ರಾಮನಗರ; ಹೈಟೆಕ್ ರೇಷ್ಮೆ ಮಾರುಕಟ್ಟೆ ನಿರ್ಮಾಣಕ್ಕೆ ಸಂಪುಟ ಒಪ್ಪಿಗೆ

ರಾಮನಗರ, ಜನವರಿ 27; ರಾಮನಗರ ಜಿಲ್ಲೆಯಲ್ಲಿ ಅತ್ಯಾಧುನಿಕ ಹೈಟೆಕ್ ರೇಷ್ಮೆ ಮಾರುಕಟ್ಟೆ ನಿರ್ಮಾಣಕ್ಕೆ ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ಸಿಕ್ಕಿದೆ. 20 ಎಕರೆ ಜಾಗದಲ್ಲಿ 75 ಕೋಟಿ ರೂ. ವೆಚ್ಚದಲ್ಲಿ ಹೈಟೆಕ್ ಮಾರುಕಟ್ಟೆ ನಿರ್ಮಾಣವಾಗಲಿದೆ.

ರೇಷ್ಮೆ, ಯುವ ಸಬಲೀಕರಣ ಮತ್ತು ಕ್ರೀಡಾ ‌ಸಚಿವ ಡಾ. ನಾರಾಯಣ ಗೌಡ ಈ ಕುರಿತು ಮಾಹಿತಿ ನೀಡಿದ್ದಾರೆ. ರಾಮನಗರ-ಚನ್ನಪಟ್ಟಣ ನಡುವೆ ಇರುವ ಪೋಲಿಸ್ ಟ್ರೈನಿಂಗ್ ಸ್ಕೂಲ್ ಪಕ್ಕದಲ್ಲಿ‌ ಸುಮಾರು 20 ಎಕರೆ ವಿಸ್ತೀರ್ಣದಲ್ಲಿ ಹೈಟೆಕ್ ರೇಷ್ಮೆ ಮಾರುಕಟ್ಟೆ ನಿರ್ಮಿಸಲು ನಿರ್ಧರಿಸಲಾಗಿದೆ.

ಚನ್ನಪಟ್ಟಣದ ಸರ್ಕಾರಿ ರೇಷ್ಮೆ ತರಬೇತಿ ಸಂಸ್ಥೆಯ 20 ಎಕರೆ ಜಾಗದಲ್ಲಿ 75 ಕೋಟಿ ರೂಪಾಯಿ ವೆಚ್ಚದಲ್ಲಿ ತಲೆ ಎತ್ತಲಿರುವ ರಾಮನಗರ ಹೈಟೆಕ್ ರೇಷ್ಮೆ ಮಾರುಕಟ್ಟೆ ನಿರ್ಮಾಣಕ್ಕೆ ನಬಾರ್ಡ್‌ನಿಂದ ಆರ್ಥಿಕ ನೆರವು ದೊರೆತಿದ್ದು ಹಣ ಕೂಡಾ ಬಿಡುಗಡೆ ಆಗಿದೆ.

"ಹೈಟೆಕ್ ರೇಷ್ಮೆ ಮಾರುಕಟ್ಟೆ ನಿರ್ಮಾಣಕ್ಕೆ ಸಚಿವ ಸಂಪುಟ ಒಪ್ಪಿಗೆ ನೀಡಿದೆ. ಮೂರು ತಿಂಗಳೊಳಗೆ ಕಾಮಗಾರಿಗೆ ಶಂಕುಸ್ಥಾಪನೆ" ಮಾಡಲಾಗುತ್ತದೆ ಎಂದು ಸಚಿವ ಡಾ. ನಾರಾಯಣ ಗೌಡ ಹೇಳಿದ್ದಾರೆ.

ಏಷ್ಯಾದ 2ನೇ ಅತಿ ದೊಡ್ಡ ಮಾರ್ಕೆಟ್

ಏಷ್ಯಾದ 2ನೇ ಅತಿ ದೊಡ್ಡ ಮಾರ್ಕೆಟ್

ಏಷ್ಯಾದಲ್ಲೇ ಎರಡನೇ ಅತಿ ದೊಡ್ಡ ರೇಷ್ಮೆ ಮಾರುಕಟ್ಟೆ ಎಂಬ ಹೆಗ್ಗಳಿಕೆ ಪಡೆದಿರುವ ರಾಮನಗರ ರೇಷ್ಮೆ ಮಾರುಕಟ್ಟೆಗೆ ಹೊರ ರಾಜ್ಯಗಳಾದ ತಮಿಳುನಾಡು, ಆಂಧ್ರ ಪ್ರದೇಶ ಹಾಗೂ ತೆಲಂಗಾಣ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಿಂದ ರೇಷ್ಮೆಗೂಡನ್ನು ತೆಗೆದುಕೊಂಡು ರೈತರು ಬರುತ್ತಾರೆ. ಹಲವು ವರ್ಷಗಳಿಂದ ರೇಷ್ಮೆ ಮಾರುಕಟ್ಟೆ ಚಿಕ್ಕ ಜಾಗದಲ್ಲಿರುವ ಕಾರಣ ಚನ್ನಪಟ್ಟಣಕ್ಕೆ ಶಿಫ್ಟ್ ಮಾಡಿ ಹೈಟೆಕ್ ಮಾರುಕಟ್ಟೆ ನಿರ್ಮಿಸಲಾಗುತ್ತದೆ. ಇದರಿಂದ ರೇಷ್ಮೆ ಬೆಳೆಗಾರರಿಗೆ ಅನುಕೂಲ ಆಗಲಿದೆ.

ಶೀಘ್ರದಲ್ಲೇ ಟೆಂಡರ್ ಕರೆಯಲಾಗುತ್ತದೆ

ಶೀಘ್ರದಲ್ಲೇ ಟೆಂಡರ್ ಕರೆಯಲಾಗುತ್ತದೆ

"ಹೈಟೆಕ್ ರೇಷ್ಮೆ ಮಾರುಕಟ್ಟೆ ನಿರ್ಮಾಣಕ್ಕಾಗಿ ನಬಾರ್ಡ್‌ನಿಂದ 75 ಕೋಟಿ ಬಿಡುಗಡೆಯಾಗಿದ್ದು, ಶೀಘ್ರದಲ್ಲೇ ಟೆಂಡರ್ ಪ್ರಕ್ರಿಯೆ ಪೂರ್ಣಗೊಳಿಸಿ ಮೂರು ತಿಂಗಳೊಳಗೆ ಹೈಟೆಕ್ ಮಾರುಕಟ್ಟೆ ನಿರ್ಮಾಣಕ್ಕೆ ಶಂಕುಸ್ಥಾಪನೆ ನೆರವೇರಿಸಲಾಗುವುದು" ಎಂದು ಸಚಿವ ಡಾ. ನಾರಾಯಣ ಗೌಡ ತಿಳಿಸಿದ್ದಾರೆ.

"ಸದ್ಯ ರಾಮನಗರ ಮಾರುಕಟ್ಟೆಗೆ ಪ್ರತಿನಿತ್ಯ 40 ರಿಂದ 50 ಟನ್ ರೇಷ್ಮೆ ಗೂಡು ಬರುತ್ತಿದ್ದು, ಹೈಟೆಕ್ ಮಾರುಕಟ್ಟೆ ನಿರ್ಮಾಣವಾದ ಬಳಿಕ 100 ಟನ್‌ಗೂ ಅಧಿಕ ರೇಷ್ಮೆಗೂಡು ಬರುವ ನಿರೀಕ್ಷೆ ಇದೆ. ಏಷ್ಯಾದ ಅತೀ ದೊಡ್ಡ ರೇಷ್ಮೆ ಮಾರುಕಟ್ಟೆ ಎಂಬ ಹೆಗ್ಗಳಿಕೆ ಪಡೆಯುವುದಲ್ಲದೇ, ಹೈಟೆಕ್ ಮಾಡುವುದರಿಂದ ಹಲವರಿಗೆ ಉದ್ಯೋಗ ಸೃಷ್ಟಿಯಾಗಲಿದೆ" ಎಂದು ಸಚಿವರು ಹೇಳಿದರು.

ಮುಖ್ಯಮಂತ್ರಿಗಳಿಗೆ ಧನ್ಯವಾದ

ಮುಖ್ಯಮಂತ್ರಿಗಳಿಗೆ ಧನ್ಯವಾದ

ರಾಮನಗರದಲ್ಲಿ ಹೈಟೆಕ್ ರೇಷ್ಮೆ ಮಾರುಕಟ್ಟೆ ನಿರ್ಮಾಣಕ್ಕೆ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ದೊರಕಿಸಿಕೊಡುವಲ್ಲಿ ಸಹಕರಿಸಿದ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ ಹಾಗೂ ಸಚಿವ ಸಂಪುಟದ ಸಹೋದ್ಯೋಗಿಗಳಿಗೆ ಧನ್ಯವಾದ ತಿಳಿಸುವುದಾಗಿ ಸಚಿವ ಡಾ.ನಾರಾಯಣಗೌಡರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ರಾಮನಗರ ಹೈಟೆಕ್ ರೇಷ್ಮೆ ಮಾರುಕಟ್ಟೆ ನಿರ್ಮಾಣಕ್ಕೆ ಗುರುವಾರ ನಡೆಯುವ ಸಚಿವ ಸಂಪುಟದಲ್ಲಿ ಗ್ರೀನ್ ಸಿಗ್ನಲ್ ಸಿಗುತ್ತದೆ ಎಂಬ ಸುಳಿವನ್ನು ಜಿಲ್ಲಾ ಉಸ್ತುವಾರಿ ಸಚಿವ ಡಾ. ಸಿ. ಎನ್. ಅಶ್ವಥ ನಾರಾಯಣ ಬುಧವಾರವೇ ಮಾಧ್ಯಮ ಗಳೊಂದಿಗೆ ಹಂಚಿಕೊಂಡಿದ್ದರು.

ಹೇಳಿಕೆ ನೀಡಿದ್ದ ಸಚಿವರು

ಹೇಳಿಕೆ ನೀಡಿದ್ದ ಸಚಿವರು

ಬುಧವಾರ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆದ 73ನೇ ಗಣರಾಜ್ಯೋತ್ಸವದ ಕಾರ್ಯಕ್ರಮದ ನಂತರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ್ದ ಜಿಲ್ಲಾ ಉಸ್ತುವಾರಿ ಸಚಿವ ಹಾಗೂ ಉನ್ನತ ಶಿಕ್ಷಣ ಸಚಿವ ಡಾ. ಸಿ. ಎನ್. ಅಶ್ವಥ ನಾರಾಯಣ, "ಗುರುವಾರ ನಡೆಯುವ ಸಚಿವ ಸಂಪುಟ ಸಭೆಯಲ್ಲಿ ರಾಮನಗರ ಹೈಟೆಕ್ ರೇಷ್ಮೆ ಮಾರುಕಟ್ಟೆ ನಿರ್ಮಾಣಕ್ಕೆ ಅನುಮೋದನೆ ದೊರೆಯಲಿದೆ" ಎಂದು ಹೇಳಿದ್ದರು. ಜಿಲ್ಲಾ ಉಸ್ತುವಾರಿ ಸಚಿವರ ಹೇಳಿಕೆಯ ಬೆನ್ನಲ್ಲೇ ಸಚಿವ ಸಂಪುಟದ ಒಪ್ಪಿಗೆ ದೊರೆತಿದೆ. ಜಿಲ್ಲೆಯ ರೇಷ್ಮೆ ಬೆಳೆಗಾರರಲ್ಲಿ ಸಂತಸ ಮೂಡಿದೆ‌, ಅಲ್ಲದೇ ಹಲವು ವರ್ಷಗಳಿಂದ ರೇಷ್ಮೆ ಮಾರುಕಟ್ಟೆಯನ್ನು ವಿಸ್ತರಿಸುವಂತೆ ಒತ್ತಾಯಿಸುತ್ತಿದ್ದ ಹೋರಾಟಗಾರರು ಸರ್ಕಾರದ ನಿರ್ಧಾರಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+