ಎನ್ಐಎ ದಾಳಿಯ ಸತ್ಯಾಂಶವನ್ನು ಜನರ ಮುಂದೆ ಇಡಿ: ರಾಮನಗರದಲ್ಲಿ ಎಚ್ಡಿಕೆ ಆಗ್ರಹ
ರಾಮನಗರ, ಸೆಪ್ಟೆಂಬರ್, 28: ಪಿಎಫ್ಐ ವಿರುದ್ಧ ದಾಖಲೆಗಳಿದ್ದರೆ ಜನರ ಮುಂದೆ ಇಡಬೇಕು ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಸರ್ಕಾರವನ್ನು ಒತ್ತಾಯ ಮಾಡಿದರು. ರಾಮನಗರದಲ್ಲಿ ಮಾತನಾಡಿದ ಅವರು, ಪಿಎಫ್ಐ ಸಂಘಟನೆ ವಿಚಾರವಾಗಿ ಈಗಾಗಲೇ ನಾನು ಕ್ರಮ ಕೈಗೊಳ್ಳುವಂತೆ ಹೇಳಿದ್ದೇನೆ. ಯಾವುದೇ ಸಂಘಟನೆಗಳು ಸಮಾಜಘಾತುಕ ಚಟುವಟಿಕೆಯಲ್ಲಿ ತೊಡಗಿದರೆ ಕಠಿಣ ಕ್ರಮ ಆಗಬೇಕು. ಎನ್ಐಎ ದಾಳಿಯ ಸತ್ಯಾಂಶಗಳನ್ನು ಜನತೆ ಮುಂದೆ ಇಡಬೇಕು ಎಂದರು.
ಯಾವ ಯಾವ ಸಂಘಟನೆಗಳಿಂದ ದೇಶ ದ್ರೋಹದ ಕೆಲಸ ಆಗಿದೆ? ಯಾವ ರೀತಿ ಗಲಭೆ ಸೃಷ್ಟಿಗೆ ಪ್ರೋತ್ಸಾಹ ಕೊಡುತ್ತಿದ್ದಾರೆ ಎನ್ನುವ ಮಾಹಿತಿಯನ್ನು ಜನತೆ ಮುಂದೆ ಇಡಬೇಕು. ಇದು ಕೇಂದ್ರ ಸರ್ಕಾರದ ಕರ್ತವ್ಯವಾಗಿದೆ. ಪಿಎಫ್ಐ ಸಂಘಟನೆ ನಿಷೇಧ ಮಾಡಿದ ತಕ್ಷಣ ಸಂಪೂರ್ಣ ಶಾಂತಿ ನೆಲಸುತ್ತದೆ ಎಂದು ಹೇಳಲು ಸಾಧ್ಯವಿಲ್ಲ. ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಸೌಹಾರ್ದತೆ ಬೆಳೆಸುವ ಕೆಲಸವನ್ನು ಸರ್ಕಾರ ಮಾಡಬೇಕು. ಯಾವುದೇ ಒಂದು ಸಂಘಟನೆ ನಿಷೇಧ ಮಾಡಿದರೆ ಶಾಂತಿ ನೆಲೆಸಲ್ಲ ಎಂದರು.
ಬಿಎಂಎಸ್ ಟ್ರಸ್ಟ್ ವಿಚಾರದಲ್ಲಿ ಸಚಿವರ ಭ್ರಷ್ಟಾಚಾರ ಸಂಬಂಧ ಸದನದ ಮುಂದೆ ಎಲ್ಲಾ ದಾಖಲೆಗಳನ್ನು ಇಟ್ಟಿದ್ದೇನೆ. ಈ ಪ್ರಕರಣವನ್ನು ತನಿಖೆಗೆ ವಹಿಸದೇ ಬಿಜೆಪಿ ಸರ್ಕಾರ ಭಂಡತನ ಪ್ರದರ್ಶಿಸುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ದಾರೆ.

ಬಿಜೆಪಿಗೆ ಎಚ್ಡಿಕೆ ಪ್ರಶ್ನೆಗಳ ಸರಮಾಲೆ
ಚನ್ನಪಟ್ಟಣ ತಾಲೂಕಿನ ಕನ್ನಮಂಗಲ ಗ್ರಾಮದಲ್ಲಿ ಮಾತನಾಡಿದ ಅವರು, ಮುಖ್ಯಮಂತ್ರಿಗಳ ಸಮೇತ, ಒಬ್ಬ ಮಂತ್ರಿ ಕೂಡ ಮಾತನಾಡಲಿಲ್ಲ. ದಾಖಲೆ ನೀಡಿದರೆ ಒಬ್ಬರು ಮಾತನಾಡಲಿಲ್ಲ. ಅವರಿಗೆ ನೈತಿಕತೆ ಇಲ್ಲ, ಎಲ್ಲರೂ ತಲೆ ತಗ್ಗಿಸಿಕೊಂಡು ಕೂತಿದ್ದರು. ಪಗಡೆ ಆಟದಲ್ಲಿ ದ್ರೌಪದಿಯನ್ನು ಪಣಕ್ಕೆ ಇಟ್ಟು ಧರ್ಮರಾಯ ಸೋತ ಸಂದರ್ಭದಲ್ಲಿ ಭೀಷ್ಮ, ದ್ರೋಣಾಚಾರ್ಯ ಸೇರಿದಂತೆ ಎಲ್ಲರೂ ಮೂಕವಿಸ್ಮಿತವಾಗಿ ಕೂತಿದ್ದರಲ್ಲ, ಅದೇ ಪರಿಸ್ಥಿತಿ ನಾನು ಅವತ್ತು ದಾಖಲೆ ಬಿಡುಗಡೆ ಮಾಡಿದ್ದಾಗ ಸದನದಲ್ಲಿ ಸೃಷ್ಟಿ ಆಗಿತ್ತು ಎಂದು ಕುಟುಕಿದರು.

'ನಾನು ಯಾವುದಕ್ಕೂ ಹೆದರುವುದಿಲ್ಲ'
ನಾನು ಯಾವುದಕ್ಕೂ ಹೆದರುವುದಿಲ್ಲ. ಸದನದಲ್ಲಿ ಮುಖ್ಯಮಂತ್ರಿಗಳಿಂದ ಏನಾದರೂ ಉತ್ತರ ಬಂತಾ? ಬಿಎಂಎಸ್ ಟ್ರಸ್ಟ್ ಪಬ್ಲಿಕ್ ಪ್ರಾಪರ್ಟಿ. ಖಾಸಗಿ ವ್ಯಕ್ತಿಗೆ ಸರ್ಕಾರದ ಆಸ್ತಿ ಹೋಗುತ್ತಿದೆ. ಸದನದಲ್ಲಿ ದಾಖಲೆ ಸಮೇತ ಇಟ್ಟಿದ್ದಕ್ಕೆ ಇವರ ಬಳಿ ಉತ್ತರ ಇಲ್ಲ. ಬಿಎಂಎಸ್ ಟ್ರಸ್ಟ್ ಹಗರಣ ವಿಚಾರವಾಗಿ ಸದನದಲ್ಲಿ ಸಮರ್ಥವಾಗಿ ಉತ್ತರ ಕೊಟ್ಟಿದ್ದೇನೆ ಎನ್ನುವ ಅಶ್ವತ್ಥ್ ನಾರಾಯಣ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ಈ ಸರ್ಕಾರ ಭಂಡತನದಿಂದ ವರ್ತಿಸುತ್ತಿದೆ. ಇಂತಹವರಿಗೆ ಏನು ಹೇಳಲು ಸಾಧ್ಯವಿಲ್ಲ.

ಅಶ್ವತ್ಥ್ ನಾರಾಯಣ ಬೆಂಬಲಕ್ಕೆ ನಿಲ್ಲಲಿಲ್ಲ ಏಕೆ?
ಸದನದಲ್ಲಿ ಮುಖ್ಯಮಂತ್ರಿಯವರ ಹಾದಿಯಾಗಿ ಎಲ್ಲರೂ ಮೌನಕ್ಕೆ ಶರಣಾಗಿದ್ದು ಯಾಕೆ?, ಯಾರು ಸಹ ಅಶ್ವತ್ಥ್ ನಾರಾಯಣ ಅವರ ಬೆಂಬಲಕ್ಕೆ ನಿಲ್ಲಲಿಲ್ಲ ಏಕೆ? ಕೋಟ್ಯಂತರ ರೂಪಾಯಿ ಹಣ ಲೂಟಿ ಮಾಡಿದ್ದಾರೆ. ಮುಂದೆ ಜನ ಇವರಿಗೆ ಬುದ್ಧಿ ಕಲಿಸುತ್ತಾರೆ. ಬಿಎಂಎಸ್ ಟ್ರಸ್ಟ್ ವಿಚಾರವನ್ನು ಅಷ್ಟು ಸುಲಭವಾಗಿ ನಾನು ಬಿಡುವುದಿಲ್ಲ. ಕಾನೂನಾತ್ಮಕ ಕ್ರಮ ತೆಗೆದುಕೊಳ್ಳುವಂತೆ ಮಾಡುತ್ತೇನೆ. ಪ್ರಧಾನ ಮಂತ್ರಿಗಳು ಭ್ರಷ್ಟಾಚಾರ ನಿಲ್ಲಿಸುತ್ತೇನೆ ಎಂದು ಹೇಳುತ್ತಾರೆ. ಈಗ ದಾಖಲೆ ಸಮೇತ ಕಳುಹಿಸುತ್ತೇನೆ. ಏನು ಉತ್ತರ ಕೊಡುತ್ತಾರೆಯೋ ನೋಡೋಣ ಎಂದರು.

ಜನರ ಸಮಸ್ಯೆಗಳ ವಿರುದ್ಧ ಹೋರಾಡಿ
ಇನ್ನು ಕಾಂಗ್ರೆಸ್ ಭಾರತ್ ಜೋಡೋ ಯಾತ್ರೆ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ಭಾರತ ಯಾವಾಗ ಒಡೆದು ಹೋಗಿದೆ ಅನ್ನುವುದು ನನಗೆ ಗೊತ್ತಿಲ್ಲ. 'ಭಾರತ್ ಜೋಡೋ' ಮುಖಾಂತರ ದೇಶವನ್ನು ಒಗ್ಗೂಡಿಸುತ್ತೇವೆ ಎಂದು ಕಾಂಗ್ರೆಸ್ ನಾಯಕರು ಹೊರಟಿದ್ದಾರೆ. ಯಾವಾಗ ದೇಶ ಛಿದ್ರ ಆಗಿದೆಯೆಂದು ನನಗೆ ಗೊತ್ತಿಲ್ಲ. ಛಿದ್ರ ಆಗಿದ್ದರೆ ಕಾರ್ಯಕ್ರಮದ ಮುಖಾಂತರ ಅದನ್ನು ಹೇಗೆ ಸರಿಪಡಿಸುತ್ತಾರೆ ಎನ್ನುವುದನ್ನು ಜನರ ಮುಂದೆ ಇಡಬೇಕು. ರಾಜ್ಯದಲ್ಲಿ ಹಲವಾರು ಸಮಸ್ಯೆಗಳಿವೆ. ಸಮಸ್ಯೆಗಳ ವಿರುದ್ಧ ನಾವು ಹೋರಾಡಬೇಕು. ಕಾಂಗ್ರೆಸ್ನವರು 'ಭಾರತ್ ಜೋಡೋ,' ಪೇ ಸಿಎಂ ಮುಖಾಂತರ ಜನರ ಸಮಸ್ಯೆಗಳನ್ನು ಬಗೆಹರಿಸಲು ಸಾಧ್ಯವಿದೆಯೇ? ಎಂದು ಅವರು ಪ್ರಶ್ನಿಸುವುದರ ಮೂಲಕ ವಾಗ್ದಾಳಿ ನಡೆಸಿದರು.
ಈ ಸಂದರ್ಭದಲ್ಲಿ ಮಾಗಡಿ ಶಾಸಕ ಮಂಜುನಾಥ್ ಸೇರಿದಂತೆ ಸ್ಥಳೀಯ ಮುಖಂಡರು ಹಾಜರಿದ್ದರು.












Click it and Unblock the Notifications