2ನೇ ದಿನದ ಮೇಕೆದಾಟು ಪಾದಯಾತ್ರೆ: ಹಲವು ಮಠಾಧೀಶರು ಭಾಗಿ; ಕೆಂಗೇರಿಯಲ್ಲಿ ವಾಸ್ತವ್ಯ
ರಾಮನಗರ, ಫೆಬ್ರವರಿ 28: ಮೇಕೆದಾಟು ಅಣೆಕಟ್ಟು ಯೋಜನೆ ಜಾರಿಗೆ ಆಗ್ರಹಿಸಿ ಕಾಂಗ್ರೆಸ್ ಪಕ್ಷದ ನೇತೃತ್ವದಲ್ಲಿ ನಡೆಯುತ್ತಿರುವ ಪಾದಯಾತ್ರೆ ಎರಡನೇ ದಿನಕ್ಕೆ ಕಾಲಿಟ್ಟಿದ್ದು, ಸೋಮವಾರ ಬೆಳಗ್ಗೆ ಬಿಡದಿಯಿಂದ ಹೊರಟ ಪಾದಯಾತ್ರೆ ಸುಮಾರು 15 ಕಿ.ಮೀ ಸಾಗಿ ಕೆಂಗೇರಿಯಲ್ಲಿ ಇಂದು ವಾಸ್ತವ್ಯ ಹೂಡಲಿದೆ.
ಎರಡನೇ ದಿನದ ಮೇಕೆದಾಟು ಪಾದಯಾತ್ರೆ ಆರಂಭಿಸುವ ಮುನ್ನ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ಆದಿ ಚುಂಚನಗಿರಿ ಶ್ರೀ ಬಾಲಗಂಗಾಧರನಾಥ ಸ್ವಾಮೀಜಿ ಅವರ ಜನ್ಮಸ್ಥಳ ಬಾನಂದೂರಿನಲ್ಲಿ ಆಂಜನೇಯಸ್ವಾಮಿ ಹಾಗೂ ಬಸವನಗುಡಿಯಲ್ಲಿ ಪೂಜೆ ಸಲ್ಲಿಸಿದರು. ರಾಮನಗರ ಶಾಖಾಮಠದ ಶ್ರೀ ಅನ್ನದಾನಿ ಸ್ವಾಮೀಜಿ ಆಶೀರ್ವದಿಸಿದರು.
ಇಂದಿನ ಮೇಕೆದಾಟು ಪಾದಯಾತ್ರೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಮಾಜಿ ಡಿಸಿಎಂ ಡಾ.ಜಿ. ಪರಮೇಶ್ವರ್, ಕಾಂಗ್ರೆಸ್ ಕಾರ್ಯಾಧ್ಯಕ್ಷ ಸಲೀಂ ಅಹ್ಮದ್, ಮಾಗಡಿ ಕಾಂಗ್ರೆಸ್ ಮುಖಂಡ ಎಚ್.ಸಿ. ಬಾಲಕೃಷ್ಣ, ವೆಂಕಟರಮಣಪ್ಪ, ಧ್ರುವನಾರಾಯಣ್ ಮತ್ತಿತರರು ಭಾಗವಹಿಸಿದ್ದರು.

ಪಾದಯಾತ್ರೆಯಲ್ಲಿ ಹೆಜ್ಜೆ ಹಾಕಿದ ಹಲವು ಮಠಾಧೀಶರು
ಮೇಕೆದಾಟು ಪಾದಯಾತ್ರೆಯು ಯಶಸ್ವಿಯಾಗಲಿ ಎಂದು ಚಿತ್ರದುರ್ಗದ ಮುರುಘಾ ಮಠದ ಶಿವಮೂರ್ತಿ ಶಿವಾಚಾರ್ಯ ಮುರುಘಾ ಶರಣ ಸ್ವಾಮೀಜಿಗಳು ಭಾಗವಹಿಸಿ, ಹಾರೈಸಿದರು.
ಬಿಡದಿಯಿಂದ ಹೊರಟ ಪಾದಯಾತ್ರೆಗೆ ಕೇತುಗಾನಹಳ್ಳಿ ಬಳಿ ಚಿತ್ರದುರ್ಗದ ಶ್ರೀ ಮುರುಘಾ ಸ್ವಾಮೀಜಿ, ಮಾದಾರ ಚನ್ನಯ್ಯ ಸ್ವಾಮೀಜಿ, ಮಡಿವಾಳ ಶ್ರೀಗಳು, ಗಂಗಾವತಿ ಶ್ರೀಗಳು, ಹಾವೇರಿ ಶ್ರೀಗಳು, ಹರಿಹರ ಶ್ರೀಗಳು ಸೇರಿದಂತೆ ಹಲವು ಮಠಾಧೀಶರು ಮೇಕೆದಾಟು ಪಾದಯಾತ್ರೆಯಲ್ಲಿ ಹೆಜ್ಜೆ ಹಾಕಿದರು. ಕುಡಿಯುವ ನೀರಿಗಾಗಿ ಹಮ್ಮಿಕೊಂಡಿರುವ ಹೋರಾಟ ಯಶಸ್ವಿಯಾಗಲಿ ಎಂದು ಹಾರೈಸಿದರು.
ಪಾದಯಾತ್ರೆಯಲ್ಲಿ ಪಾಲ್ಗೊಂಡ ಸ್ವಾಮೀಜಿಗಳ ಕಾಲಿಗೆ ನಮಿಸಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ಕುಡಿಯುವ ನೀರಿಗಾಗಿ ಸ್ವಾಮೀಜಿಗಳು ನಮ್ಮ ಕಾರ್ಯಕರ್ತರು ಹಾಗೂ ನಾಯಕರ ಜತೆ ಹೆಜ್ಜೆ ಹಾಕುತ್ತಿದ್ದಾರೆ. ಈ ಮೂಲಕ ಮೇಕೆದಾಟು ಪಾದಯಾತ್ರೆ ಐತಿಹಾಸಿಕ ಪಾದಯಾತ್ರೆಯಾಗಿದೆ ಎಂದು ಬಣ್ಣಿಸಿದರು.
ಮೇಕೆದಾಟು ಪಾದಯಾತ್ರೆಗೆ ಮುರುಘಾ ಮಠದ ಶ್ರೀಗಳ ನೇತೃತ್ವದಲ್ಲಿ ಹಲವು ಮಠಾಧೀಶರು ಪಾಲ್ಗೊಂಡಿರುವುದು ರಾಜ್ಯದ ಇತಿಹಾಸ ಪುಟಕ್ಕೆ ಸೇರಲಿದೆ. ಎಲ್ಲ ಧರ್ಮ ಪೀಠಗಳನ್ನು ಸ್ಥಾಪಿಸಿದ ಏಕೈಕ ಶ್ರೀಗಳು ಎಂದರೆ ಅದು ನಮ್ಮ ಮುರುಘಾ ಮಠದ ಶ್ರೀಗಳು. ಇದು ನಮ್ಮ ಹೋರಾಟವಲ್ಲ, ನಿಮ್ಮ ಹೋರಾಟ. ಈ ಹೋರಾಟಕ್ಕೆ ಶ್ರೀಗಳನ್ನು ನಾನು ಸ್ವಾಗತ ಮಾಡುತ್ತೇನೆ ಎಂದರು.

ಮೇಕೆದಾಟು ಯೊಜನೆ ಆಗಲೇಬೇಕು; ಮುರುಘಾಮಠ ಸ್ವಾಮೀಜಿ ಆಗ್ರಹ
ರಾಜ್ಯದಲ್ಲಿ ವಿವಿಧ ನೀರಾವರಿ ಹೋರಾಟಗಳು ನಡೆಯುತ್ತಿವೆ. ಇಲ್ಲಿ ಮೇಕೆದಾಟು ಯೋಜನೆ, ಉತ್ತರ ಕರ್ನಾಟಕದಲ್ಲಿ ಮಹಾದಾಯಿ ಯೋಜನೆಗಾಗಿ ಹೋರಾಟ ನಡೆಯುತ್ತಿವೆ. ನೀರಿಗಾಗಿ ಹೋರಾಟ ಮಾಡಬೇಕಾಗಿರುವುದು ಈ ಕಾಲಘಟ್ಟದ ಅನಿವಾರ್ಯ. ನೀರು ನಮ್ಮ ಹಕ್ಕು. ಆ ದಿಸೆಯಲ್ಲಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ಯಶಸ್ವಿ ಹೋರಾಟ ನಡೆಯುತ್ತಿದೆ. ಇಲ್ಲಿ ನಾವು ಅವರ ಶಕ್ತಿ, ಯುಕ್ತಿ ಹಾಗೂ ಭಕ್ತಿಯನ್ನು ನೋಡಬಹುದು. ನಮಗೂ ಈ ಹೋರಾಟದಲ್ಲಿ ಭಾಗವಹಿಸಬೇಕು ಎಂಬ ಅಪೇಕ್ಷೆಯಿಂದ ಪಾಲ್ಗೊಂಡಿದ್ದೇವೆ ಎಂದು ಹೇಳಿದರು.
ಸ್ವಾಮಿಗಳಾಗಿ ನಮ್ಮ ಮೊದಲ ಕರ್ತವ್ಯ ಎಂದರೆ ಸಮಾಜದಲ್ಲಿ ಸಾಮರಸ್ಯ ಹಾಗೂ ಶಾಂತಿ ಕಾಪಾಡುವುದು. ನೊಂದವರಿಗೆ ಸಾಂತ್ವನ ಹೇಳುವುದು, ಸತ್ಕಾರ್ಯಕ್ಕೆ ಬೆಂಬಲ ನೀಡುವುದು. ಇಲ್ಲಿ ಸತ್ಕಾರ್ಯ ನಡೆಯುತ್ತಿದೆ. ಅದು ಮೇಕೆದಾಟು ಯೋಜನೆ ಆಗಲೇಬೇಕು ಎಂಬ ಹೋರಾಟ. ಇದಕ್ಕೆ ನಾವುಗಳು ಬೆಂಬಲ ನೀಡುತ್ತಿದ್ದೇವೆ ಎಂದು ತಿಳಿಸಿದರು.
ನಮಗೆ ಯಾವುದೇ ಪ್ರಾದೇಶಿಕ ಭಾವನೆ ಇಲ್ಲ. ಈ ಭಾಗದ ಜನರ ಹಿತಕ್ಕೆ ಮೇಕೆದಾಟು ಯೋಜನೆ ಆಗಲಿ ಎಂದು ಆಗ್ರಹಿಸಿ, ನಿಮ್ಮ ಹೋರಾಟಕ್ಕೆ ಜಯ ಸಿಗಲಿ ಎಂದು ಹಾರೈಸುತ್ತೇವೆ. ಹವಾನಿಯಂತ್ರಿತ ಕೊಠಡಿಯಲ್ಲಿ ನೆಮ್ಮದಿಯಾಗಿ ಕಾಲ ಕಳೆಯಬಹುದಾಗಿದ್ದರೂ, ಜನರ ಹಿತಕ್ಕಾಗಿ ಉರಿ ಬಿಸಿಲಿನಲ್ಲಿ ಶಿವಕುಮಾರ್ ಪಾದಯಾತ್ರೆ ಮಾಡುತ್ತಿದ್ದಾರೆ. ಅವರ ಈ ಹೋರಾಟ ರಾಜ್ಯದಲ್ಲಿ ಹೊಸ ಸಂಚಲನ ಮೂಡಿಸಿದೆ. ಅವರ ಈ ಹೋರಾಟಕ್ಕೆ ನಮ್ಮ ಸಂಪೂರ್ಣ ಸಹಕಾರ ಇದೆ ಎಂದು ಮುರುಘಾ ಶ್ರೀಗಳು ನುಡಿದರು.












Click it and Unblock the Notifications