ಟೊಯೊಟಾ ಕಂಪನಿ ಕಾರ್ಮಿಕರ ಧರಣಿ: ಸರ್ಕಾರದ ಮಧ್ಯ ಪ್ರವೇಶ
ರಾಮನಗರ, ನವೆಂಬರ್ 17: ಕಾರ್ಮಿಕರನ್ನು ಕಂಪನಿಯ ಆಡಳಿತ ಮಂಡಳಿ ಪ್ರಾಣಿಗಳಂತೆ ನಡೆಸಿಕೊಳ್ಳುತ್ತಿದೆ ಎಂದು ಆರೋಪಿಸಿ ಬಿಡದಿಯ ಟೊಯೊಟಾ ಕಿರ್ಲೋಸ್ಕರ್ ಕಂಪನಿಯ ಕಾರ್ಮಿಕರು ನಡೆಸುತ್ತಿರುವ ಅಹೋರಾತ್ರಿ ಧರಣಿ ಒಂಬತ್ತನೇ ದಿನಕ್ಕೆ ಕಾಲಿಟ್ಟಿದ್ದು, ಇತ್ತ ಕಂಪನಿಯ ಆಡಳಿತ ಮಂಡಳಿ ಕಾರ್ಖಾನೆಯನ್ನು ಲಾಕೌಟ್ ಮಾಡಿ, 40 ಮಂದಿ ನೌಕರರನ್ನು ಅಮಾನತುಗೊಳಿಸಿದೆ.
ಕಂಪನಿ ಮತ್ತು ಕಾರ್ಮಿಕರ ನಡುವಿನ ಬಿಕ್ಕಟ್ಟು ಉಲ್ಬಣಗೊಂಡ ಹಿನ್ನೆಲೆಯಲ್ಲಿ ಇದೀಗ ಸರ್ಕಾರ ರಂಗ ಪ್ರವೇಶ ಮಾಡಿದೆ. ಮಂಗಳವಾರ ವಿಕಾಸ ಸೌಧದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಹಾಗೂ ಡಿಸಿಎಂ ನೇತೃತ್ವದಲ್ಲಿ ಕಂಪನಿಯ ಆಡಳಿತ ಮಂಡಳಿ ಮತ್ತು ಕಾರ್ಮಿಕರ ನಡುವೆ ಸಂಧಾನ ಸಭೆ ಹಮ್ಮಿಕೊಂಡಿರುವುದಾಗಿ ಕಾರ್ಮಿಕ ಸಚಿವ ಶಿವರಾಮ ಹೆಬ್ಬಾರ್ ತಿಳಿಸಿದ್ದಾರೆ.
ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಮಾಹಿತಿ ಹಂಚಿಕೊಂಡಿರುವ ಶಿವರಾಮ್ ಹೆಬ್ಬಾರ್, ಕಾರ್ಖಾನೆಯ ಆಡಳಿತ ಮಂಡಳಿ ಮತ್ತು ಕಂಪನಿಯ ನೌಕರರ ನಡುವೆ ಉಂಟಾಗಿರುವ ಸಮಸ್ಯೆಯನ್ನು ಬಗೆಹರಿಸಲು ಮಂಗಳವಾರ ಬೆಳಿಗ್ಗೆ 10 ಗಂಟೆಗೆ ರಾಮನಗರ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಉಪ ಮುಖ್ಯಮಂತ್ರಿ ಡಾ.ಅಶ್ವಥ್ ನಾರಾಯಣ್ ನೇತೃತ್ವದಲ್ಲಿ ವಿಕಾಸಸೌಧದ ಕಚೇರಿಯಲ್ಲಿ ಸಂಧಾನ ಸಭೆ ಕರೆಯಲಾಗಿದೆ ಎಂದು ತಿಳಿಸಿದ್ದಾರೆ.

ವಾಹನ ತಯಾರಿಕಾ ಕ್ಷೇತ್ರದಲ್ಲಿ ಪ್ರತಿಷ್ಠಿತ ಟೊಯೊಟಾ ಕಿರ್ಲೋಸ್ಕರ್ ಕಂಪನಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಸುಮಾರು 4000 ಮಂದಿ ಕಾರ್ಮಿಕರಿಗೆ ನ್ಯಾಯ ಒದಗಿಸುವುದು ಮತ್ತು ಆಡಳಿತ ಮಂಡಳಿಗೂ ಅನ್ಯಾಯವಾಗದ ರೀತಿಯಲ್ಲಿ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಲು ಸರ್ಕಾರ ಮುಂದಾಗಿದೆ ಎಂದು ಶಿವರಾಮ್ ಹೆಬ್ಬಾರ್ ಸ್ಪಷ್ಟಪಡಿಸಿದ್ದಾರೆ.

ಕಾರ್ಖಾನೆಯು ಕಾರ್ಮಿಕ ವಿರೋಧಿ ನೀತಿಯನ್ನು ಅನುಸರಿಸುತ್ತಿದೆ ಎಂದು ಆರೋಪಿಸಿ ಬಿಡದಿಯ ಕಾರು ತಯಾರಿಕಾ ಸಂಸ್ಥೆ ಟೊಯೊಟಾ ಕಂಪನಿ ನೌಕರರು ನವೆಂಬರ್ 10ರಿಂದಲೂ ಅಹೋರಾತ್ರಿ ಧರಣಿಗಿಳಿದಿದ್ದಾರೆ. ಕಾರ್ಖಾನೆಯ ಆಡಳಿತ ಮಂಡಳಿ ಕಾರ್ಮಿಕರನ್ನು ಶೋಷಿಸುತ್ತಿದೆ ಎಂದು ಆರೋಪಿಸಿ ಕಂಪನಿಯ ಸುಮಾರು 3500 ಕಾರ್ಮಿಕರು ಅಹೋರಾತ್ರಿ ಧರಣಿ ನಡೆಸುತ್ತಿದ್ದಾರೆ.












Click it and Unblock the Notifications