ನೀರಾವರಿ ಯೋಜನೆ ಜಾರಿಗೆ ಒತ್ತಾಯಿಸಿ ಬೃಹತ್ ಪ್ರತಿಭಟನೆ
ರಾಮನಗರ, ಡಿಸೆಂಬರ್ 21 : ಮೇಕೆದಾಟು ಮತ್ತು ಕಳಸಾ ಬಂಡೂರಿ ಯೋಜನೆಯ ವಿಚಾರದಲ್ಲಿ ಸರ್ಕಾರ ಮತ್ತು ವಿರೋಧ ಪಕ್ಷ ನಿಷ್ಕ್ರಿಯವಾಗಿದೆ ಎಂದು ಆರೋಪಿಸಿ ಬೃಹತ್ ಪ್ರತಿಭಟನೆ ನಡೆಯಿತು.
ಗುರುವಾರ ರಾಮನಗರದ ಐಜೂರು ವೃತ್ತದಲ್ಲಿ ಕಸ್ತೂರಿ ಕರ್ನಾಟಕ ಜನಪರ ವೇದಿಕೆಯ ಕಾರ್ಯಕರ್ತರು ಜಿಲ್ಲಾಧ್ಯಕ್ಷ ಬೆವೂರು ಯೋಗೇಶ್ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು.
ಮೇಕೆದಾಟು ಯೋಜನೆಯನ್ನು ಶೀಘ್ರವಾಗಿ ಜಾರಿಗೆ ತರುತ್ತೇವೆ ಎಂದು ಹೇಳಿದ್ದ ಸರ್ಕಾರ ನಾಲ್ಕೂವರೆ ವರ್ಷ ಕಳೆದರೂ ಆ ಯೋಜನೆಯನ್ನು ಕೇವಲ ನಕ್ಷೆಯಲ್ಲಿ ಮಾತ್ರ ಉಳಿಯುವಂತೆ ಮಾಡಿದೆ ಎಂದು ಆರೋಪಿಸಿದರು.

ನೀರಾವರಿ ಯೋಜನೆಯನ್ನು ಜಾರಿಗೆ ತರುವಲ್ಲಿ ಶ್ರಮ ವಹಿಸಿದರೆ ರಾಜ್ಯದ ಜನರಿಗೆ ಅನುಕೂಲವಾಗುತ್ತದೆ. ಇಲ್ಲವಾದಲ್ಲಿ ಮುಂದಿನ ಚುನಾವಣೆಯಲ್ಲಿ ಜನರೇ ತಕ್ಕ ಪಾಠ ಕಲಿಸುತ್ತಾರೆ ಎಂದು ಪ್ರತಿಭಟನಾಕಾರರು ಎಚ್ಚರಿಕೆ ನೀಡಿದರು.
ಕಾವೇರಿ ಮೇಲುಸ್ತುವಾರಿ ಸಮಿತಿಯನ್ನು ರಚಿಸಬೇಕೆಂದು ಹೊರಟಿರುವ ಕೇಂದ್ರ ಸರ್ಕಾರವನ್ನು ನಿಲುವನ್ನು ವಿರೋಧಿಸಿ ದೆಹಲಿಯ ಜಂತರ್ ಮಂತರ್ ಮುಂದೆ ಲಕ್ಷಾಂತರ ಜನರನ್ನು ಸೇರಿಸಿ ಸಮಿತಿ ರಚನೆಯಾಗದಂತೆ ಹೋರಾಟ ಮಾಡಬೇಕು ಎಂದು ಹೇಳಿದರು.
ರೈತರು ತಮ್ಮ ಜೀವದ ಹಂಗನ್ನು ತೊರೆದು ಲಾಠಿ ಏಟಿಗೂ ಹೆದರದೆ ನೀರಾವರಿ ವಿಚಾರದಲ್ಲಿ ಹೋರಾಟ ಮಾಡಿಕೊಂಡು ಬಂದಿದ್ದರೂ ಇದುವರೆಗೂ ಈ ಯೋಜನೆಗಳು ಜಾರಿಗೆ ಬರಲಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.
ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಕಳಸಾ ಬಂಡೂರಿ ಮತ್ತು ಮಹಾದಾಯಿ ಯೋಜನೆಯ ಸಮಸ್ಯೆಗಳನ್ನು ಪರಿಹರಿಸದಿದ್ದರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಬಿಜೆಪಿ ನಾಯಕ ಬಿ.ಎಸ್.ಯಡಿಯೂರಪ್ಪನವರ ಮನೆಗೆ ಮುತ್ತಿಗೆ ಹಾಕಲಾಗುತ್ತದೆ ಎಂದು ಎಚ್ಚರಿಸಿದರು.












Click it and Unblock the Notifications