ಕರ್ನಾಟಕ ಬಂದ್: ರಾಮನಗರದಲ್ಲಿ ಅಣಕು ಶವಯಾತ್ರೆ, ಪ್ರತಿಕೃತಿ ದಹನ
ರಾಮನಗರ, ಡಿಸೆಂಬರ್ 5: ಮರಾಠಿ ಪ್ರಾಧಿಕಾರ ರಚನೆ ಮಾಡಿರುವ ಸರ್ಕಾರದ ನಾಡ ವಿರೋಧಿ ನಡೆಯನ್ನು ಖಂಡಿಸಿ ಕನ್ನಡಪರ ಸಂಘಟನೆಗಳ ಒಕ್ಕೂಟ ಕರೆ ಕೊಟ್ಟಿರುವ ಕರ್ನಾಟಕ ಬಂದ್ ಹಿನ್ನೆಲೆಯಲ್ಲಿ ಬೆಳಂಬೆಳಿಗ್ಗೆ ಬೀದಿಗಿಳಿದು ಕನ್ನಡಪರ ಸಂಘಟನೆಗಳು ಹೋರಾಟ ಆರಂಭಿಸಿವೆ.
Recommended Video
ಬೆಳಗಿನ ಜಾವ ಬೀದಿಗಿಳಿದ ಕಸ್ತೂರಿ ಕರ್ನಾಟಕ ಜನಪರ ವೇದಿಕೆ ಕಾರ್ಯಕರ್ತರು ರಾಮಗರದ ಐಜೂರು ವೃತ್ತದಲ್ಲಿ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು. ಅಲ್ಲದೇ ರಾಜ್ಯ ಸರ್ಕಾರ, ಬಸನಗೌಡ ಪಾಟೀಲ್ ಯತ್ನಾಳ್ ಮತ್ತು ಕಾಳಿಸ್ವಾಮಿಯವರ ಅಣಕು ಶವಯಾತ್ರೆ ನಡೆಸಿ ನಂತರ ಪ್ರತಿಕೃತಿ ದಹನ ಮಾಡುವ ಮೂಲಕ ತಮ್ಮ ಆಕ್ರೋಶ ವ್ಯಕ್ತಪಡಿಸಿದರು.
ಕರುನಾಡ ಸೇನೆ ರಾಜ್ಯ ಉಪಾಧ್ಯಕ್ಷ ಜಗದೀಶ್ ನೇತೃತ್ವದಲ್ಲಿ ರಸ್ತೆಗಿಳಿದ ಪ್ರತಿಭಟನಾಕಾರರು, ನಗರದ ಐಜೂರು ವೃತ್ತದ ಬೆಂಗಳೂರು-ಮೈಸೂರು ಹೆದ್ದಾರಿಯನ್ನು ತಡೆದು ಪ್ರತಿಭಟನೆ ನಡೆಸಿದರು. ರಾಜ್ಯ ಸರ್ಕಾರದ ಕನ್ನಡ ವಿರೋಧಿ ನಿರ್ಣಯದ ವಿರುದ್ಧ ಘೋಷಣೆ ಕೂಗಿದರು. ಮರಾಠಿ ಅಭಿವೃದ್ಧಿ ನಿಗಮವನ್ನು ಕೂಡಲೇ ರಾಜ್ಯ ಸರ್ಕಾರ ಹಿಂಪಡೆಯಬೇಕು ಎಂದು ಆಗ್ರಹಿಸಿ ಸರ್ಕಾರದ ಪ್ರತಿಕೃತಿಗೆ ಬೆಂಕಿ ಹಚ್ಚಿದರು.

ಬಂದ್ ವಿಫಲಗೊಳಿಸಲು ಸಜ್ಜಾದ ಜಿಲ್ಲಾಡಳಿತ
ಕನ್ನಡ ಪರ ಸಂಘಟನೆಗಳ ಒಕ್ಕೂಟ ಕರೆ ನೀಡಿರುವ ಕರ್ನಾಟಕ ಬಂದ್ ವಿಫಲಗೊಳಿಸಲು ರಾಮನಗರ ಜಿಲ್ಲಾಡಳಿತ ಸಜ್ಜಾಗಿದ್ದು, ರಾಮನಗರ ಜಿಲ್ಲೆ ಸಹಜ ಸ್ಥಿತಿಯಲ್ಲಿದೆ. ವಾಹನ ಸಂಚಾರ ಹಾಗೂ ಸಾರ್ವಜನಿಕರ ಸಂಚಾರ ಮಾಮೂಲಿನಂತಿದೆ. ಯಾವುದೇ ಅಹಿತಕರ ಘಟನೆ ನಡೆಯದಂತೆ ಮುನ್ನೆಚ್ಚರಿಕೆ ಕ್ರಮವಾಗಿ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಿದೆ.

ಇನ್ನು ಕರ್ನಾಟಕ ರಾಜ್ಯ ಸಾರಿಗೆ ಬಸ್ ಸಂಚಾರವೂ ಎಂದಿನಂತೆ ಮುಂದುವರೆದಿದೆ. ಶಾಂತಿಯುತವಾಗಿ ಪ್ರತಿಭಟನೆ ಮಾಡಲು ಮಾತ್ರ ಅವಕಾಶ ಮಾಡಿಕೊಟ್ಟ ಪೊಲೀಸ್ ಇಲಾಖೆ, ಬಲವಂತವಾಗಿ ಅಂಗಡಿ ಮುಂಗಟ್ಟುಗಗಳನ್ನು ಮುಚ್ಚಿಸುವುದನ್ನು ನಿರ್ಬಂಧಿಸಿದೆ. ಯಾವುದೇ ಸಂಘಟನೆಯ ಸದಸ್ಯರು ಕಾನೂನು ಮುರಿದರೆ ಕಠಿಣ ಕ್ರಮದ ಎಚ್ಚರಿಕೆಯನ್ನು ಪೋಲೀಸ್ ಇಲಾಖೆ ನೀಡಿದೆ.












Click it and Unblock the Notifications