ರಾಜಕೀಯದಲ್ಲಿ ಶಾಶ್ವತ ಮಿತ್ರರೂ ಇಲ್ಲ, ಶತ್ರುಗಳೂ ಇಲ್ಲ: ಶಾಸಕಿ ಅನಿತಾ ಕುಮಾರಸ್ವಾಮಿ
ರಾಮನಗರ, ನವೆಂಬರ್ 18: ರಾಜಕೀಯದಲ್ಲಿ ಯಾರೂ ಶಾಶ್ವತ ಮಿತ್ರರೂ ಇಲ್ಲ, ಶತ್ರುಗಳು ಇಲ್ಲ ಎಂದು ರಾಮನಗರ ಶಾಸಕಿ ಅನಿತಾ ಕುಮಾರಸ್ವಾಮಿ ಅಭಿಪ್ರಾಯಪಟ್ಟರು. ಅವರು ಕ್ಷೇತ್ರದಲ್ಲಿ ಹಮ್ಮಿಕೊಂಡಿದ್ದ ಹಲವು ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿ ಮಾತನಾಡಿದರು.
ಎಚ್.ಡಿ ಕುಮಾರಸ್ವಾಮಿ ಹಾಗೂ ಡಿ.ಕೆ ಶಿವಕುಮಾರ್ ಸಂಬಂಧ ಅಳಸಿದೆ. ಇತ್ತೀಚೆಗೆ ಯಡಿಯೂರಪ್ಪ ಮತ್ತು ಎಚ್ಡಿಕೆ ದೋಸ್ತಿಗಳಾಗಿದ್ದಾರೆ ಎಂಬ ಮಾಧ್ಯಮಗಳ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದ ಶಾಸಕಿ ಅನಿತಾ ಕುಮಾರಸ್ವಾಮಿ, ಯಾವುದೇ ಶತ್ರುತ್ವ, ಮಿತ್ರುತ್ವ ಇಲ್ಲ. ಡಿಕೆಶಿಯವರು ಒಂದು ಪಕ್ಷದ ಅಧ್ಯಕ್ಷರಾಗಿದ್ದು, ಅವರು ಅವರ ಪಕ್ಷ ಸಂಘಟನೆ ಮಾಡುತ್ತಿದ್ದಾರೆ ಅಷ್ಟೇ ಇದರಲ್ಲಿ ಯಾವುದೇ ಶತ್ರುತ್ವ ಇಲ್ಲ ಎಂದು ಸ್ಪಷ್ಟಪಡಿಸಿದರು.
ಇನ್ನು ಕ್ಷೇತ್ರದ ಅಭಿವೃದ್ಧಿ ದೃಷ್ಟಿಯಿಂದ ನಮ್ಮ ಪಕ್ಷದ ಶಾಸಕರೊಂದಿಗೆ ಎಚ್.ಡಿ.ಕುಮಾರಸ್ವಾಮಿಯವರು ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಭೇಟಿ ಮಾಡಿದ್ದಾರೆ. ಮೊನ್ನೆ ಶಾಸಕರಾದ ಪುಟ್ಟರಾಜು ಅವರೊಂದಿಗೆ ಸಿಎಂ ಅವರನ್ನು ಭೇಟಿ ಮಾಡಿ ಕ್ಷೇತ್ರದ ಯೋಜನೆಗಳ ಅನುಷ್ಠಾನಕ್ಕೆ ಮನವಿ ಮಾಡಿದ್ದಾರೆ ಅಷ್ಟೇ ಎಂದು ಸಮಾಜಾಯಿಸಿ ನೀಡಿದರು.

ಕೋವಿಡ್-19 ಬಂದ ನಂತರ ಸಮಸ್ಯೆಗಳನ್ನು ಹೇಳಿಕೊಳ್ಳಲು ಶಾಸಕರು ಸಂಪರ್ಕಕ್ಕೆ ಸಿಗುತ್ತಿಲ್ಲ ಎಂಬ ಆರೋಪಗಳಿಗೆ ಅನಿತಾ ಕುಮಾರಸ್ವಾಮಿ ಪ್ರತಿಕ್ರಿಯೆ ನೀಡಿ, ನಾನು ಸೈನಸ್ ಸಮಸ್ಯೆಯಿಂದ ಬಳಲುತ್ತಿದ್ದೇನೆ. ವೈದ್ಯರು ವಿಶ್ರಾಂತಿ ಪಡೆಯಲು ಸೂಚನೆ ಕೊಟ್ಟ ಹಿನ್ನೆಲೆಯಲ್ಲಿ ಕ್ಷೇತ್ರಕ್ಕೆ ಬರಲು ಸಾಧ್ಯವಾಗಿಲ್ಲ ಎಂದು ಹೇಳಿ ಜಾರಿಕೊಂಡರು.

ರಾಮನಗರ ಕ್ಷೇತ್ರವನ್ನು ಪುತ್ರ ನಿಖಿಲ್ ಕುಮಾರಸ್ವಾಮಿಗೆ ಬಿಟ್ಟು ಕೊಡುತ್ತಾರೆ ಎಂಬ ಪ್ರಶ್ನೆಗೆ ಉತ್ತರಿಸಿದ ಶಾಸಕಿ ಅನಿತಾ ಕುಮಾರಸ್ವಾಮಿ, ನಿಖಿಲ್ ಕುಮಾರಸ್ವಾಮಿ ಜೆಡಿಎಸ್ ಪಕ್ಷದ ಯುವ ಜನತಾ ದಳದ ಅಧ್ಯಕ್ಷ. ರಾಮನಗರ ಜಿಲ್ಲೆ ನಮ್ಮ ಕುಟುಂಬಕ್ಕೆ ರಾಜಕೀಯ ಕರ್ಮಭೂಮಿ. ಇಲ್ಲಿನ ಜನ ನಮ್ಮ ಕುಟುಂಬದವರನ್ನು ಹೆಚ್ಚು ಪ್ರೀತಿ ಮಾಡುತ್ತಾರೆ. ಅದಕ್ಕಾಗಿ ಇಲ್ಲಿಂದಲೇ ಪಕ್ಷ ಸಂಘಟನೆ ಮಾಡಲು ಮುಂದಾಗಿದ್ದಾರೆ. ಆದ್ದರಿಂದ ಹೆಚ್ಚಿನ ಗಮನ ರಾಮನಗರಕ್ಕೆ ಕೊಡುತ್ತಾರೆ ಎಂದರು.












Click it and Unblock the Notifications