ರಾಮನಗರ ಚುನಾವಣೆ : ಎಲ್.ಚಂದ್ರಶೇಖರ್ ಬಿಜೆಪಿ ಅಭ್ಯರ್ಥಿ ಆಗಿದ್ದು ಹೇಗೆ?
Recommended Video

ರಾಮನಗರ, ಅಕ್ಟೋಬರ್ 26 : ರಾಮನಗರ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆ ನವೆಂಬರ್ 3ರಂದು ನಡೆಯಲಿದೆ. ಹಿರಿಯ ಕಾಂಗ್ರೆಸ್ ನಾಯಕರ ಸಿ.ಎಂ.ಲಿಂಗಪ್ಪ ಪುತ್ರ ಎಲ್.ಚಂದ್ರಶೇಖರ್ ಬಿಜೆಪಿ ಅಭ್ಯರ್ಥಿ. ಕಾಂಗ್ರೆಸ್ ನಾಯಕರ ಪುತ್ರ ಬಿಜೆಪಿ ಅಭ್ಯರ್ಥಿಯಾಗಿದ್ದು ಹೇಗೆ? ಎಂಬುದು ಈಗ ಬಹಿರಂಗವಾಗಿದೆ.
ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಸಂಸದ ಡಿ.ಕೆ.ಸುರೇಶ್ ಅವರು ಎಲ್.ಚಂದ್ರಶೇಖರ್ ಅವರು ಬಿಜೆಪಿ ಅಭ್ಯರ್ಥಿಯಾಗಿದ್ದು ಹೇಗೆ? ಎಂದು ಹೇಳಿದ್ದಾರೆ. ಕರ್ನಾಟಕ ಬಿಜೆಪಿ ಅಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಸಮ್ಮುಖದಲ್ಲಿ ಬಿಜೆಪಿ ಸೇರಿದ 5 ದಿನದಲ್ಲಿ ಅವರನ್ನು ಅಭ್ಯರ್ಥಿ ಎಂದು ಘೋಷಣೆ ಮಾಡಲಾಗಿತ್ತು.
'ಯಾರೂ ಏನೇ ಹೇಳಿದರೂ ರಾಮನಗರದಲ್ಲಿ ಅನಿತಾ ಕುಮಾರಸ್ವಾಮಿ ಅವರ ಗೆಲುವು ಕಟ್ಟಿಟ್ಟ ಬುತ್ತಿ. ಈ ಬಾರಿ ಹೆಚ್ಚು ಮತಗಳ ಅಂತರದಿಂದ ಅವರು ಗೆಲುವು ಸಾಧಿಸಲಿದ್ದಾರೆ' ಎಂದು ಡಿ.ಕೆ.ಸುರೇಶ್ ವಿಶ್ವಾಸ ವ್ಯಕ್ತಪಡಿಸಿದರು.
ನವೆಂಬರ್ 3ರಂದು ರಾಮನಗರ ಕ್ಷೇತ್ರದ ಉಪ ಚುನಾವಣೆ ನಡೆಯಲಿದೆ. ಕಾಂಗ್ರೆಸ್-ಜೆಡಿಎಸ್ ಮೈತ್ರಿ ಅಭ್ಯರ್ಥಿಯಾಗಿ ಅನಿತಾ ಕುಮಾರಸ್ವಾಮಿ, ಬಿಜೆಪಿಯಿಂದ ಎಲ್.ಚಂದ್ರಶೇಖರ್ ಕಣದಲ್ಲಿದ್ದಾರೆ. ನವೆಂಬರ್ 6ರಂದು ಚುನಾವಣಾ ಫಲಿತಾಂಶ ಪ್ರಕಟವಾಗಲಿದೆ.

ಡಿ.ಕೆ.ಸುರೇಶ್ ಹೇಳಿದ್ದೇನು?
'ಕಾಂಗ್ರೆಸ್ ನಾಯಕ ಸಿ.ಎಂ.ಲಿಂಗಪ್ಪ ಪುತ್ರ ಎಲ್.ಚಂದ್ರಶೇಖರ್ ರಾಮನಗರ ಉಪ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಲು ನಮ್ಮೊಂದಿಗೆ ಇದ್ದ ಅಸಮಾಧಾನವೇ ಕಾರಣ' ಎಂದು ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಸಂಸದ ಡಿ.ಕೆ.ಸುರೇಶ್ ಹೇಳಿದರು.

ಪ್ರಚಾರಕ್ಕೆ ತಂದೆಯೇ ಹೋಗಲ್ಲ
'ಎಲ್.ಚಂದ್ರಶೇಖರ್ ಬಿಜೆಪಿಯಿಂದ ಸ್ಪರ್ಧಿಸಿದ್ದಾರೆ. ಆದರೆ, ಅವರ ಪರವಾಗಿ ಪ್ರಚಾರ ಮಾಡಲು ಅವರ ತಂದೆಯೇ ಹೋಗಲ್ಲ. ಪಕ್ಷದ ಹೈಕಮಾಂಡ್ ನಾಯಕರ ಸೂಚನೆಯಂತೆ ನಾವು ಕಾಂಗ್ರೆಸ್-ಜೆಡಿಎಸ್ ಮೈತ್ರಿ ಅಭ್ಯರ್ಥಿ ಅನಿತಾ ಕುಮಾರಸ್ವಾಮಿ ಪರವಾಗಿ ಪ್ರಚಾರ ಮಾಡುತ್ತಿದ್ದೇವೆ' ಎಂದು ಡಿ.ಕೆ.ಸುರೇಶ್ ಹೇಳಿದರು.

ಡಿ.ಕೆ.ಶಿವಕುಮಾರ್ ಬರ್ತಾರೆ
'ರಾಮನಗರದಲ್ಲಿ ಪ್ರಚಾರಕ್ಕೆ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ, ಸಚಿವ ಡಿ.ಕೆ.ಶಿವಕುಮಾರ್ ಅವರು ಬರುತ್ತಾರೆ.ಯಾರೂ ಏನೇ ಹೇಳಲಿ, ರಾಮನಗರದಲ್ಲಿ ಅನಿತಾ ಕುಮಾರಸ್ವಾಮಿ ಅವರ ಗೆಲುವು ಕಟ್ಟಿಟ್ಟ ಬುತ್ತಿ. ಈ ಬಾರಿ ಅತಿ ಹೆಚ್ಚು ಮತಗಳ ಅಂತರದಿಂದ ಅವರು ಜಯಗಳಿಸುತ್ತಾರೆ' ಎಂದು ಡಿ.ಕೆ.ಸುರೇಶ್ ತಿಳಿಸಿದರು.

ಶ್ರೀರಾಮುಲು ವಿರುದ್ಧ ವಾಗ್ದಾಳಿ
'ಬಿ.ಶ್ರೀರಾಮುಲು ಅವರು ಮಾನಸಿಕ ಸ್ಥಿಮಿತ ಕಳೆದುಕೊಂಡಿದ್ದಾರೆ. ಪ್ರಚೋದನಾತ್ಮಕವಾಗಿ ಅವರು ಮಾತನಾಡುವುದನ್ನು ನಿಲ್ಲಿಸಲಿ. ಶ್ರೀರಾಮುಲು ಮತ್ತು ವಿ.ಸೋಮಣ್ಣ ಇಬ್ಬರು ಉತ್ತಮ ನಾಯಕರು ಯಾರಾದರೂ ಮುಖ್ಯಮಂತ್ರಿಯಾಗಲಿ' ಎಂದು ಡಿ.ಕೆ.ಸುರೇಶ್ ವ್ಯಂಗ್ಯವಾಡಿದರು.

ಬಳ್ಳಾರಿಗೆ ಕಳಿಸಿದ ಕಾಂಗ್ರೆಸ್
ಹಿರಿಯ ಕಾಂಗ್ರೆಸ್ ನಾಯಕ, ವಿಧಾನ ಪರಿಷತ್ ಸದಸ್ಯ ಸಿ.ಎಂ.ಲಿಂಗಪ್ಪ ಅವರನ್ನು ಬಳ್ಳಾರಿ ಚುನಾವಣಾ ಉಸ್ತುವಾರಿಯನ್ನಾಗಿ ಕಾಂಗ್ರೆಸ್ ನೇಮಿಸಿದೆ. ಲಿಂಗಪ್ಪ ಪುತ್ರ ಎಲ್.ಚಂದ್ರಶೇಖರ್ ಅವರು ರಾಮನಗರದಲ್ಲಿ ಬಿಜೆಪಿ ಅಭ್ಯರ್ಥಿ. ಆದರೆ, ತಂದೆಯೇ ಮಗನ ಪರವಾಗಿ ಪ್ರಚಾರ ಮಾಡುವಂತಿಲ್ಲ.












Click it and Unblock the Notifications