ಡಿಸೆಂಬರ್ 15ರಂದು ಜೆಡಿಎಸ್ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ
ರಾಮನಗರ, ಡಿಸೆಂಬರ್ 05 : ಬಿಜೆಪಿ, ಕಾಂಗ್ರೆಸ್ಗೆ ಮುಂಚೆ ಜೆಡಿಎಸ್ ತನ್ನ ಚುನಾವಣೆಗೆ ಸ್ಪರ್ಧಿಸುತ್ತಿರುವ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡುವ ತಯಾರಿಯಲ್ಲಿದೆ.
ಡಿಸೆಂಬರ್ 15 ರಂದು ಜೆಡಿಎಸ್ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಲಿದೆ ಎಂದು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಹೇಳಿದ್ದಾರೆ.
ರಾಮನಗರದಲ್ಲಿ ಅಭಯ ಆಂಜನೇಯ ಪ್ರತಿಮೆಗೆ ಮಂಗಳವಾರ (ಡಿಸೆಂಬರ್ 05) ಪೂಜೆ ಸಲ್ಲಿಸಿ ಮಾತನಾಡಿದ ಅವರು ಮೊದಲ ಪಟ್ಟಿ ತಯಾರಿ ಬಹುತೇಕ ಮುಗಿದಿದ್ದು, ಒಂದಕ್ಕಿಂತ ಹೆಚ್ಚು ಆಕಾಂಕ್ಷಿಗಳು ಇರುವ ಕಡೆ ಒಮ್ಮತದ ಅಭ್ಯರ್ಥಿ ಆಯ್ಕೆ ಮಾಡಲು ಮುಖಂಡರ ಸಭೆಗಳನ್ನು ಮಾಡಲಾಗುತ್ತಿದೆ ಎಂದರು.
ಈಗಾಗಲೇ ಆಕಾಂಕ್ಷಿಗಳ ಪಟ್ಟಿ ಹೆಚ್ಚಿಗಿರುವುದರಿಂದ ಸ್ಥಳೀಯ ಮುಖಂಡರು, ಕಾರ್ಯಕರ್ತರ ಅಭಿಪ್ರಾಯ ತೆಗೆದುಕೊಂಡು ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ, ಹೊಸ ಮುಖಗಳಿಗೆ ಅದರಲ್ಲಿಯೂ ಯುವಕರಿಗೆ ಅವಕಾಶ ನೀಡುವ ಬಗ್ಗೆ ಗಮನ ವಹಿಸಲಾಗುತ್ತಿದೆ ಎಂದು ಅವರು ಹೇಳಿದರು.

ಬೇರೆ ಅಭ್ಯರ್ಥಿಯನ್ನು ಹುಡುಕಿಕೊಳ್ಳಲು ಸೂಚನೆ
ಮಡದಿ ಅನಿತಾ ಕುಮಾರಸ್ವಾಮಿ ಅವರ ಸ್ಪರ್ಧೆ ಬಗ್ಗೆ ಮಾತನಾಡಿದ ಅವರು 'ಚೆನ್ನಪಟ್ಟಣದಲ್ಲಿ ಜೆಡಿಎಸ್ ನಿಂದ ಸ್ಪರ್ಧಿಸಲು ಸ್ಥಳೀಯ ಅಭ್ಯರ್ಥಿಯನ್ನೇ ಆಯ್ಕೆ ಮಾಡುವಂತೆ ಕಾರ್ಯಕರ್ತರಿಗೆ ಸೂಚಿಸಿದ್ದೇನೆ, ಅನಿತಾ ಸ್ಪರ್ಧೆ ಬಗ್ಗೆ ನಿರ್ಧರಿಸಿಲ್ಲ' ಎಂದರು.

ಪ್ರತಾಪ್ ಸಿಂಹ ಮಾಡಿದ್ದು ಸರಿ ಇಲ್ಲ
ಹನುಮ ಜಯಂತಿ ನೆಪದಲ್ಲಿ ಕಾಂಗ್ರೆಸ್ ಹಾಗೂ ಬಿಜೆಪಿ ಸಮಾಜವನ್ನು ಒಡೆಯುತ್ತಿದ್ದು, ರಾಜಕೀಯ ಲಾಭಕ್ಕಾಗಿ ಕೋಮುವಾದವನ್ನು ಪ್ರಚೋದಿಸುತ್ತಿವೆ ಎಂದು ಕುಮಾರಸ್ವಾಮಿ ಆರೋಪಿಸಿದರು. ಪ್ರತಾಪ್ ಸಿಂಹ ಸಂಸದಾರಿಗಿದ್ದುಕೊಂಡು ಆ ರೀತಿ ವರ್ತಿಸಿದ್ದು ಸರಿಯಲ್ಲ ಎಂದು ಅವರು ಹೇಳಿದರು.

ಅಧಿಕಾರಿಗಳಿಗೆ ಎಚ್ಚರಿಕೆ
ರಾಮನಗರ ನಗರಸಭೆ ವ್ಯಾಪ್ತಿಯಲ್ಲಿ ಬಡವರಿಗೆ ನಿವೇಶನಗಳನ್ನು ಹಂಚುವ ನೆಪದಲ್ಲಿ ಕೆಲವರು ಸರ್ಕಾರದ ಹಣ ದೋಚುವ ಯತ್ನ ನಡೆಸಿದ್ದಾರೆ. ಅಧಿಕಾರಿಗಳು ಅವರ ಜೊತೆ ಕೈ ಜೋಡಿಸಿದಲ್ಲಿ ಜೈಲು ಪಾಲಾಗಬೇಕಾಗುತ್ತದೆ ಎಂದು ಕುಮಾರಸ್ವಾಮಿ ಎಚ್ಚರಿಸಿದರು.
ನಾಲ್ಕೈದು ಜನ ಸೇರಿಕೊಂಡು ರೈತರಿಂದ ಅಲ್ಪ ಹಣಕ್ಕೆ ಸುಮಾರು 67 ಎಕರೆ ಜಮೀನು ಖರೀದಿಸಿ ಸರ್ಕಾರಕ್ಕೆ ಎಕರೆಗೆ ಕೋಟಿ ರೂಪಾಯಿಗೆ ಮಾರಲು ಹುನ್ನಾರ ನಡೆಸಿರುವುದು ಗಮನಕ್ಕೆ ಬಂದಿದೆ. ಹೀಗಾಗಿ ಸಂಬಂಧಿಸಿದ ಆಯ್ಕೆ ಸಮಿತಿ ಸಭೆಯನ್ನು ಮುಂದೂಡುವಂತೆ ಸೂಚಿಸಿದ್ದೇನೆ ಎಂದರು.

ಗೆಲ್ಲುವ ವಿಶ್ವಾಸವಿದೆ
ಚುನಾವಣೆಯಲ್ಲಿ ಹೊಂದಾಣಿಕೆ ಮಾಡಿಕೊಳ್ಳುವ ಪ್ರಮೇಯವೇ ಇಲ್ಲ ಎಂದ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಅವರು ಜೆಡಿಎಸ್ ತನ್ನ ಸ್ವಂತ ಬಲದಿಂದ ಚುನಾವಣೆ ಸ್ಪರ್ಧಿಸಲಿದೆ ಮತ್ತು ವಿಜಯ ಸಾಧಿಸಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.












Click it and Unblock the Notifications