ಶಿರಾ ಫಲಿತಾಂಶದಿಂದ ಮನಸ್ಸಿಗೆ ನೋವಾಗಿದೆ ಎಂದ ನಿಖಿಲ್ ಕುಮಾರಸ್ವಾಮಿ
ರಾಮನಗರ, ನವೆಂಬರ್ 14: ಶಿರಾ ಮತ್ತು ರಾಜರಾಜೇಶ್ವರಿ ನಗರ ಕ್ಷೇತ್ರಗಳ ಉಪ ಚುನಾವಣೆಯಲ್ಲಿ ಜನರ ತೀರ್ಪನ್ನು ಒಪ್ಪಿಕೊಳ್ಳುತ್ತೇವೆ, ಆದರೆ ಸೋಲು ಕಂಡಿರುವುದು ನೋವು ತಂದಿದೆ ಎಂದು ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಬೇಸರ ವ್ಯಕ್ತಪಡಿಸಿದರು.
ರಾಮನಗರದ ನಗರ ಜಾನಪದ ಲೋಕದ ಬಳಿಯ ಕಾಮತ್ ಲೋಕ ರುಚಿ ಹೋಟೆಲ್ ನಲ್ಲಿ ಕರೆದಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಶಿರಾ ಮತ್ತು ಆರ್.ಆರ್ ನಗರ ಕ್ಷೇತ್ರಗಳ ಮತದಾರರ ತೀರ್ಪನ್ನು ಗೌರವಿಸುತ್ತೆವೆ. ಹಿಂದಿನ ಉಪ ಚುನಾವಣೆಗಳನ್ನು ಗಮನಿಸಿದರೆ ಮತದಾರರು ಅಡಳಿತ ಪಕ್ಷಗಳ ಪರವಾಗಿ ನಿಂತಿದ್ದಾರೆ ಎಂದರು.
""ಕುಮಾರಣ್ಣ ರಾಜ್ಯದ ಮುಖ್ಯಮಂತ್ರಿಯಾಗಿದ್ದಾಗ, ರೈತರ ಸಾಲಮನ್ನಾ ಮತ್ತು ರಾಜ್ಯದ ಅಭಿವೃದ್ಧಿ ವಿಚಾರದಲ್ಲಿ ಕೊಟ್ಟ ತಮ್ಮ ಮಾತನ್ನು ಉಳಿಸಿಕೊಂಡಿದ್ದಾರೆ. ಆದರೂ ಜನ ನಮ್ಮನ್ನು ತಿರಸ್ಕಾರ ಮಾಡಿದ್ದಾರೆ ಎಂಬುದನ್ನು ಆತ್ಮಾವಲೋಕನ ಮಾಡಿಕೊಳ್ಳುತ್ತೇವೆ ಎಂದು ತಿಳಿಸಿದರು.

ನಮ್ಮ ತಾತ ಹಾಗೂ ನಮ್ಮ ತಂದೆ ಸೇರಿದಂತೆ ನಮ್ಮ ಕುಟುಂಬಕ್ಕೆ ರಾಮನಗರ ಜಿಲ್ಲೆಯ ಜನತೆ ರಾಜಕೀಯ ಜನ್ಮ ನೀಡಿದ್ದಾರೆ. ಹಾಗಾಗಿ ನಮ್ಮ ಕುಟುಂಬದ ಕರ್ಮಭೂಮಿ ರಾಮನಗರದಿಂದ ನನ್ನ ರಾಜ್ಯ ಪ್ರವಾಸವನ್ನು ಪ್ರಾರಂಭಿಸುತ್ತಿದ್ದೇನೆ ಎಂದು ನಿಖಿಲ್ ಕುಮಾರಸ್ವಾಮಿ ಹೇಳಿದರು.
ರಾಜ್ಯಾದ್ಯಂತ ಪ್ರವಾಸ ಮಾಡಿ, ಯುವ ಕಾರ್ಯಕರ್ತರ ಸಂಘಟನೆ ಮಾಡುವುದು ನನ್ನ ಪ್ರವಾಸದ ಮುಖ್ಯ ಉದ್ದೇಶ. ನಾನು ಯುವ ಘಟಕದ ರಾಜ್ಯಾಧ್ಯಕ್ಷನಾಗಿ ಮುಂಬರುವ ಗ್ರಾಮ ಪಂಚಾಯತಿ, ತಾಲ್ಲೂಕು ಪಂಚಾಯತಿ ಮತ್ತು ಜಿಲ್ಲಾ ಪಂಚಾಯತಿ ಚುನಾವಣೆಯಲ್ಲಿ ಯುವಕರಿಗೆ ಆದ್ಯತೆ ಕೊಡುವುದಾಗಿ ಎಂದರು.

2023ರ ಸಾರ್ವತ್ರಿಕ ಚುನಾವಣೆಯಲ್ಲಿ ಪಕ್ಷವನ್ನು ಅಧಿಕಾರಕ್ಕೆ ತರುವುದು ನನ್ನ ಗುರಿ . 2023ರ ಸಾರ್ವತ್ರಿಕ ಚುನಾವಣೆ ವೇಳೆ ತಾವು ರಾಮನಗರದಿಂದ ಸ್ಪರ್ಧಿಸುವ ಉದ್ದೇಶವಿಲ್ಲ. ಆದರೆ ಈ ಬಗ್ಗೆ ಈಗಲೇ ಏನೂ ಹೇಳಲಾಗದು, ನಾನು ಚುನಾವಾಣೆಯಲ್ಲಿ ಸ್ಪರ್ಧೆ ಮಾಡುತ್ತೇನೆ ಅಥವಾ ಇಲ್ಲ ಎಂಬುದನ್ನು ಕಾದು ನೋಡಿ ಎಂದು ಜೆಡಿಎಸ್ ರಾಜ್ಯ ಘಟಕದ ಅಧ್ಯಕ್ಷ ಕುಮಾರಸ್ವಾಮಿ ಹೇಳಿದರು.












Click it and Unblock the Notifications