣಿಗಳ ವ್ಯವಸ್ಥೆ ಮಾಡುವಂತೆ ಮನವಿ ಮಾಡಿದ್ದರು.
ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಮಳೆ ನೀರು ತುಂಬಿರುವ ಕಾರಣ ವಾಹನಗಳು ಸಿಲುಕಿಕೊಂಡಿವೆ. ಸಂಚಾರ ದಟ್ಟಣೆ ಹೆಚ್ಚಾಗಿದ್ದು, ವಾಹನ ಸವಾರರು ಪರದಾಡುತ್ತಿದ್ದಾರೆ.
"ರಾಮನಗರ, ಚನ್ನಪಟ್ಟಣದಲ್ಲಿ ಮಳೆಯಿಂದ ಉಂಟಾಗಿರುವ ದುಸ್ಥಿತಿಯ ಬಗ್ಗೆ ಮಾನ್ಯ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ ಜತೆ ಚರ್ಚಿಸಿದ್ದೇನೆ. ಅವರು ಇನ್ನು ಸ್ವಲ್ಪ ಹೊತ್ತಿನಲ್ಲಿ ಜಿಲ್ಲೆಗೆ ಭೇಟಿ ನೀಡಿ, ಮಳೆಪೀಡಿತ ಪ್ರದೇಶಗಳಿಗೆ ಭೇಟಿ ನೀಡಲಿದ್ದಾರೆ" ಎಂದು ಕುಮಾರಸ್ವಾಮಿ ಹೇಳಿದ್ದಾರೆ.
"ತಕ್ಷಣ ಸಂತ್ರಸ್ತರಿಗೆ ಸರಕಾರವು ಎಲ್ಲ ರೀತಿಯ ಪರಿಹಾರ ನೀಡಬೇಕು ಎಂದು ಮನವಿ ಮಾಡಿದ್ದೇನೆ. ನನ್ನ ಮನವಿಗೆ ಓಗೊಟ್ಟು ಜಿಲ್ಲೆಗೆ ಎಲ್ಲಾ ರೀತಿಯ ನೆರವು ನೀಡುವುದಾಗಿ ಮುಖ್ಯಮಂತ್ರಿಗಳು ತಿಳಿಸಿದ್ದಾರೆ" ಎಂದು ಮಾಹಿತಿ ನೀಡಿದ್ದಾರೆ.
ಇನ್ನು, ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಮಳೆ ನೀರು ತುಂಬಿರುವ ಕಾರಣ ಬಸ್ಗಳನ್ನು ಬೇರೆ ಮಾರ್ಗಕ್ಕೆ ತಿರುಗಿಸಲಾಗಿದೆ.
ಬೆಂಗಳೂರು-ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಪ್ರವಾಹ ಪರಿಸ್ಥಿತಿ ಉಂಟಾಗಿದ್ದು, ಮೈಸೂರು ಮಾರ್ಗವಾಗಿ ಅಥವಾ ಬೆಂಗಳೂರು-ಕುಣಿಗಲ್- ಮೈಸೂರು ಮಾರ್ಗವಾಗಿ ಸಂಚರಿಸಲು ರಾಮನಗರ ಜಿಲ್ಲಾ ಪೊಲೀಸರು ಪ್ರಕಟಣೆ ಹೊರಡಿಸಿದ್ದಾರೆ.

ಇನ್ನು, ಭಾರಿ ಮಳೆಯ ಹಿನ್ನೆಲೆಯಲ್ಲಿ ರಾಮನಗರ, ಚಾಮರಾಜನಗರ ಮತ್ತು ಮಂಡ್ಯ ಜಿಲ್ಲೆಯಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಿ ಆದೇಶಿಸಲಾಗಿದೆ.
ರಾಮನಗರ ಜಿಲ್ಲೆಯಲ್ಲಿ ವರುಣರಭಟಕ್ಕೆ ಹಲವು ಪ್ರದೇಶಗಳು ಜಲಾವೃತವಾಗಿವೆ. ರಾಮನಗರ ತಾಲೂಕಿನ ಪಾಲಭೋವಿದೊಡ್ಡಿ ಗ್ರಾಮದ ಬಳಿ ಜಮೀನು, ಮನೆಗಳು ಜಲಾವೃತಗೊಂಡಿವೆ. ರಾಮನಗರ ಪಟ್ಟಣ ಅರ್ಕೇಶ್ವರ ಕಾಲೋನಿ ಜಲಾವೃತವಾಗಿದ್ದು, ಹಲವು ಮನೆಗಳಿಗೆ ಮಳೆ ನೀರು ನುಗ್ಗಿದೆ. ಇದರಿಂದ ಜನರು ಪರದಾಡುತ್ತಿದ್ದಾರೆ.
ರಾಮನಗರದ ಹನುಮಂತನಗರದಲ್ಲಿ ಮಳೆಯಿಂದಾಗಿ ರಂಗರಾಯನದೊಡ್ಡಿ ಕೆರೆ ಕುಸಿದಿದ್ದು, ಅಪಾರ ಪ್ರಮಾಣದಲ್ಲಿ ನೀರು ಹರಿಯುತ್ತಿದೆ.
ಈ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಆಯಾ ಬ್ಲಾಕ್ಗಳ ಶಿಕ್ಷಣಾಧಿಕಾರಿಗಳು ರಾಮನಗರ ಮತ್ತು ಚನ್ನಪಟ್ಟಣದಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಿದ್ದಾರೆ.












Click it and Unblock the Notifications