ರಾಮನಗರದಲ್ಲಿ ಪರಸ್ಪರ ಆರೋಪಕ್ಕಿಳಿದ ಜೋಡೆತ್ತುಗಳು
ರಾಮನಗರ, ಡಿ.7: ಹಿಂದಿನ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರದಲ್ಲಿನ ಜೋಡೆತ್ತುಗಳು ಈಗ ಬೇರೆ ಬೇರೆಯಾಗಿ ವಿಧಾನ ಪರಿಷತ್ ಚುನಾವಣಾ ಪ್ರಚಾರದಲ್ಲಿ ಪರಸ್ಪರ ಅರೋಪ ಪ್ರತ್ಯಾರೋಪಗಳಲ್ಲಿ ತೊಡಗಿಸಿಕೊಂಡಿದ್ದಾರೆ.
ಕಳೆದ ಮಂಡ್ಯ ಲೋಕಸಭಾ ಚುನಾವಣಾ ಪ್ರಚಾರ ಸಂದರ್ಭದಲ್ಲಿ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಮತ್ತು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಜೋಡೆತ್ತುಗಳು ಎಂದು ಕರೆದುಕೊಂಡಿದ್ದರು. ಆದರೆ, ಈಗಿನ ಚುನಾವಣೆಯಲ್ಲಿ ಜೋಡೆತ್ತುಗಳು ಪರಸ್ಪರ ಟೀಕಾಪ್ರಹಾರದಲ್ಲಿ ನಿರತರಾಗಿರುವುದು ಕಂಡುಬರುತ್ತಿದೆ.
ಬೆಂಗಳೂರು ಗ್ರಾಮಾಂತರ ವಿಧಾನ ಪರಿಷತ್ ಚುನಾವಣಾ ಪ್ರಚಾರದಲ್ಲಿ ಜೆಡಿಎಸ್ ಅಭ್ಯರ್ಥಿ ರಮೇಶ್ ಗೌಡ ಪರ ಪ್ರಚಾರ ಸಭೆಯಲ್ಲಿ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ, ಕಾಂಗ್ರೆಸ್ ವಿರುದ್ಧ ಟೀಕೆಗಳ ಸುರಿಮಳೆ ಸುರಿಸುದರು.

"ಕಾಂಗ್ರೆಸ್ ನಾಯಕರಿಗೆ ಕುಟುಂಬ ರಾಜಕಾರಣದ ಬಗ್ಗೆ ಮಾತನಾಡುವ ನೈತಿಕತೆ ಇಲ್ಲ. ಕಾಂಗ್ರೆಸ್ ಪಕ್ಷದಲ್ಲೂ ಕುಟುಂಬ ರಾಜಕಾರಣವಿದೆ. ಅಲ್ಲೂ ಸಾಕಷ್ಟು ಮಂದಿ ಅಧಿಕಾರಕ್ಕಾಗಿ ಹಾತೊರೆಯುತ್ತಿರುವುದು ಕಂಡುಬರುತ್ತಿದೆ. ಹೀಗಿರುವಾಗ ಯಾವ ನೈತಿಕತೆ ಇಟ್ಟುಕೊಂಡು ಕುಟುಂಬ ರಾಜಕಾರಣದ ಬಗ್ಗೆ ಮಾತನಾಡುತ್ತಾರೆ'' ಎಂದು ಕುಮಾರಸ್ವಾಮಿ ಪ್ರಶ್ನಿಸಿದರು.
ಈಗಾಗಲೇ ಜಿಲ್ಲೆಯಲ್ಲಿ ಹಲವು ಬಾರಿ ಚುನಾವಣಾ ಪ್ರಚಾರ ಮಾಡಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಜೆಡಿಎಸ್ ವಿರುದ್ಧ ಟೀಕೆಯ ಸುರಿಮಳೆಗೈದಿದ್ದಾರೆ.

ಇಡೀ ಕುಟುಂಬವೇ ರಾಜಕೀಯದಲ್ಲಿದೆ
ಎಚ್ಡಿಕೆ ಟೀಕೆಗೆ ಪ್ರತಿಕ್ರಿಯೆ ನೀಡಿದ ಬೆಂಗಳೂರು ಗ್ರಾಮಾಂತರ ಲೋಕಸಭಾ ಸದಸ್ಯ ಡಿ.ಕೆ.ಸುರೇಶ್, 'ಎಲ್ಲಾ ಪಕ್ಷದಲ್ಲಿ 2-3 ಜನ ಕುಟುಂಬದವರು ಇರುತ್ತಾರೆ. ಅದರೆ ಜೆಡಿಎಸ್ ಪಕ್ಷದಲ್ಲಿ ಇಡೀ ಕುಟುಂಬವೇ ರಾಜಕಾರಣದಲ್ಲಿದೆ. ಎಲ್ಲರೂ ಒಂದೊಂದು ಪೋಸ್ಟ್ ಹಂಚಿಕೊಂಡಿದ್ದಾರೆ' ಎಂದು ತಿರುಗೇಟು ನೀಡಿದರು.
ಜೆಡಿಎಸ್ ಕುಟುಂಬ ರಾಜಕಾರಣದ ಇದೆ ಎಂದು ನಾವು ಹೇಳುತ್ತಿಲ್ಲ. ಅವರ ಪಕ್ಷದ ಮುಖಂಡರೆ ಇದನ್ನ ಹೇಳುತ್ತಿದ್ದಾರೆ. ನಾವು ಅದನ್ನ ನಾವು ಜನರಿಗೆ ಮನವರಿಕೆ ಮಾಡುತ್ತಿದ್ದೇವೆ ಅಷ್ಟೆ ಎಂದು ಸಂಸದ ಡಿ.ಕೆ.ಸುರೇಶ್ ಹೇಳಿದರು.
ಮೇಕೆದಾಟು ಹೋರಾಟಕ್ಕೆ ದಿನಾಂಕ ನಿಗದಿಯಾಗಿಲ್ಲ :
ಕಾಂಗ್ರೆಸ್ ನೇತೃತ್ವದಲ್ಲಿ ಮೇಕೆದಾಟು ಸ್ಥಳದಿಂದ ಬೆಂಗಳೂರು ಪಾದಯಾತ್ರೆ ಬಗ್ಗೆ ಮಾತನಾಡಿದ ಸಂಸದ ಡಿ.ಕೆ.ಸುರೇಶ್ ಮೇಕೆದಾಟು ಹೋರಾಟಕ್ಕೆ ದಿನಾಂಕ ನಿಗದಿ ಮಾಡಿಲ್ಲ. ವಿಧಾನ ಪರಿಷತ್ ಚುನಾವಣೆ ನಂತರ ದಿನಾಂಕ ಮತ್ತು ಹೋರಾಟದ ರೂಪುರೇಷೆ ಮಾಡಲಾಗುವುದು.

ಚುನಾವಣೆ ಮುಗಿದ ಮೇಲೆ ಪಕ್ಷದ ಅಧ್ಯಕ್ಷರು ಮತ್ತು ಕಾಂಗ್ರೆಸ್ ಶಾಸಕಾಂಗ ಪಕ್ಷದ ಅಧ್ಯಕ್ಷರು ಕುಳಿತು ಚರ್ಚಿಸಿ ಮೇಕೆದಾಟು ಪಾದಯಾತ್ರೆಗೆ ದಿನಾಂಕ ನಿಗದಿ ಮಾಡುತ್ತಾರೆ. ಮೇಕೆದಾಟು ಅಣೆಕಟ್ಟು ಅನುಷ್ಠಾನಕ್ಕೆ ಒತ್ತಾಯಿಸಿ ವಿವಿಧ ಸಂಘಟನೆಗಳೊಂದಿಗೆ ಬೆಂಗಳೂರಿನವರೆಗೆ ಪಾದಯಾತ್ರೆ ಮಾಡುವ ಮೂಲಕ ರಾಜ್ಯ ಮತ್ತು ಕೇಂದ್ರ ಸರ್ಕಾರವನ್ನು ಒತ್ತಾಯಿಸುತ್ತೇವೆ ಎಂದರು.
ಮೇಕೆದಾಟು ಯೋಜನೆಗೆ ಯಾವುದೇ ತಡೆಯಿಲ್ಲ:
ಮೇಕೆದಾಟು ಅಣೆಕಟ್ಟು ಯೋಜನೆಗೆ ಯಾವುದೇ ತಡೆಯಿಲ್ಲ. ಕೇಂದ್ರದಲ್ಲೂ ಬಿಜೆಪಿ ನೇತೃತ್ವದ ಸರ್ಕಾರ ಇದೆ. ರಾಜ್ಯದಲ್ಲೂ ಬಿಜೆಪಿ ನೇತೃತ್ವದ ಸರ್ಕಾರ ಇದೆ. ಹೀಗಾಗಿ ರಾಜ್ಯ ಸರ್ಕಾರ ಕೇಂದ್ರಕ್ಕೆ ಒತ್ತಡ ತಂದು ಯೋಜನೆಯನ್ನು ಅನುಷ್ಠಾನ ಗೊಳಿಸಬೇಕು. ಅದರೆ ರಾಜ್ಯ ಸರ್ಕಾರ ತನ್ನ ಬದ್ಧತೆಯನ್ನು ಪ್ರದರ್ಶನ ಮಾಡುತ್ತಿಲ್ಲ ಎಂದು ಸಂಸದ ಡಿ.ಕೆ.ಸುರೇಶ್ ಆರೋಪಿಸಿದರು.
ಮೇಕೆದಾಟು ಅಣೆಕಟ್ಟು ಯೋಜನೆಯಿಂದ ಕೇವಲ ಕುಡಿಯಲಷ್ಟೇ ನೀರನ್ನು ಬಳಸಿಕೊಳ್ಳಲಾಗುತ್ತೆ ಹಾಗೂ ವಿದ್ಯುತ್ ಉತ್ಪಾದನೆಗಷ್ಟೇ ಯೋಜನೆ ಅನುಕೂಲ. ಇದರಿಂದ ವ್ಯವಸಾಯಕ್ಕೆ ನೀರು ಬಳಸುವುದಿಲ್ಲ. ವ್ಯರ್ಥವಾಗಿ ಸಮುದ್ರಕ್ಕೆ ಹರಿದು ಹೋಗುವ ನೀರನ್ನು ಶೇಕರಣೆ ಮಾಡಲು ಅಣೆಕಟ್ಟೆಯ ಅವಶ್ಯಕತೆ ಇದೆ ಎಂದು ಹೇಳಿದರು.
ತಮಿಳುನಾಡಿಗೆ ಕಳೆದ ತಿಂಗಳು 30 ಟಿಎಂಸಿ ಹಾಗೂ ಈ ತಿಂಗಳು 10 ಟಿಎಂಸಿ ನೀರು ವ್ಯರ್ಥವಾಗಿ ಹರಿದಿದೆ. ಮೇಕೆದಾಟು ಅಣೆಕಟ್ಟು ಯೋಜನೆ ಅನುಷ್ಠಾನವಾದರೆ ಅಂರ್ತಜಲ ಹೆಚ್ವುವುದಲ್ಲದೇ ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳ ಕುಡಿಯುವ ನೀರಿನ ಬವಣೆಗೆ ಶಾಶ್ವತ ಪರಿಹಾರ ಸಿಗಲಿದೆ ಎಂದು ಸಂಸದ ಡಿ.ಕೆ.ಸುರೇಶ್ ತಿಳಿಸಿದರು.











Click it and Unblock the Notifications