ರಾಮನಗರ: ಶಾಲಾ, ಕಾಲೇಜಿನ ಸುತ್ತಮುತ್ತ ನಿಷೇಧಾಜ್ಞೆ ಜಾರಿ ಮಾಡಿದ ಜಿಲ್ಲಾಧಿಕಾರಿ
ರಾಮನಗರ, ಫೆಬ್ರವರಿ 15: ಹಿಜಾಬ್ ಮತ್ತು ಕೇಸರಿ ವಿವಾದದ ಬಳಿಕ ಸೋಮವಾರದಿಂದ ಶಾಂತಿಯುತವಾಗಿ ಹೈಸ್ಕೂಲ್ ತರಗತಿಗಳು ಪುನರಾರಂಭಗೊಂಡಿದ್ದು, ಇದೀಗ ಬುಧವಾರದಿಂದ ಪಿಯು, ಡಿಗ್ರಿ, ವಿಶ್ವವಿದ್ಯಾಲಯ ಮತ್ತು ಡಿಪ್ಲೋಮಾ ಕಾಲೇಜುಗಳನ್ನು ಆರಂಭಿಸಲಾಗುವುದು ಎಂದು ಉನ್ನತ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ.
ಹಿಜಾಬ್ ಮತ್ತು ಕೇಸರಿ ವಿವಾದದ ಮುನ್ನೆಚ್ಚರಿಕೆ ಕ್ರಮವಾಗಿ ರಾಮನಗರ ಜಿಲ್ಲಾ ವ್ಯಾಪ್ತಿಯ ಎಲ್ಲಾ ಪ್ರೌಢಶಾಲೆಗಳು, ಪದವಿ ಪೂರ್ವ ಕಾಲೇಜುಗಳು, ಪದವಿ ಕಾಲೇಜುಗಳು ಹಾಗೂ ಎಲ್ಲಾ ವೃತ್ತಿಪರ ಕಾಲೇಜುಗಳ ಮುಖ್ಯದ್ವಾರದಿಂದ 100 ಮೀ. ಪ್ರದೇಶವನ್ನು ನಿಷೇಧಿತ ಪ್ರದೇಶವೆಂದು ಘೋಷಿಸಿ ಜಿಲ್ಲಾಧಿಕಾರಿ ಡಾ. ರಾಕೇಶ್ ಕುಮಾರ್.ಕೆ ಆದೇಶ ಹೊರಡಿಸಿದ್ದಾರೆ.
ಸಿ.ಆರ್.ಪಿ.ಸಿ ಸೆಕ್ಷನ್ 144ರ ಅಡಿಯಲ್ಲಿ ಪದತ್ತವಾದ ಅಧಿಕಾರವನ್ನು ಚಲಾಯಿಸಿ ಈ ತಕ್ಷಣದಿಂದ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ ರಾಮನಗರ ಜಿಲ್ಲೆಯಲ್ಲಿ ಯಾವುದೇ ರೀತಿಯ ಅಹಿತಕರ ಘಟನೆಗಳು ನಡೆಯದಂತೆ ಹಾಗೂ ವಿದ್ಯಾರ್ಥಿಗಳ ವಿದ್ಯಾಭ್ಯಾಸದ ಹಿತದೃಷ್ಟಿಯಿಂದ, ಕಾನೂನು ಸುವ್ಯವಸ್ಥೆ ಕಾಪಾಡುವ ಸಲುವಾಗಿ ಆದೇಶ ಹೊರಡಿಸಲಾಗಿದೆ ಎಂದು ರಾಮನಗರ ಜಿಲ್ಲಾಧಿಕಾರಿ ತಮ್ಮ ಆದೇಶದಲ್ಲಿ ತಿಳಿಸಿದ್ದಾರೆ.

ನಿಷೇಧಿತ ಪ್ರದೇಶದಲ್ಲಿ 5 ಹಾಗೂ ಹೆಚ್ಚು ಜನಗಳು ಗುಂಪು ಗುಂಪಾಗಿ ಸೇರುವುದನ್ನು ನಿರ್ಬಂಧಿಸಿದ್ದು, ಈ ಆದೇಶವನ್ನು ಉಲ್ಲಂಘಿಸಿದವರ ವಿರುದ್ಧ ಭಾರತ ದಂಡ ಸಂಹಿತೆ 188ನೇ ಪ್ರಕರಣದಡಿ ಹಾಗೂ ಅನ್ವಯವಾಗುಬಹುದಾದ ಇತರೆ ಕಾನೂನುಗಳ ಉಪಬಂಧಗಳ ಅಡಿ ಕ್ರಿಮಿನಲ್ ಮೊಕದ್ದಮೆ ದಾಖಲಿಸಿ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಜಿಲ್ಲಾಧಿಕಾರಿ ಡಾ.ಕೆ. ರಾಕೇಶ್ ಕುಮಾರ್ ಆದೇಶ ಹೊರಡಿಸಿದ್ದಾರೆ.
ನಾಳೆಯಿಂದ ಕಾಲೇಜುಗಳನ್ನು ಪ್ರಾರಂಭಿಸುವ ಬಗ್ಗೆ ಸರ್ಕಾರ ತೀರ್ಮಾನ ತೆಗೆದುಕೊಂಡ ಹಿನ್ನಲೆಯಲ್ಲಿ ರಾಮನಗರ ಜಿಲ್ಲೆಯಲ್ಲಿ ಹಿಜಾಬ್ ಮತ್ತು ಕೇಸರಿ ವಿವಾದ ಜರುಗದಂತೆ ಮುನ್ನೆಚ್ಚರಿಕೆ ಕ್ರಮವಾಗಿ ಜಿಲ್ಲಾಡಳಿತ ನಿಷೇದಾಜ್ಞೆ ಜಾರಿ ಮಾಡಿದೆ.
ತುಮಕೂರಿನಲ್ಲೂ ನಿಷೇಧಾಜ್ಞೆ ಜಾರಿ
ಪಿಯು ಕಾಲೇಜುಗಳು ಪುನರಾರಂಭಗೊಳ್ಳುವ ಹಿನ್ನೆಲೆಯಲ್ಲಿ ತುಮಕೂರು ಜಿಲ್ಲೆಯಲ್ಲಿ ಫೆಬ್ರವರಿ 16ರ ಬೆಳಗ್ಗೆ 6ರಿಂದ ಮುಂದಿನ ಆದೇಶದವರೆಗೆ ಸೆಕ್ಷನ್ 144 ಜಾರಿಗೊಳಿಸಲಾಗಿದೆ. ಈ ಆದೇಶವು ಪಿಯು ಕಾಲೇಜುಗಳು, ಪದವಿ ಮತ್ತು ಇತರ ಕಾಲೇಜುಗಳಿಂದ 200 ಮೀಟರ್ ವರೆಗೆ ಅನ್ವಯಿಸುತ್ತದೆ ಎಂದು ತುಮಕೂರು ಜಿಲ್ಲಾಧಿಕಾರಿ ವೈ.ಎಸ್. ಪಾಟೀಲ್ ತಿಳಿಸಿದ್ದಾರೆ.
ಇತರ ಜಿಲ್ಲೆಗಳಲ್ಲೂ ನಿಷೇಧಾಜ್ಞೆ
ಬುಧವಾರದಿಂದ (ಫೆಬ್ರವರಿ 16) ರಾಜ್ಯಾದ್ಯಂತ ಕಾಲೇಜುಗಳು ಆರಂಭ ಹಿನ್ನೆಲೆ ಕೆಲ ಜಿಲ್ಲೆಗಳಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ನಿಷೇಧಾಜ್ಞೆ ಜಾರಿ ಮಾಡಲಾಗಿದೆ. ಬಾಗಲಕೋಟೆ, ರಾಯಚೂರು, ವಿಜಯಪುರ, ಕೊಪ್ಪಳ, ಉತ್ತರ ಕನ್ನಡ ಜಿಲ್ಲೆಯಾದ್ಯಂತ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲಾಗಿದೆ. ಎಲ್ಲಾ ಪ್ರೌಢಶಾಲೆ, ಕಾಲೇಜುಗಳ ಸುತ್ತಮುತ್ತ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.
ಹಿಜಾಬ್ ವಿವಾದ ಹಿನ್ನೆಲೆ ಜಿಲ್ಲಾಡಳಿತ ಉತ್ತರ ಕನ್ನಡ ಜಿಲ್ಲೆಯಲ್ಲಿ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿದೆ. ಕಾಲೇಜು ಒಳಾಂಗಣದಲ್ಲಿ ಹೊರಗಿನವರಿಗೆ ಮತ್ತು ಮಾಧ್ಯಮಕ್ಕೆ ನೋ ಎಂಟ್ರಿ ಎಂದು ತಿಳಿಸಲಾಗಿದೆ. ಪ್ರತಿ ಕಾಲೇಜುಗಳ ಮುಂದೆ ಪೊಲೀಸ್ ನಿಯೋಜನೆ ಮಾಡಲಾಗಿದೆ.
ಪ್ರತಿ ಕಾಲೇಜಿನ ಪ್ರಾಂಶುಪಾಲರಿಂದ ಜಿಲ್ಲಾಡಳಿತ ಮಾಹಿತಿ ಪಡೆದುಕೊಂಡಿದ್ದು, ಕೋರ್ಟ್ನ ಮಧ್ಯಂತರ ಆದೇಶ ಪಾಲಿಸುವಂತೆ ಸೂಚನೆ ನೀಡಲಾಗಿದೆ. ವಿದ್ಯಾರ್ಥಿಗಳ ಚಲನವಲನಗಳನ್ನು ಪೋಲಿಸ್ ಇಲಾಖೆ ಗಮನಿಸುತ್ತಿದೆ. ಹಳಿಯಾಳ, ಭಟ್ಕಳ, ಬನವಾಸಿ ಸೂಕ್ಷ್ಮ ಪ್ರದೇಶಗಳಲ್ಲಿ ಹೆಚ್ಚಿನ ನಿಗಾ ವಹಿಸಲಾಗಿದೆ.
ಹಿಜಾಬ್ ಕೇಸರಿ ಶಾಲು ವಿವಾದ ಹಿನ್ನಲೆ ಕೊಪ್ಪಳ ಜಿಲ್ಲೆಯಲ್ಲಿ 144 ಸೆಕ್ಷನ್ ಜಾರಿ ಮಾಡಲಾಗಿದೆ. ಇಂದಿನಿಂದ 20ರವರೆಗೂ 144 ಸೆಕ್ಷನ್ ಜಾರಿಗೊಳಿಸಲಾಗಿದೆ. ಈ ಬಗ್ಗೆ ಕೊಪ್ಪಳ ಜಿಲ್ಲಾಧಿಕಾರಿ ವಿಕಾಸ್ ಕಿಶೋರ್ ಆದೇಶ ನೀಡಿದ್ದಾರೆ. ಇಂದು ರಾತ್ರಿ ಇಂದಿನಿಂದಲೇ ಜಿಲ್ಲೆಯಾದ್ಯಂತ 144 ಸೆಕ್ಷನ್ ಜಾರಿ ಆಗಲಿದೆ. ಐದಕ್ಕಿಂತ ಹೆಚ್ಚು ಜನರು ಸೇರದಂತೆ ಸೂಚನೆ ಕೊಡಲಾಗಿದೆ.












Click it and Unblock the Notifications