ಗೋಹತ್ಯೆ ನಿಷೇಧ ಕಾಯ್ದೆ: ರೈತರಿಗೆ ಸಿಹಿ ಸುದ್ದಿ ನೀಡಿದ ಪಶುಸಂಗೋಪನೆ ಸಚಿವ
ರಾಮನಗರ, ಫೆಬ್ರವರಿ 15: ರೈತರು ಗಂಡುಕರುಗಳನ್ನು ಮೂರು ತಿಂಗಳು ಪೋಷಿಸಿ ನಂತರ ಗೋಶಾಲೆಗಳಿಗೆ ಬಿಡಿ ಎಂದ ಪಶುಸಂಗೋಪನೆ ಸಚಿವ ಪ್ರಭು ಚವ್ಹಾಣ್ ಕರೆ ನೀಡಿದರು. ರಾಮನಗರ ಜಿಲ್ಲಾಧಿಕಾರಿ ಕಚೇರಿಯಲಿ ಇಂದು ಪಶುಸಂಗೋಪನೆ ಇಲಾಖೆಯ ಪ್ರಗತಿ ಪರಿಶೀಲನೆ ನಡೆಸಿ ಮಾತನಾಡಿದರು.
ರಾಮನಗರ ಜಿಲ್ಲೆಯಲ್ಲಿ ಗಂಡುಕರುಗಳನ್ನು ರೈತರು ಹಾಗೆ ಸಂತೆ ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಬಿಡುತ್ತಿರುವುದು ಗಮನಕ್ಕೆ ಬಂದಿದೆ. ಇಲಾಖೆಯ ಅಧಿಕಾರಿಗಳು ರೈತರೊಂದಿಗೆ ಸಮಾಲೋಚನೆ ನಡೆಸಿ ಕನಿಷ್ಠ ಮೂರು ತಿಂಗಳುಗಳವರೆಗೆ ಗಂಡು ಕರುಗಳನ್ನು ಸಾಕಿ ಗೋಶಾಲೆಗಳಿಗೆ ಬಿಡುವಂತೆ ಜಾಗೃತಿ ಮೂಡಿಸಿ ಎಂದು ಸಚಿವರು ಅಧಿಕಾರಿಗಳಿಗೆ ಸೂಚಿಸಿದರು.
ಜಿಲ್ಲೆಯಲ್ಲಿ ಅಕ್ರಮ ಗೋವುಗಳ ಸಾಗಣೆ ಮತ್ತು ವಧೆ ಬಗ್ಗೆ ಪೊಲೀಸ್ ಇಲಾಖೆ ಸಹಾಯದಿಂದ ಎಚ್ಚರವಹಿಸಿ ಎಂದು ಜಿಲ್ಲಾಡಳಿತ ತಿಳಿಸಿದರು. ಗೋಹತ್ಯೆ ನಿಷೇಧ ಕಾಯ್ದೆ ರಾಜ್ಯದಲ್ಲಿ ಜಾರಿಯಾದ ನಂತರ ಪಶುಸಂಗೋಪನೆ ಇಲಾಖೆಯ ಜವಾಬ್ದಾರಿ ಹೆಚ್ಚಾಗಿದೆ ಎಂದು ಪಶುಸಂಗೋಪನೆ ಸಚಿವ ಪ್ರಭು ಚವ್ಹಾಣ್ ಅವರು ಅಧಿಕಾರಿಗಳಿಗೆ ಹೇಳಿದರು.

ಸುಮಾರು 1,45,095 ಕುಟುಂಬಗಳು ಜಾನುವಾರು ಸಾಕಾಣಿಕೆಯಲ್ಲಿ ತೊಡಗಿಸಿಕೊಂಡಿದ್ದಾರೆ ಹಾಗೂ ಜಿಲ್ಲೆಯಲ್ಲಿ 6,13,337 ಪಶುಸಂಪತ್ತು ಇರುವುದು ಸಂತಸದ ಸಂಗತಿ. ಹಾಗೆಯೇ ಜಿಲ್ಲೆಯಲ್ಲಿ ಕೃತಕ ಗರ್ಭಧಾರಣೆ ಕಾರ್ಯಕ್ರಮ ಶೇ.68 ರಷ್ಟು ಪ್ರಗತಿ ಹೊಂದಿರುವುದು ಸಂತಸದ ವಿಚಾರ. ಆದರೆ ಪಶುಸಂಗೋಪನಾ ಇಲಾಖೆಯ ಎಲ್ಲ ಕಾರ್ಯಕ್ರಮಗಳು ರೈತರಿಗೆ ಮುಟ್ಟಬೇಕು ಮತ್ತು ಶೇ.100 ರಷ್ಟು ಪ್ರಗತಿ ಕಾಣಬೇಕು ಎಂದು ಸಚಿವರು ಅಧಿಕಾರಿಗಳಿಗೆ ಸಚಿವರು ತಿಳಿಸಿದರು.
ಇಲಾಖೆಯ ಸಮಗ್ರವಾದ ಪ್ರಗತಿ ಪರಿಶೀಲನೆ ನಡೆಸಿ ಹಕ್ಕಿಜ್ವರದ ಪ್ರಕರಣ, ಕಾಲು-ಬಾಯಿರೋಗ ನಿಯಂತ್ರಣ, ಕೃತಕ ಗರ್ಭಧಾರಣೆ, ಲಂಪಿಸ್ಕಿನ್, ಮೇವಿನ ಲಭ್ಯತೆ, ಕಿಸಾನ್ ಸಂಪರ್ಕ, ಜಾನುವಾರುಗಳಿಗೆ ಆರೋಗ್ಯ ಶಿಬಿರ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆದರು. ಜಾನುವಾರುಗಳು ಹಾಗೂ ರೈತರ ಸಮಸ್ಯೆಗಳಿಗೆ ಸಕಾಲದಲ್ಲಿ ಸ್ಪಂದಿಸಿ ಎಂದು ಅಧಿಕಾರಿಗಳಿಗೆ ಹೇಳಿದರು.
ಸರ್ಕಾರದಿಂದ ಜಾನುವಾರುಗಳ ಆರೋಗ್ಯಕ್ಕಾಗಿ ಸಮರ್ಪಕವಾದ ಔಷಧಿಗಳನ್ನು ನೀಡಲಾಗುತ್ತಿದೆ. ಯಾವುದೇ ಕಾರಣಕ್ಕೂ ರೈತರಿಗೆ ಔಷಧಿಗಳನ್ನು ಹೊರಗಡೆಯಿಂದ ಖರೀದಿಸುವಂತೆ ತಿಳಿಸಬೇಡಿ. ಹೊರಗಡೆಯಿಂದ ಔಷದಿ ಖರೀದಿಸುವ ಬಗ್ಗೆ ಕಂಡು ಬಂದಲ್ಲಿ ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವ ಪ್ರಭು ಚವ್ಹಾಣ್ ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದರು.
ಸಭೆಯ ನಂತರ ಪತ್ರಿಕಾಗೋಷ್ಠಿ ನಡೆಸಿದ ಪಶು ಸಂಗೋಪನೆ ಸಚಿವರು, ಮಾಧ್ಯಮ ಪ್ರತಿನಿದಿಗಳೊಂದಿಗೆ ಮಾತನಾಡಿ, ಪ್ರಾಣಿ ಹಿಂಸೆ ತಡೆಯುವ ಕಾನೂನುಗಳನ್ನು ಬಿಗಿಗೊಳಿಸಲು ಕ್ರಮವಹಿಸಿ, ರಾಜ್ಯದಲ್ಲಿ ಮೊಟ್ಟ ಮೊದಲ ಬಾರಿ ಕರ್ನಾಟಕ ಪ್ರಾಣಿಕಲ್ಯಾಣ ಮಂಡಳಿಯನ್ನು ಸ್ಥಾಪನೆ ಮಾಡಲಾಗಿದೆ. ಪ್ರಾಣಿಕಲ್ಯಾಣಕ್ಕೆ ಸಂಬಂಧಿಸಿದ ವಿಷಯಗಳಲ್ಲಿ ತೆಗೆದುಕೊಳ್ಳಬೇಕಾದ ಕ್ರಮಗಳ ಬಗ್ಗೆ ಸರ್ಕಾರಕ್ಕೆ ಕಾಲಕಾಲಕ್ಕೆ ಸಲಹೆ ನೀಡಲಿದೆ ಎಂದರು.
ರಾಜ್ಯದ 15 ಜಿಲ್ಲೆಗಳಿಗೆ ಸುಸಜ್ಜಿತವಾದ ಸಂಚಾರಿ ಆಂಬುಲೆನ್ಸ್ ಪಶು ಸಂಜೀವಿನಿ ವಾಹನ ನೀಡಲಾಗಿದೆ. ಮುಂದಿನ ದಿನಗಳಲ್ಲಿ ರಾಮನಗರ ಜಿಲ್ಲೆಗೂ ಸಹ ನೀಡಲಾಗುವುದು. ತುರ್ತು ಸಮಯದಲ್ಲಿ ರೈತರಿಗೆ ಇದರಿಂದ ತುಂಬಾ ಅನುಕೂಲವಾಗಲಿದೆ ಎಂದರು.
ಸಭೆಯಲ್ಲಿ ಜಿಲ್ಲಾಧಿಕಾರಿ ಎಂ.ಎಸ್ ಅರ್ಚನಾ, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಇಕ್ರಂ, ಪಶುಸಂಗೋಪನೆ ಇಲಾಖೆಯ ಉಪ ನಿರ್ದೇಶಕರು ಡಾ.ಸಿದ್ದರಾಮಾಯ್ಯ, ಡಿವೈಎಸ್ಪಿ ಮೋಹನ್ ಕುಮಾರ್ ಹಾಗೂ ಇನ್ನಿತರ ಅಧಿಕಾರಿಗಳು ಹಾಜರಿದ್ದರು.












Click it and Unblock the Notifications