ರಾಮನಗರ ಸರ್ಕಾರಿ ಇಂಜಿನಿಯರಿಂಗ್ ಕಾಲೇಜು ನಿರ್ಮಾಣಕ್ಕೆ 6 ತಿಂಗಳ ಗಡುವು ನೀಡಿದ ಸಚಿವ
ರಾಮನಗರ, ಜನವರಿ 19: ರಾಮನಗರದಲ್ಲಿ 73 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣವಾಗುತ್ತಿರುವ ಸರಕಾರಿ ಇಂಜಿನಿಯರಿಂಗ್ ಕಾಲೇಜು ಕಟ್ಟಡದ ಬಾಕಿ ಕಾಮಗಾರಿಯನ್ನು ಜೂನ್ ವೇಳೆಗೆ ಸಂಪೂರ್ಣ ಮುಗಿಸಬೇಕು ಎಂದು ಜಿಲ್ಲೆಯ ಉಸ್ತುವಾರಿ ಸಚಿವರೂ ಆಗಿರುವ ಉನ್ನತ ಶಿಕ್ಷಣ ಸಚಿವ ಡಾ. ಸಿ.ಎನ್. ಅಶ್ವಥ್ ನಾರಾಯಣ ಅಧಿಕಾರಿಗಳಿಗೆ ಸೂಚಿಸಿದರು.
ಈ ಸಂಬಂಧ ಜಿಲ್ಲಾ ಉಸ್ತುವಾರಿ ಸಚಿವ ಅಧ್ಯಕ್ಷತೆಯಲ್ಲಿ ಬುಧವಾರದಂದು ವಿಕಾಸಸೌಧದಲ್ಲಿ ನಡೆದ ಸಭೆಯಲ್ಲಿ ಸರ್ಕಾರಿ ಇಂಜಿನಿಯರಿಂಗ್ ಕಾಲೇಜು ಕಾಮಗಾರಿ ಬಗ್ಗೆ ಕೂಲಂಕಷವಾಗಿ ಚರ್ಚಿಸಿದ ಸಚಿವ ಡಾ.ಸಿ.ಎನ್. ಅಶ್ವಥ್ ನಾರಾಯಣ, ಇಂಜಿನಿಯರಿಂಗ್ ಕಾಲೇಜಿನ ಕಾಮಗಾರಿಯನ್ನು 6 ತಿಂಗಳ ಒಳಗೆ ಸಂಪೂರ್ಣವಾಗಿ ಮುಗಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಬೆಂಗಳೂರು- ಮೈಸೂರು ಹೆದ್ದಾರಿಯ ಪಕ್ಕದಲ್ಲೇ ಇರುವ ಜಾನಪದ ಲೋಕದ ಬಳಿ ನಿರ್ಮಾಣವಾಗುತ್ತಿರುವ ಸರ್ಕಾರಿ ಇಂಜಿನಿಯರಿಂಗ್ ಕಾಲೇಜು ಕ್ಯಾಂಪಸ್ ಅನ್ನು ಅತ್ಯಾಧುನಿಕ ರೀತಿಯಲ್ಲಿ ಅಭಿವೃದ್ಧಿಪಡಿಸಲಾಗುತ್ತಿದೆ, ಕ್ಯಾಂಪಸ್ನಲ್ಲಿ ವಿದ್ಯಾರ್ಥಿಗಳಿಗೆ ಅಗತ್ಯವಾದ ಸುಸಜ್ಜಿತ ಹಾಸ್ಟೆಲ್, ಪ್ರಯೋಗಾಲಯ, ತರಗತಿಗಳು, ಗ್ರಂಥಾಲಯ, ನೀರು ಮತ್ತು ಒಳಚರಂಡಿ ಸೌಲಭ್ಯಗಳು, ವಾಕ್ ಪಥಗಳು ಇತ್ಯಾದಿಗಳೆಲ್ಲ ಕಡ್ಡಾಯವಾಗಿ ಇರಬೇಕು ಎಂದು ತಿಳಿಸಿದರು.
ಕ್ಯಾಂಪಸ್ ಆಕರ್ಷಕವಾಗಿದ್ದು, ಅತ್ಯಂತ ಸುಸಜ್ಜಿತವಾಗಿ ಹೈಟೆಕ್ ದರ್ಜೆಯ ಕ್ಯಾಂಪಸ್ ಆಗಿ ತಲೆ ಎತ್ತಬೇಕು. 2022-23ನೇ ಶೈಕ್ಷಣಿಕ ಸಾಲಿನ ತರಗತಿಗಳು ಹೊಸ ಕ್ಯಾಂಪಸ್ನಲ್ಲೇ ನಡೆಯುವಂತಾಗಬೇಕು ಎಂದು ಅಧಿಕಾರಿಗಳಿಗೆ ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವಥ್ ನಾರಾಯಣ ನಿರ್ದೇಶನ ಮಾಡಿದರು.
ಇಂಜಿನಿಯರಿಂಗ್ ಕಾಲೇಜಿನಲ್ಲಿ ರಾಮನಗರ ಮತ್ತು ಸುತ್ತಮುತ್ತಲಿನ ಗ್ರಾಮೀಣ ವಿದ್ಯಾರ್ಥಿಗಳು ಕಡಿಮೆ ವೆಚ್ಚದಲ್ಲಿ ವೃತ್ತಿ ಶಿಕ್ಷಣ ಪಡೆಯಲು ಅನುಕೂಲವಾಗಲಿದೆ. ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಜಾಗತಿಕ ಗುಣಮಟ್ಟದ ಬೋಧನೆ ಇದ್ದು, ಸ್ಥಳೀಯ ಸಮುದಾಯಕ್ಕೆ ಇದರ ಲಾಭ ದೊರಕುವಂತಾಗಬೇಕು ಎಂದು ಸಚಿವರು ಹೇಳಿದ್ದಾರೆ.
ಸಭೆಯಲ್ಲಿ ಕಾಲೇಜು ಮತ್ತು ತಾಂತ್ರಿಕ ಶಿಕ್ಷಣ ಇಲಾಖೆ ಆಯುಕ್ತ ಪಿ.ಪ್ರದೀಪ್, ರಾಮನಗರ ಜಿಲ್ಲೆಯ ಲೋಕೋಪಯೋಗಿ ಇಲಾಖೆ ಕಾರ್ಯನಿರ್ವಾಹಕ ಎಂಜಿನಿಯರ್ ವಿಜಯ್ ಗೋಪಾಲ್ ಮತ್ತಿತರ ಅಧಿಕಾರಿಗಳು ಇದ್ದರು.