ರಾಮನಗರ: ನಿತ್ಯ 2000ಕ್ಕೂ ಹೆಚ್ಚು ಕೋವಿಡ್ ಟೆಸ್ಟ್ ನಡೆಸಲು ಸೂಚನೆ
ರಾಮನಗರ, ಮೇ 29: ರಾಮನಗರ ಜಿಲ್ಲೆಯಲ್ಲಿ ಸರಾಸರಿ ಪ್ರತಿದಿನ 350 ರಿಂದ 400 ಕೋವಿಡ್ ಪಾಸಿಟಿವ್ ಪ್ರಕರಣಗಳು ಪತ್ತೆಯಾಗುತ್ತಿವೆ.
ಈ ಹಿನ್ನೆಲೆಯಲ್ಲಿ ಪ್ರಾಥಮಿಕ ಸಂಪರ್ಕಕ್ಕೆ ಬರುವವರು ಸೇರಿದಂತೆ ಪ್ರತಿನಿತ್ಯವೂ ಕೋವಿಡ್-19 ಪರೀಕ್ಷೆಯ ಪ್ರಮಾಣವನ್ನು ಕನಿಷ್ಠವೆಂದರೂ 2100ಕ್ಕೆ ಹೆಚ್ಚಿಸುವಂತೆ ನಗರಾಭಿವೃದ್ಧಿ ಮತ್ತು ಸಹಕಾರ ಇಲಾಖೆಯ ಪ್ರಧಾನ ಕಾರ್ಯದರ್ಶಿ ಹಾಗೂ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ತುಷಾರ್ ಗಿರಿನಾಥ್ ಅವರು ಜಿಲ್ಲಾಡಳಿತಕ್ಕೆ ಕಟ್ಟುನಿಟ್ಟಿನ ಸೂಚನೆ ನೀಡಿದರು.
ಶನಿವಾರದಂದು ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಆಯೋಜಿದ್ದ ಕೋವಿಡ್-19 ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ರಾಮನಗರ ಜಿಲ್ಲೆಯಲ್ಲಿ ಕೋವಿಡ್ ಪ್ರಕರಣಗಳು ಇಳಿಮುಖವಾಗುತ್ತಿದೆ. ಆದರೂ, ಕೋವಿಡ್ ಸೋಂಕಿಗೆ ಒಳಗಾಗುತ್ತಿರುವ ಪ್ರಾಥಮಿಕ ಸಂಪರ್ಕಕ್ಕೆ ಬರುವವರು ಸೇರಿದಂತೆ ಜಿಲ್ಲೆಯಲ್ಲಿ ಪ್ರತಿನಿತ್ಯ 2100 ರಿಂದ 2400 ಮಂದಿಗೆ ಕೋವಿಡ್ ಟೆಸ್ಟ್ಗಳನ್ನು ನಡೆಸುವ ಮೂಲಕ ಸೋಂಕು ಹರಡದಂತೆ ಮುಂಜಾಗ್ರತಾ ಕ್ರಮ ಕೈಗೊಳ್ಳವಂತೆ ಜಿಲ್ಲಾಡಳಿತಕ್ಕೆ ತಿಳಿಸಿದರು.
ಹೋಂ ಐಸೋಲೇಷನ್
ILI, SARI ಪ್ರಕರಣಗಳ ಮೇಲೆ ಹೆಚ್ಚಿನ ನಿಗಾವಹಿಸಬೇಕು ಹಾಗೆಯೇ, ಖಾಸಗಿ ಆಸ್ಪತ್ರೆಗಳಲ್ಲಿ ಈ ಪ್ರಕರಣಗಳಿಗೆ ಸಂಬಂಧಿಸಿದಂತೆ ವ್ಯವಸ್ಥಿತವಾಗಿ ಅವುಗಳು ವರದಿಯಾಗುವಂತೆ ನೋಡಿಕೊಳ್ಳಲು ಆರೋಗ್ಯ ಇಲಾಖೆಗೆ ಕಾರ್ಯದರ್ಶಿಗಳು ಸೂಚನೆ ನೀಡಿದರು.
ರಾಮನಗರ ಜಿಲ್ಲೆಯಲ್ಲಿ ಹೋಂ ಐಸೋಲೇಷನ್ ಸಂಖ್ಯೆಯನ್ನು ಸಾಧ್ಯವಾದಷ್ಟು ಮಟ್ಟಿಗೆ ಕಡಿತಗೊಳಿಸಲಾಗಿದೆ. ಸೋಂಕಿಗೆ ಒಳಗಾಗುವವರಿಗೆ ಕಡ್ಡಾಯವಾಗಿ ಕೋವಿಡ್ ಕೇರ್ ಸೆಂಟರ್ಗೆ ಸೇರಿಸಲಾಗುತ್ತಿದೆ. ಇದರಿಂದಾಗಿ ಗ್ರಾಮೀಣ ಮಟ್ಟದಲ್ಲಿ ಸೋಂಕು ಹರಡುವುದನ್ನು ತಪ್ಪಿಸಲಾಗುತ್ತಿದೆ. ಜಿಲ್ಲೆಯಲ್ಲಿ 1650 ಮಂದಿ ಕೋವಿಡ್ ಆರೈಕೆ ಕೇಂದ್ರಗಳಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿರುವುದಾಗಿ ಜಿಲ್ಲಾ ಪಂಚಾಯಿತಿ ಮುಖ್ಯಕಾರ್ಯನಿರ್ವಾಹಕ ಅಧಿಕಾರಿ ಇಕ್ರಂ ಅವರು ಮಾಹಿತಿ ನೀಡಿದರು.
ಕೊರೊನಾ ಲಸಿಕೆ
ಹೋಂ ಐಸೋಲೇಷನ್ಗಿಂತ ಕೋವಿಡ್ ಕೇರ್ ಸೆಂಟರ್ಗಳಿಗೆ ಹೆಚ್ಚು ಪರಿಣಾಮಕಾರಿಯಾಗಿ ಸೋಂಕಿತರು ಸೇರ್ಪಡೆಯಾಗುವುದನ್ನು ಉತ್ತೇಜಿಸಬೇಕು. ಇಲ್ಲಿರುವವರಿಗೆ ಅಗತ್ಯ ವೈದ್ಯಕೀಯ ನೆರವು, ಪೌಷ್ಠಿಕ ಆಹಾರ, ಸ್ವಚ್ಛತೆಗೆ ಹೆಚ್ಚಿನ ಒತ್ತು ನೀಡುವಂತೆ ತಿಳಿಸಿದ ಕಾರ್ಯದರ್ಶಿಗಳು ಜಿಲ್ಲೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಜನರು ಕೋವಿಡ್ ಕೇರ್ ಸೆಂಟರ್ನಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿರುವುದಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದರು.
ರಾಮನಗರ ಜಿಲ್ಲೆಯಲ್ಲಿ ಒಟ್ಟಾರೆ 12 ಲಕ್ಷ ಜನಸಂಖ್ಯೆ ಇದೆ. ಈ ಪೈಕಿ 8.5 ಲಕ್ಷ ಮಂದಿಗೆ ಲಸಿಕೆ ನೀಡಬೇಕಾಗುತ್ತದೆ. 45 ವರ್ಷ ಮೇಲ್ಪಟ್ಟವರ ಸಂಖ್ಯೆ 3 ಲಕ್ಷದಷ್ಟಿದೆ. ಇವರುಗಳ ಪೈಕಿ ಇದುವರೆಗೆ ಮೊದಲ ಡೋಸ್ ಆಗಿ 1.83 ಲಕ್ಷ ಮಂದಿಗೆ ಲಸಿಕೆ ನೀಡಲಾಗಿದೆ. ಇನ್ನು 1.17 ಲಕ್ಷ ಮಂದಿಗೆ ಲಸಿಕೆ ನೀಡಬೇಕಾಗಿದೆ ಎಂದು ಜಿಲ್ಲಾ ಪಂಚಾಯಿತಿ ಮುಖ್ಯಾ ಕಾರ್ಯನಿರ್ವಹಕ ಅಧಿಕಾರಿ ಇಕ್ರಂ ಅವರು ಮಾಹಿತಿ ನೀಡಿದರು.
ಪ್ರತಿನಿತ್ಯ 5500 ರಿಂದ 6000 ಮಂದಿಗೆ ಲಸಿಕೆ
ಜಿಲ್ಲೆಯಲ್ಲಿ ಪ್ರತಿನಿತ್ಯವೂ 5500 ಮಂದಿಯಿಂದ 6000 ಮಂದಿಗೆ ಲಸಿಕೆ ನೀಡಲಾಗುತ್ತಿದೆ. ಮುಂದಿನ ದಿನಗಳಲ್ಲಿ ಪ್ರಮಾಣವನ್ನು ಮತ್ತಷ್ಟು ಹೆಚ್ಚಳ ಮಾಡಿ 45 ವರ್ಷ ಮೇಲ್ಪಟ್ಟ ಎಲ್ಲರಿಗೂ ಲಸಿಕೆ ನೀಡುವುದನ್ನು 15 ದಿನಗಳ ಒಳಗಾಗಿ ಪೂರ್ಣಗೊಳಿಸುವಂತೆ ಉಸ್ತುವಾರಿ ಕಾರ್ಯದರ್ಶಿಗಳು ತಿಳಿಸಿದರು.
ಜಿಲ್ಲೆಯಲ್ಲಿ 18 ರಿಂದ 45 ವರ್ಷದೊಳಗಿನವರ ಸಂಖ್ಯೆ 5.13 ಲಕ್ಷದಷ್ಟಿದೆ. ಮುಂದಿನ ದಿನಗಳಲ್ಲಿ ಈ ವರ್ಗದ ಜನರಿಗೆ ಲಸಿಕೆ ನೀಡುವ ವ್ಯವಸ್ಥೆಗೆ ಸಂಬಂಧಿಸಿದಂತೆ ಸೂಕ್ತ ರೂಪು ರೇಷಗಳನ್ನು ಸಿದ್ಧಪಡಿಸಿ ಇಟ್ಟುಕೊಳ್ಳುವಂತೆ ಆರೋಗ್ಯ ಇಲಾಖೆಗೆ ಪ್ರಧಾನ ಕಾರ್ಯದರ್ಶಿಗಳು ತಿಳಿಸಿದರು. ಜಿಲ್ಲೆಯಲ್ಲಿ ಜನರು ಲಸಿಕೆ ಹಾಕಿಸಿಕೊಳ್ಳಲು ಮುಂದೆ ಬರುತ್ತಿರುವುದು ಸಂತಸದ ಸಂಗತಿ. ಲಸಿಕೆ ಹಾಕಿಸಿಕೊಳ್ಳವುದನ್ನು ಉತ್ತೇಜಿಸುವುದರ ಜೊತೆಗೆ ಮುಂದಿನ 3 ತಿಂಗಳ ಒಳಗಾಗಿ ಜಿಲ್ಲೆಯಲ್ಲಿರುವ ಎಲ್ಲಾ 8.5 ಲಕ್ಷ ಮಂದಿಗೆ ಲಸಿಕೆ ನೀಡುವಂತೆ ಕಾರ್ಯಪ್ರವೃತ್ತರಾಗಲು ಕಾರ್ಯದರ್ಶಿ ಸೂಚಿಸಿದರು.
ರಾಮನಗರದಲ್ಲಿ ಪೊಲೀಸ್ ಬಂದೋಬಸ್ತ್
ರಾಮನಗರ ಜಿಲ್ಲೆಯ ಪಡಿತರ ವಿತರಣಾ ಕೇಂದ್ರ, ಹಾಲಿನ ಬೂತ್, ಬೇರೆ ಬೇರೆ ವ್ಯಾಪಾರಿಗಳು ಸೇರಿದಂತೆ ಕೆಲವು ಕಡೆಗಳಲ್ಲಿ ದೈಹಿಕ ಅಂತರ ಪಾಲನೆಯಾಗುತ್ತಿಲ್ಲ. ಇಂತಹ ಕಡೆಗಳಲ್ಲಿ ಕಟ್ಟುನಿಟ್ಟಾಗಿ ಮಾಸ್ಕ್ ಧರಿಸುವುದು, ಸ್ಯಾನಿಟೈಸರ್ ಮತ್ತು ದೈಹಿಕ ಅಂತರವನ್ನು ಪಾಲಿಸುವುದನ್ನು ಕಡ್ಡಾಯಗೊಳಿಸಲು ಹೆಚ್ಚಿನ ಸಂಖ್ಯೆಯಲ್ಲಿ ಪೊಲೀಸರನ್ನು ನಿಯೋಜಿಸುವಂತೆ ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿಗಳಿಗೆ ನಗರಾಭಿವೃದ್ಧಿ ಪ್ರಧಾನ ಕಾರ್ಯದರ್ಶಿ ತಿಳಿಸಿದರು.
ಕಾರ್ಯಕ್ರಮದಲ್ಲಿ ಅಪರ ಜಿಲ್ಲಾಧಿಕಾರಿ ಜವರೇಗೌಡ ಟಿ, ಜಿಲ್ಲಾ ಆರೋಗ್ಯಾಧಿಕಾರಿ ಡಾ.ನಿರಂಜನ್, ಆರ್ಸಿಎಚ್ ಅಧಿಕಾರಿ ಡಾ.ಪದ್ಮಾ ಮತ್ತು ಆರೋಗ್ಯ ಇಲಾಖೆಯ ಇನ್ನಿತರ ಅಧಿಕಾರಿಗಳು ಹಾಜರಿದ್ದರು.
Recommended Video