ರಾಮನಗರ ಉಪಚುನಾವಣೆ : ನಾನೇ ಅಭ್ಯರ್ಥಿ ಎಂದ ಅನಿತಾ ಕುಮಾರಸ್ವಾಮಿ
ರಾಮನಗರ, ಅಕ್ಟೋಬರ್ 07: ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರ ರಾಜೀನಾಮೆಯಿಂದ ತೆರವಾಗಿದ್ದ ರಾಮನಗರ ವಿಧಾನಸಭೆ ಕ್ಷೇತ್ರದಿಂದ ಅವರ ಪತ್ನಿ ಅನಿತಾ ಕುಮಾರಸ್ವಾಮಿ ಅವರು ಸ್ಪರ್ಧಿಸುವುದು ಖಚಿತವಾಗಿದೆ.
ಭಾನುವಾರದಂದು ರಾಮನಗರಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ನಾನೇ ಅಭ್ಯರ್ಥಿ. ಇನ್ನೆರಡು ದಿನದಲ್ಲಿ ಅಧಿಕೃತವಾಗಿ ಘೋಷಣೆ ಮಾಡಲಾಗುವುದು ಎಂದರು.
ರಾಮನಗರ ಉಪಚುನಾವಣೆ: ಜೆಡಿಎಸ್ ಅಭ್ಯರ್ಥಿ ಹೆಸರು ಅಂತಿಮ
ಬೇರೆ ಪಕ್ಷದಿಂದ ಯಾರು ಸ್ಪರ್ಧಿಸುತ್ತಾರೆ ಎಂಬುದರ ಬಗ್ಗೆ ನನಗೆ ಚಿಂತೆಯಿಲ್ಲ. ಕಾರ್ಯಕರ್ತರು ಒಮ್ಮತದಿಂದ ನನ್ನನ್ನು ಆಯ್ಕೆ ಮಾಡಲಾಗಿದೆ ಎಂದು ಅನಿತಾ ಅವರು ಹೇಳಿದರು. ಉಪಚುನಾವಣೆ ನವೆಂಬರ್ 03 ರಂದು ನಡೆಯಲಿದೆ. ಎಲ್ಲಾ ಕ್ಷೇತ್ರಗಳ ಮತ ಎಣಿಕೆ ನವೆಂಬರ್ 6 ರಂದು ನಡೆಯಲಿದೆ.
ಕಾಂಗ್ರೆಸ್ ಹುರಿಯಾಳು ಸಿಎಂ ಲಿಂಗಪ್ಪ ಮತ್ತು ಜೆಡಿಎಸ್ ರಾಷ್ಟ್ರಾಧ್ಯಕ್ಷ ದೇವೇಗೌಡರ ಕುಟುಂಬಗಳ ನಡುವಿನ ಕಲಹಕ್ಕೆ ರಾಮನಗರ ಪ್ರಸಿದ್ಧಿ ಪಡೆದಿದೆ. ಸದ್ಯ ಜೆಡಿಎಸ್ ರಾಜ್ಯಾಧ್ಯಕ್ಷ ಕುಮಾರಸ್ವಾಮಿ ಈ ಕ್ಷೇತ್ರವನ್ನು ಪ್ರತಿನಿಧಿಸುತ್ತಿದ್ದರು.
ಸಿಎಂ ಸ್ಥಾನ ಭದ್ರಪಡಿಸಿಕೊಳ್ಳಲು ಕುಮಾರಸ್ವಾಮಿ ನಿರಂತರ ತಂತ್ರ!
ಎಚ್.ಡಿ.ಕುಮಾರಸ್ವಾಮಿ ಅವರು ರಾಮನಗರ, ಚನ್ನಪಟ್ಟಣ ಕ್ಷೇತ್ರದಲ್ಲಿ ಚುನಾವಣೆಗೆ ಸ್ಪರ್ಧಿಸಿದ್ದರು. ಎರಡೂ ಕ್ಷೇತ್ರಗಳಲ್ಲಿ ಜಯಗಳಿಸಿದ್ದರು. ನಂತರ ರಾಮನಗರ ಕ್ಷೇತ್ರಕ್ಕೆ ರಾಜೀನಾಮೆ ಸಲ್ಲಿಸಿದ್ದರು.
ರಾಮನಗರ ಜಿಲ್ಲೆ ಅಭಿವೃದ್ಧಿಗಾಗಿ ಅನಿತಾ ಸ್ಪರ್ಧೆ
ರಾಮನಗರ -ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರ ತವರು ಕ್ಷೇತ್ರವಾಗಿದೆ. ಆದರೆ, 2018ರಲ್ಲಿ ಗೆಲುವು ಸಾಧಿಸಿದ ಬಳಿಕ ಈ ಕ್ಷೇತ್ರಕ್ಕೆ ರಾಜೀನಾಮೆ ನೀಡಿದ್ದಾರೆ. ಕ್ಷೇತ್ರಕ್ಕೆ ಪ್ರತಿ ತಿಂಗಳಿಗೆ ಒಮ್ಮೆಯಾದರೂ ಬಂದು ಹೋಗುತ್ತೇನೆ ಎಂಬ ಭರವಸೆ ನೀಡಿ ಹುಸಿಗೊಳಿಸಿದ್ದಾರೆ ಎಂದು ಕ್ಷೇತ್ರದ ಜನತೆ ಬೇಸರ ವ್ಯಕ್ತಪಡಿಸಿದ್ದಾರೆ.
ರಾಮನಗರ ಜಿಲ್ಲೆಯ ಅಭಿವೃದ್ಧಿಗೆ ಆದ್ಯತೆ ನೀಡುವ ನಿಟ್ಟಿನಲ್ಲಿ ಜೆಡಿಎಸ್ ತನ್ನ ಅಭ್ಯರ್ಥಿಯನ್ನು ಆಯ್ಕೆ ಮಾಡಲಿದೆ ಎಂದು ಕುಮಾರಸ್ವಾಮಿ ಅವರು ಹೇಳಿದ್ದರು. ಈ ಹಿಂದೆ ಇಲ್ಲಿಗೆ ಭೇಟಿ ಕೊಟ್ಟಿದ್ದಾಗ, ಅಭಿವೃದ್ಧಿ ಕಾರ್ಯಗಳ ಪ್ರಗತಿ ಪರಿಶೀಲನೆ ನಡೆಸುವುದಲ್ಲದೆ, ಸಾರ್ವಜನಿಕರಿಂದ ಅಹವಾಲು ಸ್ವೀಕರಿಸುವುದಾಗಿ ತಿಳಿಸಿದ್ದರು. ಆದರೆ, ಯಾವುದೂ ಸಾಧ್ಯವಾಗಿರಲಿಲ್ಲ. ಹೀಗಾಗಿ, ಕ್ಷೇತ್ರದ ಜನತೆ ವಿಶ್ವಾಸ ಉಳಿಸಿಕೊಳ್ಳಲು ಅನಿತಾ ಅವರನ್ನು ಕಣಕ್ಕಿಳಿಸಲು ಮುಂದಾಗಿದ್ದಾರೆ.
ಎಚ್.ಡಿ.ಕುಮಾರಸ್ವಾಮಿ ಅವರ ತವರು ಕ್ಷೇತ್ರ
2018ರ ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಜೆಡಿಎಸ್ ನಿಂದ ಸ್ಪರ್ಧಿಸಿದ್ದ ಕುಮಾರಸ್ವಾಮಿ ಅವರು 92,626 ಮತಗಳನ್ನು ಗಳಿಸಿದ್ದರು. ಕಾಂಗ್ರೆಸ್ಸಿನ ಪ್ರತಿಸ್ಪರ್ಧಿ ಇಕ್ಬಾಲ್ ಹುಸೇನ್ ಅವರು 69,990 ಮತಗಳನ್ನು ಪಡೆದು ಸೋಲು ಕಂಡಿದ್ದರು.
ರಾಮನಗರ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರ ತವರು ಕ್ಷೇತ್ರ. 2004, 2008, 2013, 2018ರ ಚುನಾವಣೆಯಲ್ಲಿ ಅವರು ಕ್ಷೇತ್ರದಲ್ಲಿ ಗೆಲುವು ಸಾಧಿಸಿದ್ದಾರೆ.
2004ರ ಚುನಾವಣೆಯಲ್ಲಿ 69,554, 2008 ಚುನಾವಣೆಯಲ್ಲಿ 71,700, 2013ರ ಚುನಾವಣೆಯಲ್ಲಿ 83,447 ಮತಗಳನ್ನು ಪಡೆದು ಕುಮಾರಸ್ವಾಮಿ ಅವರು ಕ್ಷೇತ್ರದಲ್ಲಿ ಜಯಗಳಿಸಿದ್ದಾರೆ.
ರಾಮನಗರಕ್ಕೆ ಅನಿತಾ ಕುಮಾರಸ್ವಾಮಿ? 'ಸೀತೆ' ಹೇಳಿಕೆ ನೀಡಿದೆ ಸುಳಿವು
ರಾಮನಗರದಲ್ಲಿ ಜೆಡಿಎಸ್ ಅಭ್ಯರ್ಥಿ ಯಾರು
ರಾಮನಗರದಿಂದ ನನ್ನ ತಾಯಿ ಅನಿತಾ ಕುಮಾರಸ್ವಾಮಿ ಸ್ಪರ್ಧಿಸುವುದು ಖಚಿತ ಎಂದು ನಿಖಿಲ್ ಕುಮಾರಸ್ವಾಮಿ ಅವರು ಇತ್ತೀಚೆಗೆ ಖಾಸಗಿ ಕಾರ್ಯಕ್ರಮವೊಂದರಲ್ಲಿ ಪಾಲ್ಗೊಂಡಿದ್ದಾಗ ಸುಳಿವು ನೀಡಿದ್ದರು. ರಾಮನಗರದಲ್ಲಿ ಜೆಡಿಎಸ್ ಅಭ್ಯರ್ಥಿ ಯಾರು ಎನ್ನುವ ಕುತೂಹಲಕ್ಕೆ ಬಹುತೇಕ ತೆರೆ ಎಳೆದಿದ್ದರು. ಚುನಾವಣಾ ಆಯೋಗ ದಿನಾಂಕ ಘೋಷಿಸಿದ್ದು, ಕೆಲ ದಿನಗಳಲ್ಲಿ ಅನಿತಾ ಹೆಸರನ್ನು ಅಧಿಕೃತವಾಗಿ ಜೆಡಿಎಸ್ ರಾಜ್ಯಾಧ್ಯಕ್ಷರು ಘೋಷಿಸುವ ಸಾಧ್ಯತೆಯಿದೆ.
ಮಂಡ್ಯದಿಂದ ಸ್ಪರ್ಧೆ ಮಾಡುವಂತೆ ಕಾರ್ಯಕರ್ತರ ಒತ್ತಡವಿದೆ
ರಾಜಕೀಯ ನನ್ನ ರಕ್ತದ ಕಣದಲ್ಲಿ ಬಂದಿದೆ. ಮಂಡ್ಯದಿಂದ ಸ್ಪರ್ಧೆ ಮಾಡುವಂತೆ ಕಾರ್ಯಕರ್ತರ ಒತ್ತಡವಿದೆ. ಮಂಡ್ಯದಿಂದ ಪ್ರಜ್ವಲ್ ರೇವಣ್ಣ, ನಿಖಿಲ್ ಯಾರು ಸ್ಪರ್ಧೆ ಮಾಡಬೇಕು ಎನ್ನುವ ಬಗ್ಗೆ ನಮ್ಮ ತಂದೆ ಹಾಗೂ ಜೆಡಿಎಸ್ ಪಕ್ಷ ತೀರ್ಮಾನ ತೆಗೆದುಕೊಳ್ಳಬೇಕು. ಪಕ್ಷದ ನಾಯಕರ ತೀರ್ಮಾನ, ಕಾರ್ಯಕರ್ತರ ಸಲಹೆಗೆ ನಾನು ಬದ್ಧನಾಗಿರುತ್ತೇನೆ ಎಂದು ನಿಖಿಲ್ ಹೇಳುವ ಮೂಲಕ, ರಾಜಕೀಯ ಎಂಟ್ರಿಯ ಸುಳಿವು ನೀಡಿದ್ದರು.
ನಿಖಿಲ್ ಕುಮಾರಸ್ವಾಮಿ v/s ಪ್ರಜ್ವಲ್ ರೇವಣ್ಣ, ಸಹೋದರರ ರಾಜಕೀಯ ಫೈಟ್ ಶುರು