ರಾಮನಗರದಲ್ಲಿ ಗ್ರಾಮಸ್ಥರ ನಿದ್ದೆಗೆಡಿಸಿದ್ದ ಚಿರತೆ ಸೆರೆ
ರಾಮನಗರ, ಜೂನ್ 10: ಕೆಲ ದಿನಗಳಿಂದ ಗ್ರಾಮಸ್ಥರ ನಿದ್ದೆಗೆಡಿಸಿದ್ದ ಚಿರತೆಯೊಂದು ಅರಣ್ಯ ಇಲಾಖೆ ಇರಿಸಿದ್ದ ಬೋನಿಗೆ ಸೆರೆಯಾಗಿರುವ ಘಟನೆ ತಾಲ್ಲೂಕಿ ಲಕ್ಕೋಜನಹಳ್ಳಿಯಲ್ಲಿ ನಡೆದಿದೆ.
ತಾಲೂಕಿನ ಕೈಲಾಂಚ ಹೋಬಳಿಯ ಲಕ್ಕೋಜನಹಳ್ಳಿ ಗ್ರಾಮದಲ್ಲಿ ಬೆಳಗಿನ ಜಾವ ನಾಲ್ಕು ಗಂಟೆ ಸಮಯದಲ್ಲಿ ಸುಮಾರು ಆರು ತಿಂಗಳ ಹೆಣ್ಣು ಚಿರತೆ ಬೋನಿನಲ್ಲಿ ಬಂಧಿಯಾಗಿದೆ. ಚಿರತೆ ಸೆರೆಯಿಂದಾಗಿ ಗ್ರಾಮಸ್ಥರು ನಿಟ್ಟುಸಿರುಬಿಟ್ಟಿದ್ದಾರೆ. ಕೆಲ ದಿನಗಳಿಂದ ಗ್ರಾಮದ ಪಕ್ಕದ ಕಲ್ಲುಬಂಡೆ ಮೇಲೆ, ಹಾಗೇ ಗ್ರಾಮದಲ್ಲೂ ಚಿರತೆ ಕಾಣಿಸಿಕೊಂಡು ಜನರಲ್ಲಿ ಭೀತಿ ಉಂಟುಮಾಡಿತ್ತು.
ಗುಂಡ್ಲುಪೇಟೆಯಲ್ಲಿ ಮನೆಯೊಳಗೇ ಅಡಗಿ ಕುಳಿತಿದ್ದ ಚಿರತೆ!
ಗ್ರಾಮಸ್ಥರು ಚಿರತೆ ಸೆರೆಹಿಡಯುವಂತೆ ಅರಣ್ಯ ಇಲಾಖೆ ಅಧಿಕಾರಿಗಳಿಗೆ ಆಗ್ರಹಿಸಿದ್ದರು. ಗ್ರಾಮಸ್ಥರ ಮನವಿ ಮೇರೆಗೆ ಎರಡು ದಿನಗಳ ಹಿಂದಷ್ಟೇ ಅರಣ್ಯ ಇಲಾಖೆ ಗ್ರಾಮದ ಸಮೀಪ ಬೋನು ಅಳವಡಿಸಿತ್ತು. ಕಳೆದ ರಾತ್ರಿ ಆಹಾರ ಅರಸಿ ಬಂದ ಬೋನಿಗೆ ಬಿದ್ದಿದೆ. ಸ್ಥಳಕ್ಕೆ ಅರಣ್ಯಾಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿ ಚಿರತೆಯ ಆರೋಗ್ಯ ತಪಾಸಣೆ ನಡೆಸಿ ನಂತರ ಕಾಡಿಗೆ ಬಿಡಲಾಗುವುದು ಎಂದು ತಿಳಿಸಿದರು.