ಚನ್ನಪಟ್ಟಣದ ಮುಸ್ಲಿಂ ಬಡಾವಣೆಗಳಲ್ಲಿ ಬಿಜೆಪಿಗೆ ಪ್ರವೇಶವಿಲ್ಲ
Recommended Video
ರಾಮನಗರ, ಏಪ್ರಿಲ್. 25 : ಚನ್ನಪಟ್ಟಣ ನಗರದ ಇಂದಿರಾ ಕಾಟೇಜ್ ಬಡಾವಣೆಯ ಮನೆಗಳು, ರಸ್ತೆ ಬದಿಯ ಗೋಡೆಗಳ ಮೇಲೆ ಬಿಜೆಪಿ ಅಭ್ಯರ್ಥಿ ಹಾಗೂ ಕಾರ್ಯಕರ್ತರಿಗೆ ಪ್ರವೇಶವಿಲ್ಲ ಎಂಬ ಪೋಸ್ಟರ್ ಗಳು ರಾರಾಜಿಸುತ್ತಿದ್ದು, ಸ್ಥಳೀಯ ಶಾಸಕ ಸಿ.ಪಿ.ಯೋಗೇಶ್ವರ್ ಹಲವಾರು ವರ್ಷಗಳಿಂದ ನಗರವನ್ನು ಅಭಿವೃದ್ಧಿಪಡಿಸಿಲ್ಲ ಎಂದು ಸ್ಥಳೀಯ ನಿವಾಸಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಬಡಾವಣೆಯ ತುಂಬೆಲ್ಲ ಇಂಗ್ಲೀಷ್ ಹಾಗೂ ಉರ್ದು ಭಾಷೆಯಲ್ಲಿ ಪೋಸ್ಟರ್ ಗಳನ್ನು ಅಂಟಿಸುವ ಮೂಲಕ ಪ್ರತಿಭಟನೆ ವ್ಯಕ್ತಪಡಿಸಿರುವ ನಿವಾಸಿಗಳು ಕೇವಲ ಚುನಾವಣೆಯ ಸಮಯದಲ್ಲಿ ಮಾತ್ರ ಮುಸ್ಲಿಮರ ಮತಕ್ಕಾಗಿ ಬಡಾವಣೆಗೆ ಬರುವ ಯೋಗೇಶ್ವರ್ ಚುನಾವಣೆ ಬಳಿಕ ಅಲ್ಪಸಂಖ್ಯಾತರನ್ನು ಮರೆಯುತ್ತಾರೆ. ಇನ್ನು ಐದು ವರ್ಷ ಇತ್ತ ತಲೆ ಹಾಕುವುದಿಲ್ಲ ಎಂದು ಆರೋಪಿಸಿದರು.
ಬಂಟ್ವಾಳ: 'ಇದು ಹಿಂದೂಗಳ ಮನೆ, ಕಾಂಗ್ರೆಸ್ಸಿಗರಿಗೆ ಪ್ರವೇಶವಿಲ್ಲ' ಪೋಸ್ಟರ್
ತಮ್ಮನ್ನು ತಾವು ನೀರಾವರಿ ಹರಿಕಾರ ಎಂದು ಕೊಚ್ಚಿ ಕೊಳ್ಳುತ್ತಾರೆ. ಅದು ನಿಜ. ನಮ್ಮ ಬಡಾವಣೆಯ ಮೋರಿಗಳು ಕೊಳಚೆ ನೀರಿನಿಂದ ತುಂಬಿ ತುಳುಕುತ್ತಿವೆ. ಬಹುತೇಕ ಬಡವರು ಮತ್ತು ಕೂಲಿ ಕಾರ್ಮಿಕರು ಇರುವ ಬಡಾವಣೆಯಲ್ಲಿ ಸಾಂಕ್ರಾಮಿಕ ರೋಗಗಳ ಭೀತಿಯಲ್ಲಿ ಜೀವನ ನಡೆಸುವಂತ ಸ್ಥಿತಿ ನಿರ್ಮಾಣವಾಗಿದೆ ಎಂದು ಬೇಸರವ್ಯಕ್ತಪಡಿಸಿದರು.
ಸ್ಥಳೀಯ ಶಾಸಕರು ಕಳೆದ 19 ವರ್ಷಗಳಿಂದ ನಮ್ಮ ಬಡಾವಣೆ ಅಭಿವೃದ್ಧಿಪಡಿಸಿಲ್ಲ. ಹೀಗಾಗಿ ನಾವು ಈ ರೀತಿ ನಾಮಫಲಕಗಳನ್ನು ಅಂಟಿಸುವ ಮೂಲಕ ಆಕ್ರೋಶ ವ್ಯಕ್ತಪಡಿಸುತ್ತಿದ್ದೇವೆ. ಅಲ್ಲದೇ ಈ ಬಾರಿ ಚುನಾವಣೆಯಲ್ಲಿ ಅವರಿಗೆ ಮತ ನೀಡುವುದಿಲ್ಲ ಎಂದರು.
2013ರ ವಿಧಾನಸಭಾ ಚುನಾವಣೆಯಲ್ಲಿ ಯೋಗೇಶ್ವರ್ ಅವರು ಅನಿತಾ ಕುಮಾರಸ್ವಾಮಿ ವಿರುದ್ಧ 6,464 ಮತಗಳ ಅಂತರಿಂದ ಗೆದ್ದಿದ್ದರು. ಸಮಾಜವಾದಿ ಪಕ್ಷದಿಂದ ಸ್ಪರ್ಧಿಸಿದ್ದ ಯೋಗೇಶ್ವರ್ ಅವರಿಗೆ 80,099 ಮತಗಳು ಬಿದ್ದಿದ್ದರೆ, ಅನಿತಾ ಕುಮಾರಸ್ವಾಮಿ ಅವರಿಗೆ 73,635 ಮತಗಳು ಬಿದ್ದಿತ್ತು. ಕಾಂಗ್ರೆಸ್ಸಿನಿಂದ ಸ್ಪರ್ಧಿಸಿದ್ದ ಸದತ್ ಅಲಿ ಖಾನ್ ಅವರಿಗೆ 8,134 ಮತಗಳು ಸಿಕ್ಕಿತ್ತು. 2014ರ ಲೋಕಸಭಾ ಚುನಾವಣೆ ವೇಳೆ ಯೋಗೇಶ್ವರ್ ಕಾಂಗ್ರೆಸ್ ಸೇರ್ಪಡೆಯಾಗಿದ್ದರು. ನಂತರ ಪಕ್ಷದ ವರಿಷ್ಠರ ನಿರ್ಧಾರದಿಂದ ಬೇಸತ್ತು ಕಾಂಗ್ರೆಸ್ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದರು. ಇದೀಗ 2018 ರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದಾರೆ.