Karnataka Assembly election 2023: ಯಾವುದೇ ಪಕ್ಷದ ಜೊತೆ ಹೊಂದಾಣಿಕೆ ಇಲ್ಲ: ಚನ್ನಪಟ್ಟಣದಲ್ಲಿ ಸಿ.ಪಿ.ಯೋಗೇಶ್ವರ್ ಸ್ಪಷ್ಟನೆ
ರಾಮನಗರ, ಫೆಬ್ರವರಿ, 01: ಹಳೆ ಮೈಸೂರು ಬಾಗದಲ್ಲಿ ಬಿಜೆಪಿ ಅಧಿಕಾರಕ್ಕೆ ಬರುಬೇಕು ಎಂದರೆ ಯಾವುದೇ ಪಕ್ಷದೊಂದಿಗೆ ಹೊಂದಾಣಿಕೆ ಮಾಡಿಕೊಳ್ಳಬಾರದು ಎಂಬುದು ನನ್ನ ಸ್ಪಷ್ಟವಾದ ನಿಲುವಾಗಿದೆ ಎಂದು ಮೊದಲಿನಿಂದಲೂ ಹೇಳುತ್ತಿದ್ದೇನೆ. ಅದನ್ನೇ ರಾಷ್ಟ್ರೀಯ ಕಾರ್ಯದರ್ಶಿಗಳಾದ ಸಿ.ಟಿ. ರವಿಯವರು ಹೇಳಿದ್ದಾರೆ. ನಮ್ಮೆಲ್ಲರ ನಿಲುವು ಆದೇ ಎಂದು ವಿಧಾನ ಪರಿಷತ್ ಸದಸ್ಯ ಸಿ.ಪಿ.ಯೋಗೇಶ್ವರ್ ಚನ್ನಪಟ್ಟಣದಲ್ಲಿ ತಿಳಿಸಿದರು. ಹಾಗೆಯೇ ಕ್ಷೇತ್ರದಲ್ಲಿ ಎಚ್.ಡಿ.ಕುಮಾರಸ್ವಾಮಿಯರ 150 ಕೋಟಿಯ ಅಭಿವೃದ್ಧಿಯೂ ಕಾಣುತ್ತಿಲ್ಲ ಎಂದು ಆಕ್ರೋಶ ಹೊರಹಾಕಿದರು.
ಮುಂಬರು ಚುನಾವಣೆಗೆ ತಾಲೀಮು ಪ್ರಾರಂಭಿಸಿರುವ ಬಿಜೆಪಿ ಮುಖಂಡ ಹಾಗೂ ವಿಧಾನ ಪರಿಷತ್ ಸದಸ್ಯ ಸಿ.ಪಿ.ಯೋಗೇಶ್ವರ್ ಚನ್ನಪಟ್ಟಣ ಕ್ಷೇತ್ರದಲ್ಲಿ ಹಮ್ಮಿಕೊಂಡಿರುವ ಸ್ವಾಭಿಮಾನ ಸಂಕಲ್ಪ ನಡಿಗೆ ಕಾರ್ಯಕ್ರಮಕ್ಕೆ ಕೆಂಗಲ್ ದೇವಾಲಯದಲ್ಲಿ ಪೂಜೆ ಸಲ್ಲಿಸುವ ಮೂಲಕ ಚಾಲನೆ ನೀಡಿದರು. ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನನ್ನ ವರ್ಚಸ್ಸು, ಪಕ್ಷದ ವರ್ಚಸ್ಸು ಎರಡೂ ಒಂದೇ ಆಗಿದೆ.
ಪಕ್ಷವನ್ನು ಬಲಿಷ್ಠ ಮಾಡುವ ನಿಟ್ಟಿನಲ್ಲಿ ತಾಲೂಕಿನಾದ್ಯಂತ ಸ್ವಾಭಿಮಾನ ಸಂಕಲ್ಪ ನಡಿಗೆ ಕಾರ್ಯಕ್ರಮದ ಮೂಲಕ ಸಂಚಾರ ಮಾಡುತ್ತಿದ್ದೇನೆ ಎಂದರು.
ನನ್ನ ಹಾಗೂ ರಾಜ್ಯ ನಾಯಕರ ನಡುವೆ ಯಾವುದೇ ಅಂತರ ಇಲ್ಲ. ಚುನಾವಣೆ ಹಿನ್ನೆಲೆ ರಾಜ್ಯದ ಎಲ್ಲಾ ಭಾಗಗಳಲ್ಲಿ ನಾಯಕರು ಪ್ರವಾಸ ಮಾಡುತ್ತಿದ್ದಾರೆ. ನಿನ್ನೆ ಕೂಡ ಸಿಎಂ ಭೇಟಿಯಾಗಿ ಸ್ವಾಭಿಮಾನ ಸಂಕಲ್ಪ ನಡಿಗೆ ಕಾರ್ಯಕ್ರಮದ ಬಗ್ಗೆ ತಿಳಿಸಿದ್ದೇನೆ. ಈ ಬಾರಿ ಯಾವುದೇ ಪಕ್ಷದ ಜೊತೆ ಹೊಂದಾಣಿಕೆ ಇಲ್ಲ ಎಂದು ಈಗಾಗಲೇ ಕೇಂದ್ರ ಗೃಹ ಸಚಿವ ಅಮಿಶ್ ಶಾ ಸ್ಪಷ್ಟಪಡಿಸಿದ್ದಾರೆ ಎಂದು ಸಿ.ಪಿ.ಯೋಗೇಶ್ವರ್ ಹೇಳಿದರು.

150 ಕೋಟಿಯ ಅಭಿವೃದ್ಧಿಯನ್ನೂ ಮಾಡಿಲ್ಲ
ಕ್ಷೇತ್ರದ ಅಭಿವೃದ್ಧಿಗೆ ಸುಮಾರು 1,500 ಕೋಟಿ ರೂಪಾಯಿ ಅನುದಾನ ತಂದಿದ್ದೇವೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ. ಆದರೆ ಆ ಹಣ ಏನಾಯ್ತು, ಜನರ ಕಣ್ಣಿಗೆ ಕಾಣುತ್ತಿಲ್ಲ. ಕ್ಷೇತ್ರದಲ್ಲಿ 150 ಕೋಟಿ ಮೌಲ್ಯದ ಅಭಿವೃದ್ಧಿಯನ್ನೂ ಮಾಡಿಲ್ಲ. 1,500 ಕೋಟಿ ಅನುದಾನದಲ್ಲಿ ತಾಲೂಕಿನಲ್ಲಿ ಕುಮಾರಸ್ವಾಮಿ ಏನು ಅಭಿವೃದ್ಧಿ ಮಾಡಿದ್ದಾರೆ ಅವರನ್ನೇ ಕೇಳಬೇಕು. ತಾಲೂಕಿನ ರಸ್ತೆಗಳೆಲ್ಲ ಗುಂಡಿ ಬಿದ್ದಿವೆ. ನಗರದಲ್ಲಿ ಯುಜಿಡಿ ನಿರ್ಮಾಣ ಆಗಿಲ್ಲ. ತಾಲೂಕು ಕೇಂದ್ರದಲ್ಲಿ ಒಂದೂ ಸುಸಜ್ಜಿತ ಸರ್ಕಾರಿ ಕಟ್ಟಡವನ್ನು ಕಟ್ಟಿಲ್ಲ ಎಂದು ವಿಧಾನ ಪರಿಷತ್ ಸದಸ್ಯ ಸಿ.ಪಿ.ಯೋಗೇಶ್ವರ್ ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ವಿರುದ್ಧ ವಾಗ್ದಾಳಿ ನಡೆಸಿದರು.

ಐದು ಬಾರಿ ಆಶೀರ್ವಾದ ಮಾಡಿದ್ದಾರೆ
ನಾನು ಈ ಕ್ಷೇತ್ರದ ಮನೆ ಮಗನಾಗಿದ್ದೇನೆ. ನನ್ನನ್ನು ಕ್ಷೇತ್ರದ ಜನರು ಐದು ಬಾರಿ ಆಶೀರ್ವಾದ ಮಾಡಿದ್ದಾರೆ. ಅದರೆ ಕಳೆದ ಚುನಾವಣೆಯಲ್ಲಿ ಸೋಲಿಸಿದ್ದಾರೆ. ನನ್ನ ಸೋಲಿಗೆ ನನಗೆ ಕಾರಣ ತಿಳಿಯುತ್ತಿಲ್ಲ. ಹಾಗಾಗಿ ಕ್ಷೇತ್ರದ ಪ್ರತಿ ಮನೆಗೂ ಸ್ವಾಭಿಮಾನ ಸಂಕಲ್ಪ ನಡಿಗೆ ಮೂಲಕ ತೆರಳಿ ಸೋಲಿಗೆ ಸಕಾರಣ ಕೇಳಿ ತಿಳಿದುಕೊಳ್ಳುತ್ತೇನೆ. ಇಡೀ ರಾಜ್ಯದಲೇ ಮಾದರಿಯಾಗಿ ನೀರಾವರಿ ಯೋಜನೆ ಅನುಷ್ಠಾನ ಮಾಡಿಲ್ಲವೇ ಎಂದು ಪ್ರಶ್ನೆ ಮಾಡಿದರು.

25 ವರ್ಷಗಳಿಂದ ರಾಜಕೀಯ ಜೀವನದಲ್ಲಿದ್ದೇನೆ
ನಾನು ಸ್ಥಳೀಯನಾಗಿದ್ದೇನೆ. ಇಲ್ಲೇ ಹುಟ್ಟಿ ಬೆಳೆದು ಬದುಕುತ್ತಿದ್ದೇನೆ. ಕಳೆದ 25 ವರ್ಷಗಳಿಂದ ರಾಜಕೀಯ ಜೀವನದಲ್ಲಿದ್ದೇನೆ. ನನಗೆ ರಾಜಕೀಯವಾಗಿ ಜನ್ಮನೀಡಿದ್ದೀರಿ. ಅದರೂ ಹೊರಗಡೆಯಿಂದ ಬಂದ ವ್ಯಕ್ತಿಗೆ ಮಣೆ ಹಾಕಿದ್ದೀರಿ. ಅವರಿಂದ ಅಭಿವೃದ್ಧಿ ಆಗಿದೆಯೇ? ತಾಲೂಕಿನ ಜೊತೆ ನಿರಂತರ ಸಂಪರ್ಕದಲ್ಲಿದ್ದಾರಾ? ತಾಲೂಕಿನ ಜನತ ನಾಡಿ ಮಿಡಿತ ಅವರಿಗೆ ಗೊತ್ತಿದೆಯೇ? ಈ ಹತ್ತಾರು ಪ್ರಶ್ನೆಗಳು ನನ್ನಲ್ಲಿವೆ. ಅವುಗಳನ್ನು ಜನರ ಮುಂದೆ ಇಟ್ಟು ಉತ್ತರ ಪಡೆಯುವ ಪ್ರಯತ್ನ ಮಾಡುತ್ತಿದ್ದೇನೆ ಎಂದು ತಿಳಿಸಿದರು.

ಕೇಂದ್ರ ಬಜೆಟ್ ಬಗ್ಗೆ ಸಿಪಿವೈ ಹೇಳಿದ್ದೇನು?
ಕೇಂದ್ರ ಬಜೆಟ್ ಘೋಷಣೆ ವಿಚಾರವಾಗಿ ಪ್ರತಿಕ್ರಿಯೆ ನೀಡಿದ ವಿಧಾನ ಪರಿಷತ್ ಸದಸ್ಯ ಸಿ.ಪಿ.ಯೋಗೇಶ್ವರ್, ಕೇಂದ್ರ ಬಜೆಟ್ನಿಂದ ಸಾಮಾನ್ಯವಾಗಿ ರಾಜ್ಯಕ್ಕೆ ಹೆಚ್ಚು ನಿರೀಕ್ಷೆ ಇದೆ. ಕೇಂದ್ರ ಸರ್ಕಾರ ರಾಜ್ಯಕ್ಕೆ ಹೆಚ್ಚು ಒತ್ತು ನೀಡಿದೆ. ಬೆಂಗಳೂರನ್ನು ಕೇಂದ್ರವಾಗಿಟ್ಟುಕೊಂಡು ಅಭಿವೃದ್ಧಿ ಮಾಡುತ್ತಿದ್ದಾರೆ. ಕೇಂದ್ರ ಸರ್ಕಾರ ರಾಜ್ಯದ ಅಭಿವೃದ್ಧಿಗೆ ಹೆಚ್ಚು ಒತ್ತು ನೀಡುತ್ತದೆ. ಅಲ್ಲದೇ ಬೆಂಗಳೂರು -ಮೈಸೂರು ದಶಪಥ ಎಕ್ಸ್ಪ್ರೆಸ್ ಹೈವೇ ಉದ್ಘಾಟನೆಗೆ ರಾಜ್ಯಕ್ಕೆ ಬಂದಾಗ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಮತ್ತಷ್ಟು ಘೋಷಣೆ ಮಾಡಲಿದ್ದಾರೆ ಎಂಬ ಆಶಾಭಾವನೆಯನ್ನು ವ್ಯಕ್ತಪಡಿಸಿದರು.












Click it and Unblock the Notifications