ಕಪಾಲಬೆಟ್ಟದಲ್ಲಿ ಏಸು ಪ್ರತಿಮೆ ನಿರ್ಮಿಸಲು ಬಿಡಲ್ಲ: ಭಜರಂಗದಳ
ರಾಮನಗರ, ಜನವರಿ 10: ಕನಕಪುರ ತಾಲ್ಲೂಕಿನ ಹಾರೋಬೆಲೆಯ ಕಪಾಲ ಬೆಟ್ಟದಲ್ಲಿ 114 ಅಡಿ ಜಗತ್ತಿನ ಎತ್ತರದ ಏಸು ಪ್ರತಿಮೆ ನಿರ್ಮಾಣ ವಿವಾದ ದಿನದಿಂದ ದಿನಕ್ಕೆ ತ್ರೀವ ಸ್ವರೂಪ ಪಡೆದುಕೊಳ್ಳುತ್ತಿದ್ದು, ಹಿಂದೂ ಪರ ಸಂಘಟನೆಗಳು ಪ್ರತಿಮೆ ನಿರ್ಮಾಣವನ್ನು ವಿರೋಧಿಸಿವೆ.
ಕಪಾಲಬೆಟ್ಟದಲ್ಲಿ ನಿರ್ಮಾಣವಾಗುತ್ತಿರುವ ಏಸುಕ್ರಿಸ್ತನ ಪ್ರತಿಮೆಗೆ ಅವಕಾಶ ಕೊಡಬಾರದೆಂದು ಭಜರಂಗದಳದ ರಾಷ್ಟ್ರೀಯ ಸಂಯೋಜಕ ಸೂರ್ಯನಾರಾಯಣ್ ನೇತೃತ್ವದಲ್ಲಿ ಭಜರಂಗದಳದ ಕಾರ್ಯಕರ್ತರು ಇಂದು ರಾಮನಗರ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು.
ಕಪಾಲ ಬೆಟ್ಟದ ಜಮೀನನ್ನು ಭೂ ರಹಿತ ರೈತರಿಗೆ ಹಂಚಿ ಎಂದ ಬಿಜೆಪಿ ನಿಯೋಗ
ಸೂರ್ಯನಾರಾಯಣ್ ಮಾತನಾಡಿ, ಏಸು ಪ್ರತಿಮೆ ನಿರ್ಮಾಣ ವಿರೋಧಿಸಿ ಇದೇ 13 ರಂದು ವಿವಿಧ ಸಂಘಟನೆಗಳು ಕನಕಪುರ ಚಲೋ ಹಮ್ಮಿಕೊಂಡಿದ್ದು, ಭಜರಂಗದಳ ಸಂಘಟನೆಯಿಂದ ಸಾವಿರಾರು ಕಾರ್ಯಕರ್ತರು ಭಾಗವಹಿಸುವುದಾಗಿ ಹೇಳಿದರು. ಜೊತೆಗೆ ಮುಂದಿನ ದಿನಗಳಲ್ಲಿ ದಿನಾಂಕ ನಿಗದಿ ಮಾಡಿ, ಪ್ರತಿಮೆ ನಿರ್ಮಾಣ ಖಂಡಿಸಿ ಬೈಕ್ ಜಾಥಾ ಮಾಡುವುದಾಗಿ ತಿಳಿಸಿದರು.
ಇನ್ನು ಇದೇ ಸಂದರ್ಭದಲ್ಲಿ ಕಪಾಲ ಬೆಟ್ಟದಲ್ಲಿ ಏಸು ಪ್ರತಿಮೆ ನಿರ್ಮಾಣಕ್ಕೆ ದಲಿತ ಸಂಘಟನೆ ಬೆಂಬಲ ವ್ಯಕ್ತಪಡಿಸಿದೆ. ಸಮತಾ ಸೈನಿಕ ದಳ ರಾಮನಗರದ ಪ್ರವಾಸಿ ಮಂದಿರದಲ್ಲಿ ಸುದ್ದಿಗೋಷ್ಠಿ ನಡೆಸಿ ತಮ್ಮ ಬೆಂಬಲ ವ್ಯಕ್ತಪಡಿಸಿದೆ. ವಿಶ್ವಕ್ಕೆ ಶಾಂತಿ ಸಂದೇಶ ಸಾರಿದ ಶಾಂತಿ ದೂತ ಏಸು ಪ್ರತಿಮೆ ನಿರ್ಮಾಣಕ್ಕೆ ಯಾರೂ ಅಡ್ಡಿಪಡಿಸಬಾರದು ಎಂದು ಹೇಳಿದೆ.
ಏಸು ಪ್ರತಿಮೆ ನಿರ್ಮಿಸಲು ಮುಂದಾದ ಡಿಕೆಶಿಗೆ ಬಿಎಸ್ವೈ ಪುತ್ರ ಕೇಳಿದ 3 ಪ್ರಶ್ನೆಗಳು
ಈ ಬಗ್ಗೆ ಜಿಲ್ಲಾಡಳಿತ ಹಾಗೂ ರಾಜ್ಯ ಸರ್ಕಾರ ಸೂಕ್ತ ಕ್ರಮ ವಹಿಸಬೇಕು. ಈಗಿರುವ ಜಾಗದಲ್ಲಿಯೇ ಏಸು ಪ್ರತಿಮೆ ನಿರ್ಮಾಣವಾಗಬೇಕು. ಹಿಂದು ಪರ ಸಂಘಟನೆಗಳ ಒತ್ತಡಕ್ಕೆ ಮಣಿದು ಸರ್ಕಾರ ಏಸು ಪ್ರತಿಮೆ ನಿರ್ಮಾಣಕ್ಕೆ ಅಡ್ಡಿಪಡಿಸಿದರೆ ಉಗ್ರ ಹೋರಾಟ ಮಾಡುವುದಾಗಿ
ಸಮತಾ ಸೈನಿಕ ದಳದ ರಾಮನಗರ ಜಿಲ್ಲಾಧ್ಯಕ್ಷ ಕೋಟೆ ಕುಮಾರ್ ಸುದ್ದಿಗೋಷ್ಠಿಯಲ್ಲಿ ಸರ್ಕಾರಕ್ಕೆ ಎಚ್ಚರಿಕೆ ನೀಡಿದರು.